‘ಜಂತು ಹುಳು ರಹಿತ ಮಕ್ಕಳು - ಆರೋಗ್ಯವಂತ ಮಕ್ಕಳು’; ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ
admincoorgdaily

ಮಡಿಕೇರಿ ಫೆ.10:-ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣ ಜಿಲ್ಲಾ ಮಟ್ಟದ “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಸತೀಶ್ ಕುಮಾರ್ ಅವರು ಗಿಡಕ್ಕೆ ನೀರುರೆರೆಯುವ ಮೂಲಕ ಉದ್ಘಾಟಿಸಿದರು. ನಂತರ ಮಕ್ಕಳಿಗೆ ಜಂತು ಹುಳು ನಿವಾರಕ ಮಾತ್ರೆಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ”ವು 1-19 ವರ್ಷ ವಯಸ್ಸಿನ ಮಕ್ಕಳಿಗೆ ಜಂತುಹುಳು ನಿರ್ಮೂಲನೆ ಮಾಡಿ ಅವರನ್ನು ಹುಳು ಮುಕ್ತರನ್ನಾಗಿಸುವುದು, ಇದರಿಂದ ಮಕ್ಕಳಲ್ಲಿ ಬರಬಹುದಾದ ಅಪೌಷ್ಠಿಕತೆ, ರಕ್ತಹೀನತೆ, ಆಯಾಸ, ಹಸಿವಾಗದಿರುವುದು, ಕಲಿಕೆಯಲ್ಲಿ ನಿರಾಸಕ್ತಿ, ದೈಹಿಕ, ಮಾನಸಿಕ ಬೆಳವಣಿಗೆಯ ಕುಂಠಿತವನ್ನು ತಡೆಯುತ್ತದೆ ಎಂದು ತಿಳಿಸಿದರು.
ಅಲ್ಲದೇ ದೇಶಾದ್ಯಂತ ಫೆಬ್ರವರಿ, 10 ರಂದು “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಈ ದಿನ ಮಾತ್ರೆ ತೆಗೆದುಕೊಳ್ಳಲಾಗದ ಮಕ್ಕಳಿಗೆ ಫೆಬ್ರವರಿ, 16 ರಂದು ಮಾಪ್ಅಪ್ ಡೇ ಕಾರ್ಯಕ್ರಮ ನಡೆಸುತ್ತಿದ್ದು, ಎಲ್ಲಾ ಮಕ್ಕಳಿಗೆ ಆಲ್ಬೆಂಡಜೋಲ್- 400 ಎಂ.ಜಿ. ಮಾತ್ರೆಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದು ಡಾ,ಸತೀಶ್ ಕುಮಾರ್ ಅವರು ವಿವರಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಮಾತನಾಡಿ ಫೆಬ್ರವರಿ 10 ರಂದು ನಡೆಯುವ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,31,783 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 24,408, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 1,448, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 82,232 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 10,760, ಡಿಗ್ರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 6,517, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 2916 ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು 3,502 ಇರುತ್ತಾರೆ ಇವರು ಈ ಮಾತ್ರೆಯ ಸದುಪಯೋಗ ಪಡಿಸಿಕೊಳ್ಳಲು ಕೋರಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ|| ಮಧುಸೂದನ್ ಅವರು ಮಾತನಾಡಿ ಈ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಂತರ್ ಇಲಾಖೆಗಳ ಸಹಭಾಗಿತ್ವ ಅವಶ್ಯವಾಗಿದೆ. ಇದರಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೋರೇಷನ್, ಸ್ಕೌಟ್ಸ್ ಆಂಡ್ ಗೈಡ್ಸ್ ಇಲಾಖೆಗಳ ಸಹಭಾಗಿತ್ವ ಅಗತ್ಯವಾಗಿರುತ್ತದೆ. ಎನ್ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಆಲ್ಬೆಂಡಜೋಲ್ 400 ಎಂಜಿ ಮಾತ್ರೆಗಳನ್ನು ಈಗಾಗಲೇ ಪ್ರಾ.ಆ.ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದೆ ಹಾಗೂ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಎಲ್ಲಾ ಶಾಲೆ/ ಕಾಲೇಜು ನೋಡಲ್ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪ್ರಾ.ಆ.ಸುರಕ್ಷಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಎನ್ಡಿಡಿ ಕಾರ್ಯಕ್ರಮದ ಬಗ್ಗೆ ತರಭೇತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ|| ಸನತ್ಕುಮಾರ್ ಅವರು ಮಾತನಾಡಿ ಫೆ.10 ರಂದು ನಡೆಯುವ “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ” ಹಾಗೂ ಫೆಬ್ರವರಿ, 16 ರಂದು ನಡೆಯುವ ಮಾಪ್ ಅಪ್ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವಂತೆ ಕೋರಿದರು.
ಶಾಲಾ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಜಗದೀಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಮಾತನಾಡಿ “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ”ವನ್ನು ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ನಡೆಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.
ಪ್ರಾರಂಭದಲ್ಲಿ ಶಾಲಾ ಮಕ್ಕಳು ಪ್ರಾರ್ಥಸಿದರು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ ಸ್ವಾಗತಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ನಿರೂಪಿಸಿದರು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಮುಖ್ಯೋಪಧ್ಯಾಯರಾದ ಭವಾನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ ಶಾಂತಿ, ಮನೋರೋಗ ತಜ್ಞರಾದ ಡಾ|| ಡೆವಿನ್, ದೇವರಾಜ್, ಡಿ.ಪಿ.ಎಂ, ನಿಲೀಮ್, ಬಿ.ಪಿ.ಎಂ, ಶ್ರೀನಾಥ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಹಾಗೂ ಮೇಲ್ವಿಚಾರಕರುಗಳು, ಶಾಲಾ ಶಿಕ್ಷಕ ವೃಂದ, ನಗರ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪತ್ರಿಕಾ ವರದಿಗಾರರು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು.