ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 240 ಗ್ರಾಂ ಚಿನ್ನಾಭರಣ ಕಳವು: ಮಹಿಳೆ ಬಂಧನ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 240 ಗ್ರಾಂ ಚಿನ್ನಾಭರಣ ಕಳವು: ಮಹಿಳೆ ಬಂಧನ
ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ, ಜ. 12: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯಿಂದ ಸುಮಾರು ₹22 ಲಕ್ಷ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ತಳಗವಾರ ಗ್ರಾಮದ ನಿವಾಸಿ ವನಜಾಕ್ಷಿ ದೇವಸ್ಥಾನಕ್ಕೆ ತೆರಳುವ ಸಲುವಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನಿಂದ ಸೂಲಿಬೆಲೆಗೆ ಹೋಗಲು ಬಸ್ ಹತ್ತಿದ್ದ ವೇಳೆ ಕಳವು ನಡೆದಿದೆ ಎನ್ನಲಾಗಿದೆ. ಬಸ್‌ನ ಗದ್ದಲವನ್ನು ದುರುಪಯೋಗಪಡಿಸಿಕೊಂಡು ಆರೋಪಿಣಿ ಚಿನ್ನಾಭರಣ ಕಳವು ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂಧ್ರಪ್ರದೇಶದ ಕುಪ್ಪಂ ಮೂಲದ ಮೀನಾಕ್ಷಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತೆಯಿಂದ ಕಳವುಗೊಳಿಸಿದ 240 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.