ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

ವಿರಾಜಪೇಟೆ:ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆ. 12ರಂದು ಹಮ್ಮಿಕೊಂಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗಾಗಿ ನಗರದಲ್ಲಿ ಮುಷ್ಕರದ ಕುರಿತಾದ ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಹೋರಾಟಕ್ಕೆ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಅಧಿಕೃತ ಚಾಲನೆ ನೀಡಲಾಯಿತು.

ಮಡಿಕೇರಿಯ ಹಳೆಯ ಖಾಸಗಿ ಬಸ್ಸು ನಿಲ್ಧಾಣದಿಂದ ಡಿಸಿ ಕಛೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆಯಲ್ಲಿ ಎಲ್ಲ ಕಾರ್ಮಿಕ ಸಂಘಟನೆಯವರು ಭಾಗವಹಿಸುವಂತೆ ಮನವಿ ಮಾಡಿ ಮಾತನಾಡಿದ ಕಾರ್ಮಿಕ ಸಂಘಟನೆಯ ಹಿರಿಯ ಮುಖಂಡರಾದ ಡಾ. ಐ.ಆರ್ ದುರ್ಗಾಪ್ರಸಾದ್ ಅವರು ಕೇಂದ್ರ ಸರ್ಕಾರವು ರೈಲ್ವೆ, ಬಂದರು, ಕಲ್ಲಿದ್ದಲು ಗಣಿ, ತೈಲ ಮತ್ತು ರಕ್ಷಣಾ ಉತ್ಪಾದನೆಯಂತಹ ಪ್ರಮುಖ ಕ್ಷೇತ್ರಗಳನ್ನು ವಿದೇಶಿ ಮತ್ತು ದೇಶೀಯ ಕಾಪೆರ್Çರೇಟ್ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದೆ. ಇದರಿಂದಾಗಿ ಉದ್ಯೋಗ ಭದ್ರತೆ ನಾಶವಾಗುತ್ತಿದ್ದು, ನಿರುದ್ಯೋಗ ಸಮಸ್ಯೆ ಗಂಭೀರ ಸ್ವರೂಪ ತಾಳಿದೆ. ಸಾರ್ವಜನಿಕ ಸೇವೆಗಳ ದರ ಏರಿಕೆಯಾಗಿ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  ಕೇಂದ್ರದಲ್ಲಿ ಮೂರು ಬಾರಿ ಅಧಿಕಾರ ಹಿಡಿದಿರುವ ನರೇಂದ್ರ ಮೋದಿ ಸರಕಾರ 2025ರಲ್ಲಿ ನವಂಬರ್‍ನಲ್ಲಿ 4 ಕಾರ್ಮಿಕ ವಿರೋಧಿ ಕಾಯ್ದೆಗಳನ್ನ ಜಾರಿಗೆ ತಂದಿದ್ದು, ಇದರ ಜೊತೆಗೆ ನರೇಗಾ ಯೋಜನೆ ಮತ್ತೆ ಚಾಲನೆ ನೀಡುವುದು, ಭೂ ಸ್ವಾಧೀನ ಕಾಯ್ದೆಯನ್ನ ಹಿಂಪಡೆಯಬೇಕು, ಎಪಿಎಂಸಿ ಕಾಯ್ದೆ, ಜಾನುವಾರು ಸಂರಕ್ಷಣಾ ತಿದ್ದುಪಡಿ, ವಿದ್ಯುತ್ ಖಾಸಗಿಕರಣ ಕೈ ಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು ಸಾರ್ವಜನಿಕರ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

  ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ ಸಾಬು ಮಾತನಾಡಿ ಕೇಂದ್ರ ಸರಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆ ರದ್ದುಪಡಿಸಬೇಕು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಯುವಜನತೆ ಮತ್ತು ಶ್ರಮಿಕ ವರ್ಗವನ್ನು ಆಧುನಿಕ ಗುಲಾಮಗಿರಿಗೆ ತಳ್ಳಲಿದೆ. ಕಾರ್ಮಿಕರು, ರೈತರು, ಯುವ ಸಮುದಾಯ, ಮಹಿಳಾ ಸಂಘಟನೆಗಳು, ಹಾಗೂ ಎಲ್ಲಾ ದುಡಿಯುವ ವರ್ಗದ ಜನ ತಮ್ಮ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತರಾಗಿ ಮುಷ್ಕರಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

  ವೇತನ ಸಂಹಿತೆ ನಿಯಮಗಳಲ್ಲಿಯೂ ಕಾರ್ಮಿಕರ ಹಕ್ಕುಗಳನ್ನು ಮೊಕಟುಗೊಳಿಸಲಾಗಿದೆ. ವಸತಿ ಸೌಕರ್ಯದ ಹೆಸರಿನಲ್ಲಿ ಯಾವುದೇ ಮಾನದಂಡಗಳಿಲ್ಲದೆ ವೇತನ ಕಡಿತಗೊಳಿಸಲು ಮಾಲೀಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಬ್ಯಾಂಕೇತರ ಡಿಜಿಟಲ್ ವ್ಯಾಲೆಟ್‍ಗಳ ಮೂಲಕ ವೇತನ ಪಾವತಿಗೆ ಅವಕಾಶ ನೀಡಿರುವುದು ಕಾರ್ಮಿಕರನ್ನು ಶೋಷಣೆಗೆ ತಳ್ಳಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

   ಈ ಸಂದರ್ಭ ಸಿಐಟಿಯು ಪದಾಧಿಕಾರಿಗಳಾದ ಶಾಜಿ ರಮೇಶ್, ಖಾಸಿಂ, ಕೆ.ಕೆ.ಹರಿದಾಸ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಪದ್ಮಿನಿ ಶ್ರೀಧರ್, ಡಿವೈಎಫ್‍ಐ ಜಿಲ್ಲಾ ಮುಖಂಡ ಸಾದಿಖ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರುಗಳು ಇದ್ದರು.