ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ: ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಬೇಬಿಮ್ಯಾಥ್ಯೂ ಶ್ಲಾಘನೆ

ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್  ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ:  ಸಂಸ್ಥೆಯ ಚಟುವಟಿಕೆಗಳ ಬಗ್ಗೆ  ಬೇಬಿಮ್ಯಾಥ್ಯೂ ಶ್ಲಾಘನೆ

ಕುಶಾಲನಗರ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಂಸ್ಥೆಯ ವಾರ್ಷಿಕ ಲೆಕ್ಕಪತ್ರವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ಮಂಡಿಸಿದರು. ಸ್ಥಳೀಯ ಸಂಸ್ಥೆಯ ವಾರ್ಷಿಕ ವರದಿಯನ್ನು ಸಂಸ್ಥೆಯ ಕೋಶಾಧಿಕಾರಿ ನರೇಶ್ ಮಂಡಿಸಿದರು. ಸಭೆಯಲ್ಲಿ ಮಂಡಿಸಿದ ಲೆಕ್ಕಪತ್ರ ಹಾಗೂ ವಾರ್ಷಿಕ ವರದಿಯನ್ನು ಸಭೆಯು ಒಕ್ಕೊರಲಿನಿಂದ ಅಂಗೀಕರಿಸಿತು. ಸಭೆಯಲ್ಲಿ ಭಾಗವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿವೆ ಎಂದರು.

 ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯು ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಮಕ್ಕಳು ಹಾಗೂ ಸಮುದಾಯಕ್ಕೆ ಉತ್ತಮ ಸಂದೇಶ ನೀಡುತ್ತಿರುವುದು ಶ್ಲಾಘನೀಯವಾದುದು ಎಂದು ಬೇಬಿಮ್ಯಾಥ್ಯೂ ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ,ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಕಲಿಸಲಾಗುತ್ತಿದೆ.‌ಸಂಸ್ಥೆಯ ಚಟುವಟಿಕೆಗಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಸದಾ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಸ್ಕೌಟ್, ಗೈಡ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸಂಸ್ಥೆಯ ವತಿಯಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಕೈಗೊಂಡ ವಿವಿಧ ಕಾರ್ಯಕ್ರಮಗಳು/ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಕಳೆದ ಡಿಸೆಂಬರ್ 2024 ರಲ್ಲಿ ಕುಶಾಲನಗರದಲ್ಲಿ ಯಶಸ್ವಿಯಾಗಿ ನಡೆದ ಜಿಲ್ಲಾಮಟ್ಟದ ಮಕ್ಕಳ ರ್‍ಯಾಲಿಯಲ್ಲಿ ಮಕ್ಕಳಿಗೆ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಪ್ರಸಕ್ತ ವರ್ಷದಲ್ಲಿ ಕೂಡ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು.

 ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಉತ್ತಮ ಶಿಸ್ತು, ನಾಯಕತ್ವ ಗುಣ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿದೆ ಎಂದರು. ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸಿ.ಎಂ.ಸುಲೋಚನ, ಸಂಸ್ಥೆಯ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಸಹಾಯಕ ಗೈಡ್ಸ್ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಎಸ್.ತಮ್ಮಯ್ಯ, ಉಪಾಧ್ಯಕ್ಷರಾದ ರಾಜೇಗೌಡ, ಕೆ.ಪಿ. ರಾಜು, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಇಂದಿರಾ ಮುತ್ತಣ್ಣ, ಕೋಶಾಧಿಕಾರಿ ಎನ್.ಎಸ್.ನರೇಶ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸ್ಕೌಟ್ಸ್ ಕಮೀಷನರ್ ತರಬೇತುದಾರ ಬಿ.ಕೆ. ಗಣೇಶ್, ಸ್ಕೌಟ್ಸ್ ಮಾಸ್ಟರ್ ಡಿ.ವಿ.ಗಣೇಶ್, ಕೊಡಗು ವಿಶ್ವವಿದ್ಯಾಲಯದ ಪ್ರೊ.ಮಂಜುಳ, ಸ್ಕೌಟ್ಸ್, ಗೈಡ್ಸ್ ನ ಶಿಕ್ಷಕರು, ಶಿಕ್ಷಕಿಯರು ಇದ್ದರು.