ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Jul 19, 2025 - 20:46
 0  49
ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್

ಮೈಸೂರು: ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ. ಈ ಗ್ಯಾರಂಟಿ ಯೋಜನೆಗಳು ಸುಳ್ಳು, ಇದರಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿಗಳಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕೆ ಮಾಡಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗಿಂತ ಮೊದಲೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ಬಿಹಾರದಲ್ಲೂ ನಮ್ಮದೇ ಗ್ಯಾರಂಟಿ ಯೋಜನೆ ನಕಲು ಮಾಡಿದ್ದಾರೆ ಎಂದು ಟೀಕಿಸಿದರು. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣ ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಆ ಮೂಲಕ ರಾಜ್ಯದ ಜನರ ಋಣ ತೀರಿಸಲಾಗುತ್ತಿದೆ ಎಂದರು. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ನಾವು ಮಾಡಿದ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ನಾವು ಇಲ್ಲಿಗೆ ಜನರಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನಮ್ಮ ಸರ್ಕಾರ ಬಂದ ನಂತರ ನಾನು ಹಾಗೂ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಐದು ವರ್ಷದ ಗೃಹಲಕ್ಷ್ಮೀ ಯೋಜನೆ ಹಣವನ್ನು ತಾಯಿಯ ಪಾದಕ್ಕೆ ಅರ್ಪಿಸಿ ಆಶೀರ್ವಾದ ಪಡೆದೆವು ಎಂದು ಹೇಳಿದರು.

 ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಡೆಸಿದರು. ನಮ್ಮ ರಾಜ್ಯದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಸಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು ಎಂದರು. "ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ, ಸರ್ಕಾರದಲ್ಲಿ ಹಣವಿಲ್ಲ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಕಲ್ಯಾಣ ಕರ್ನಾಟಕಕ್ಕೆ ನಮ್ಮ ಸರ್ಕಾರ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ ನೀಡುತ್ತಿದೆ. ಬೀದರ್ ನಲ್ಲಿ 2025 ಕೋಟಿ ಮೊತ್ತದ ಯೋಜನೆಗೆ ಚಾಲನೆ ನೀಡಿದ್ದೇವೆ. ಇತ್ತೀಚೆಗೆ ಇಂಡಿಯಲ್ಲಿ 3400 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದೆವು. ಇಂದು ಮೈಸೂರಿನಲ್ಲಿ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನದಲ್ಲಿ 74 ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದರು. "ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿ, 3 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಯೋಜನೆ, ವಿಜಯನಗರದಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳು, ನಂದಿ ಬೆಟ್ಟದಲ್ಲಿ ಸುಮಾರು 2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇವೆ. ನಾವು ಭಾವನೆ ಮೇಲೆ ರಾಜಕೀಯ ಮಾಡುವುದಿಲ್ಲ, ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ" ಎಂದು ತಿಳಿಸಿದರು. "ನಮ್ಮ ಸರ್ಕಾರ ದೇವಾಲಯವಿದ್ದಂತೆ. ಆರೋಗ್ಯ, ನೆಮ್ಮದಿಯ ಬದುಕು, ಉತ್ತಮ ಬೆಳೆ, ಆರ್ಥಿಕ ಪ್ರಗತಿ ಹೊಂದಲು ದೇವರಲ್ಲಿ ಪ್ರಾರ್ಥಿಸಲು ನಾವು ದೇವಾಲಯಕ್ಕೆ ಹೋಗುತ್ತೇವೆ. ಕಳೆದ 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾವೇರಿ ತಾಯಿ ಜೂನ್ ತಿಂಗಳಲ್ಲಿ ತುಂಬಿದ್ದಾಳೆ. ನಾನು ಹಾಗೂ ಸಿಎಂ ಜೂನ್ 23 ರಂದು ಬಂದು ಕಾವೇರಿ ತಾಯಿಗೆ ಬಾಗಿನ ಅರ್ಪಿಸಿ ಪೂಜಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ಬಂದರೆ ಬರಗಾಲ ಬರುತ್ತದೆ ಎಂಬ ಬಿಜೆಪಿ ಅಪಪ್ರಚಾರ ನುಚ್ಚು ನೂರಾಗಿದೆ" ಎಂದರು. ಈ ಕಾರ್ಯಕ್ರಮ ಮಾಡಿರುವುದು ಚುನಾವಣೆಗಾಗಿ ಅಲ್ಲ. ನೀವು ಕೊಟ್ಟ ಶಕ್ತಿಯಿಂದ ನಿಮ್ಮ ಋಣ ತೀರಿಸಲು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ನ್ಯಾಯ ಒದಗಿಸಿಕೊಟ್ಟಿರುವುದನ್ನು ತಿಳಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ನಮ್ಮನ್ನು ಟೀಕಿಸಬಹುದು. ನಿಂದಕರು ಇದ್ದಾಗ ಮಾತ್ರ ನಾವು ಎಚ್ಚರಿಕೆಯಿಂದ ಕೆಲಸ ಮಾಡಲು ಸಾಧ್ಯ. ಯಾರು ಎಷ್ಟೇ ಟೀಕೆ ಮಾಡಿದರೂ ನಮ್ಮ ಸರ್ಕಾರ ಮುಂದೆ ಸಾಗುತ್ತಿರುತ್ತದೆ ಎಂದು ಹೇಳಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0