ಅರಣ್ಯ ಭವನಕ್ಕೆ ಮುತ್ತಿಗೆ ಯತ್ನಿಸಿ ಬಿಜೆಪಿ ಪ್ರತಿಭಟನೆ
admincoorgdaily

ಮಡಿಕೇರಿ: ಮಾನವ-ವನ್ಯಜೀವಿ ಸಂಘರ್ಷದಿಂದ ಜಿಲ್ಲೆಯಲ್ಲಿ ಪ್ರಾಣಹಾನಿ ಹೆಚ್ಚುತ್ತಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ಅರಣ್ಯಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟಿಸಿದರು.
ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಲು ಯತ್ನಿಸಿದ ಕೆಲವರನ್ನು ಪೊಲೀಸರು ತಡೆದರು. ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಅಧಿಕಾರಿಗಳು ಕಡತದಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಜೀವಕ್ಕೆ ಬೆಲೆಯಿಲ್ಲವೇ ಎಂದು ಪ್ರಶ್ನಿಸಿದರು. ಆ.20ರೊಳಗೆ ಅರಣ್ಯ ಸಚಿವರು ಬಂದು ಸಭೆ ನಡೆಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, 2 ದಿನದಲ್ಲಿ ಆನೆ ಸೆರೆ ಹಿಡಿಯುವ ಭರವಸೆ ಈಡೇರಿಲ್ಲ. ಪಿಸಿಸಿಎಫ್ ತಕ್ಷಣ ಭೇಟಿ ನೀಡಬೇಕು ಎಂದರು. ನರಿಯಂದಡ ಗ್ರಾಮಸ್ಥರು 35 ಆನೆಗಳ ಹಾವಳಿಯಿಂದ ಭಯದಲ್ಲಿ ಬದುಕುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು. ಸಿಎಫ್ ಸೋನಲ್ ವೃಷ್ಠಿ, 3 ಆನೆ ಸೆರೆ ಮತ್ತು 15 ಕಿ.ಮೀ ರೈಲ್ವೇ ಬ್ಯಾರಿಕೇಡ್ ಪ್ರಸ್ತಾವನೆ ಬಗ್ಗೆ ಮಾಹಿತಿ ನೀಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ವಕ್ತಾರ ಅರುಣ್ ಕುಮಾರ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬೀನ್ ದೇವಯ್ಯ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.