Kodagu

ಸೆ.9ರಂದು ಮಳೆಹಾನಿ ಪ್ರದೇಶಕ್ಕೆ ಬಿಜೆಪಿ ಭೇಟಿ

admincoorgdaily

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೇ ತಿಂಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಕಾಫಿ, ಕಾಳುಮೆಣಸು, ಅಡಕೆ ಬೆಳೆಗಳು ನೆಲಕಚ್ಚುತ್ತಿದ್ದರೂ ಸರ್ಕಾರ, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳದ ಪರಿಣಾಮ ಬಿಜೆಪಿ ವತಿಯಿಂದ ಸೆ.9ರಂದು ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ತಯಾರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ತಿಳಿಸಿದರು.

 ಕಳೆದ 4ತಿಂಗಳಿನಿಂದ ಎಡೆಬಿಡದೇ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಪರಿಣಾಮ ಕಾಫಿ, ಮೆಣಸು ಉದುರುತ್ತಿವೆ. ಅರೆಭಿಕ ಸಂರ್ಪೂಣ ನಾಶವಾಗಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಕಾರ್ಯಕ್ರಮಕ್ಕೆ ಮಾತ್ರ ಹಾಜರಾಗಿ ಸಭೆ ನಡೆಸಿ ತೆರಳುತ್ತಿದ್ದಾರೆ. ಯಾವುದೇ ಪರಿಹಾರ ಕ್ರಮ ಕಂಡುಬರುತ್ತಿಲ್ಲ. ಈ ಹಿನ್ನೆಲೆ ಬಿಜೆಪಿ ವತಿಯಿಂದ ಅತ್ಯಧಿಕ ಮಳೆಯಾಗಿರುವ ಶಾಂತಳ್ಳಿ, ಸೂರ್ಲಬ್ಬಿ, ಹಮ್ಮಿಯಾಲ, ಗಾಳಿಬೀಡು, ಮುಟ್ಲು, ಚೇರಂಬಾಣೆ, ಚೆಟ್ಟಿಮಾನಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ವರದಿ ತಯಾರಿಸಲಾಗುವುದು ಎಂದು ತಿಳಿಸಿದರು. ಮಾಜಿ ಸಚಿವ ಮತ್ತು ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಕಾಂಗ್ರೆಸ್ ರೈತ ವಿರೋದಿ ಸರ್ಕಾರವಾಗಿದೆ. ರೈತರಿಗೆ ಬೇಕಾದ ಸೌಲಭ್ಯ ಕೊಡುತ್ತಿಲ್ಲ. ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಕ್ರಮವಾಗಿ ೩೮ ಕೋಟಿ, ೬೬ ಕೋಟಿ, ೧೦೪೦ ಕೋಟಿ ಪರಿಹಾರ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದಿಂದ ಬಿಡಿಗಾಸು ಸಿಗುತ್ತಿಲ್ಲ. ಆದ್ದರಿಂದ ಪಕ್ಷದ ವತಿಯಿಂದ ಸರ್ವೆ ಮಾಡಿ ಜಿಲ್ಲಾಧಿಕಾರಿ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

 ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ಮಡಿಕೇರಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.

Do not copy and paste the news. Copyright issues will be raised.