ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಶಾಸಕ ಎ.ಎಸ್ ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ತೆನ್ನಿರ ಮೈನಾ ಅವರಿಗೆ ‌ಕ್ಲೀನ್ ಚಿಟ್

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಶಾಸಕ ಎ.ಎಸ್ ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ತೆನ್ನಿರ ಮೈನಾ ಅವರಿಗೆ ‌ಕ್ಲೀನ್ ಚಿಟ್

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ (40) ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಹೆಣ್ಣೂರು ಠಾಣೆಯ ಪೊಲೀಸರು, ನ್ಯಾಯಾಲಯಕ್ಕೆ ಬಿ–ವರದಿ ಸಲ್ಲಿಸಿದ್ದಾರೆ.

ಕೊಡಗು ಜಿಲ್ಲೆಯ ಕಾಂಗ್ರೆಸ್‌ ವಿರಾಜಪೇಟೆ ಕ್ಷೇತ್ರ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ, ಶಾಸಕ ಡಾ. ಮಂತರ್‌ಗೌಡ ಹಾಗೂ ರಾಜೀವ್‌ ಗಾಂಧಿ ಪಂಚಾಯತ್‌ ರಾಜ್ ಸಂಘಟನೆಯ ಕೊಡಗು ಜಿಲ್ಲಾ ಅಧ್ಯಕ್ಷ ತೆನ್ನೀರಾ ಮೈನಾ ಅವರು ವಿನಯ್‌ ಅವರಿಗೆ ಕಿರುಕುಳ ನೀಡಿ, ಬೆದರಿಕೆ ಹಾಕಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂಬುದಾಗಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೂವರಿಗೂ ತನಿಖಾಧಿಕಾರಿಗಳು ಕ್ಲೀನ್‌ ಚಿಟ್‌ ನೀಡಿದ್ದಾರೆ. ‘ಕಿರುಕುಳ ಹಾಗೂ ಬೆದರಿಕೆಯಿಂದ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ವಿನಯ್‌ ಅವರ ಸಹೋದರ ಕೆ.ಎಸ್‌.ಜೀವನ್ ದೂರು ನೀಡಿದ್ದರು. 

ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ. ಯಾವುದೇ ಪುರಾವೆಗಳು ಸಿಕ್ಕಿಲ್ಲ. ದೂರಿನಲ್ಲಿ ಉಲ್ಲೇಖಿಸಿದ್ದ ವ್ಯಕ್ತಿಗಳ ಮೊಬೈಲ್‌ ಕರೆಗಳ ವಿವರ ಪಡೆಯಲಾಗಿತ್ತು. ತಜ್ಞರ ಮೂಲಕವೂ ಕರೆಗಳ ವಿವರವನ್ನು ವಿಶ್ಲೇಷಣೆಗೆ ಒಳಪಡಿಸಲಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಮೊಬೈಲ್‌ ಸಂಖ್ಯೆಗೆ ಯಾವುದೇ ಬೆದರಿಕೆ ಕರೆಗಳು ಹೋಗಿಲ್ಲ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.