ಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ
ಮಡಿಕೇರಿ:- ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ 85 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬಂಧಿಸಿದಂತೆ 10, ಸೆಸ್ಕ್ 3, ಆಹಾರ 3, ರಸ್ತೆ ಸೇರಿದಂತೆ ವಿವಿಧ ಇಲಾಖೆಗಳ 46 ಒಟ್ಟು 85 ಅರ್ಜಿಗಳು ಸಲ್ಲಿಕೆಯಾದವು. ಪ್ರತಿಯೊಬ್ಬ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕರು, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಅರ್ಜಿ ಪರಿಶೀಲಿಸಿ ಒಂದು ವಾರದಲ್ಲಿ ಬಗೆಹರಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು, ವಿಳಂಭ ಮಾಡಬಾರದು ಎಂದು ಎ.ಎಸ್.ಪೊನ್ನಣ್ಣ ಅವರು ತಾಕೀತು ಮಾಡಿದರು. ಸಭೆ ಆರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಸಾರ್ವಜನಿಕರ ಸಮಸ್ಯೆಯನ್ನು ಕಚೇರಿ ಹಂತದಲ್ಲಿಯೇ ಪರಿಹರಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಕಾನೂನು ಬದ್ಧವಾಗಿ ಸಮಸ್ಯೆಗಳನ್ನು ತೀರ್ಮಾನಿಸಿ, ಬಗೆಹರಿಸಬೇಕು. ಯಾರನ್ನೂ ಕೂಡ ಸತಾಯಿಸಬಾರದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ವಿಧಾನಸಭಾ ಕ್ಷೇತ್ರವಾರು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. 'ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಸರ್ಕಾರ ಪ್ರಯತ್ನಿಸಿದೆ.
ಆ ದಿಸೆಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಶಾಸಕರು ಕಿವಿಮಾತು ಹೇಳಿದರು.' ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ನೆರವಂಡ ಉಮೇಶ್, ಪ್ರಮುಖರಾದ ಬಾಲಚಂದ್ರ ನಾಯರ್, ತಹಶೀಲ್ದಾರರಾದ ಶ್ರೀಧರ, ತಾ.ಪಂ.ಇಒ ಶೇಖರ್ ಇತರರು ಇದ್ದರು. ಸುಮಾರು 36 ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಇಲಾಖೆ ಸಂಬಂಧ ಸಾರ್ವಜನಿಕರ ಅಹವಾಲಿಗೆ ಸ್ಪಂದಿಸಿದರು.