ಜ.11ರಂದು ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ

ಜ.11ರಂದು ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ

ಮಡಿಕೇರಿ: ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ ಜ.೧೧ರಂದು ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಲಿದೆ. ಅಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ತಮ್ಮ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ೯.೩೦ ಗಂಟೆಗೆ ಗುರು ಸದನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಉದ್ದೇಶಿತ ಶತಸಂಭ್ರಮ ಕಟ್ಟಡದ ನಕಾಶೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ ಅವರು ಬೆಳಿಗ್ಗೆ ಸೌಹಾರ್ದ ಸೌರಭ ಕಟ್ಟಡದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಗೌಡ ಸಮಾಜದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಮರಣ ಸಂಚಿಕೆ ಬಿಡುಗಡೆ, ಕ್ಯಾಲೆಂಡರ್ ಮತ್ತು ಉಡುಗೊರೆ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ, ಗೌರವಾಧ್ಯಕ್ಷ ನಾಗೇಶ್.ಕೆ, ಕೊಡಗು ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಡಿ.ರವಿಕುಮಾರ್, ನಿವೃತ್ತ ಪ್ರಾಂಶುಪಾಲ ಪಟ್ಟಡ ಎ.ಪೂವಣ್ಣ ಹಾಗೂ ಮಂಗಳೂರಿನ ಕೆಐಒಸಿಎಲ್ ಲಿಮಿಟೆಡ್ ನ ಡೆಪ್ಯೂಟಿ ಜನರಲ್ ಮ್ಯಾನೇಜರ್ ತೇಲಪಂಡ ಎಂ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

೧೦೦ ಸಹಕಾರಿಗಳಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ೧೦೦ ಹಿರಿಯ ಸಹಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಶತಸಂಭ್ರಮ ಕಾರ್ಯಕ್ರಮದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಸಂಘದ ಸ್ಥಾಪಕ ಕಾರ್ಯದರ್ಶಿ ತೇಲಂಪಡ ಎಂ.ಕಾರ್ಯಪ್ಪ ಅವರ ಕುಟುಂಬ ಹಾಗೂ ಸ್ಥಾಪಕ ಅಧ್ಯಕ್ಷ ಪಟ್ಟಡ ಎಂ.ಉತ್ತಪ್ಪ ಅವರ ಕುಟುಂಬದ ಸದಸ್ಯರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಶತಸಂಭ್ರಮದ ಪ್ರಯುಕ್ತ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ ಎಂದು ಹೆಚ್.ಎಸ್.ಚೇತನ್ ಮಾಹಿತಿ ನೀಡಿದರು.

ಸಂಘದ ನಿರ್ದೇಶಕ ಹೆಚ್.ಎನ್.ಮಂಜುನಾಥ್ ಮಾತನಾಡಿ, ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ೧೦೦ ವರ್ಷಗಳನ್ನು ಪೂರೈಸಿದ ಹೆಮ್ಮೆಯ ಸಂಸ್ಥೆಯಾಗಿದೆ. ಅದ್ಧೂರಿಯ ಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲು ಕಳೆದ ಒಂದು ತಿಂಗಳಿನಿಂದ ಅಧ್ಯಕ್ಷ ಎಚ್.ಎಸ್.ಚೇತನ್ ಅವರ ನೇತೃತ್ವದಲ್ಲಿ ಶ್ರಮಿಸಲಾಗುತ್ತಿದೆ. ಸರ್ವರೂ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಚ್.ಆರ್.ಮುತ್ತಪ್ಪ, ನಿರ್ದೇಶಕರುಗಳಾದ ಪುದಿಯನೆರವನ ರೇವತಿ ರಮೇಶ್, ಎನ್.ಸಿ.ದೇವಾನಂದ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ.ನಟೇಶ ಉಪಸ್ಥಿತರಿದ್ದರು.