ಕಕ್ಕಬ್ಬೆ-ಕುಂಜಿಲ ಗ್ರಾಮದ ಕೆ.ಪಿ.ಬಾಣೆ ಸರ್ಕಾರಿ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ಮಕ್ಕಳ ಸಂತೆ ಹಾಗೂ ಆಹಾರ ಮೇಳ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಕೆ.ಪಿ. ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಮಕ್ಕಳ ಸಂತೆ ಹಾಗೂ ಆಹಾರ ಮೇಳ ವಿವಿಧ ಪೌಷ್ಟಿಕ ಆಹಾರಪದಾರ್ಥಗಳ ಪ್ರದರ್ಶನ ಹಾಗೂ ಮಾರಾಟದೊಂದಿಗೆ ಯಶಸ್ವಿಯಾಗಿ ನಡೆಯಿತು.
ಶಾಲೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಎಲ್ ಕೆಜಿ, ಯುಕೆಜಿ ವಿದ್ಯಾರ್ಥಿಗಳು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಫಿಯಾ ಅವರು ಮಾತನಾಡಿ ಜೀವನದಲ್ಲಿ ಮಕ್ಕಳ ವ್ಯವಹಾರ ಜ್ಞಾನ ವೃದ್ಧಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ. ಅದರಂತೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವೃದ್ಧಿಯಾಗಲಿದ್ದು ಪೋಷಕರು ತಮ್ಮ ವಿದ್ಯಾರ್ಥಿಗಳ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಸವಿತ ಅವರು ಕಾರ್ಯಕ್ರಮದ ಆಯೋಜನೆಯ ಕುರಿತು ಮಾಹಿತಿ ನೀಡಿ ಸರ್ವರನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಾವು ಮನೆಯಲ್ಲಿ ಬೆಳೆದ ತರಕಾರಿಗಳು,ತಂಪು ಪಾನೀಯ, ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಸ್ಥಳದಲ್ಲೇ ತಯಾರಿಸಿ,ಪ್ರದರ್ಶಿಸುವ ಮೂಲಕ ಮಾರಾಟ ಮಾಡಿದರು. ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳು ಮಾರಾಟಕಿಟ್ಟ ವಸ್ತುಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಿದರು.
ಈ ಸಂದರ್ಭ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಅಬ್ದುಲ್ ಅಫೀಲ್, ಎಸ್ ಡಿಎಂಸಿ ಸದಸ್ಯರು, ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.