ಮಾದಾಪುರದಲ್ಲಿ ಗಮನ ಸೆಳೆದ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆ

ಮಾದಾಪುರದಲ್ಲಿ ಗಮನ ಸೆಳೆದ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆ

ಸುಂಟಿಕೊಪ್ಪ, ಡಿ.16: : ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಮಾದಾಪುರ ಕ್ಲಸ್ಟರ್ ಕೇಂದ್ರದ ವತಿಯಿಂದ ಮಾದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಗಳಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಹಾಗೂ ಕಲೋತ್ಸವ ಸ್ಪರ್ಧೆ ಏರ್ಪಡಿಸಲಾಗಿತ್ತು.

 ವಿವಿಧ ವೇಷಭೂಷಣಗಳನ್ನು ತೊಟ್ಟು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ ವಿದ್ಯಾರ್ಥಿ ಗಳು ಪ್ರೇಕ್ಷಕರ ಗಮನ ಸೆಳೆದರು. ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಪೊನ್ನಣ್ಣ, ಮಕ್ಕಳ ಇಂತಹ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶಿಕ್ಷಕರ ಜತೆ ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

 ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಲಸ್ಟರ್ ಸಿ ಆರ್ ಪಿ ಟಿ.ಈ. ಮಂಜುನಾಥ್ , ಮಕ್ಕಳ ಕಲಾ ಪ್ರತಿಭೆಗಳು ಅನಾವರಣಗೊಳ್ಳಲು ಇಂತಹ ಸ್ಪರ್ಧೆಗಳು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು. ಶಾಲಾ ಮುಖ್ಯ ಶಿಕ್ಷಕಿ ಎ. ಉಷಾ ಮತ್ತು ಪಿಡಿಓ ರವಿ ಮಾತನಾಡಿದರು. ಶಿಕ್ಷಕಿ ಜ್ಞಾನೇಶ್ವರಿ ನಿರ್ವಹಿಸಿದರು.

 ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್.ಉಮಾದೇವಿ, ಸಿ ಆರ್ ಪಿಗಳಾದ ಟಿ.ಈ.ವಿಶ್ವನಾಥ್, ಶಿಕ್ಷಕರಾದ ಎ.ಎಂ.ಭರತ್, ಬಿಪಿನ್, ಎಸ್.ಆರ್.ಶಿವಲಿಂಗ, ಇತರರು ಇದ್ದರು.

 ಗ್ರಾಮ ಪಂಚಾಯ್ತಿ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು , ವಿವಿಧ ಶಾಲೆಯ ಶಿಕ್ಷಕರು ಇದ್ದರು. ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶಾಲಾ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಪ್ರೇಕ್ಷಕರ ಗಮನ ಸೆಳೆದರು. ವಿದ್ಯಾರ್ಥಿಗಳು ಛದ್ಮವೇಷ ಸ್ಪರ್ಧೆ, ರಂಗೋಲಿ, ಚಿತ್ರಕಲೆ,ಅಭಿನಯ, ಕವನ ವಾಚನ, ಕವ್ವಾಲಿ, ಗಝಲ್, ಧಾರ್ಮಿಕ ಪಠಣ, ಜಾನಪದ ಗೀತೆ, ಆಶುಭಾಷಣ, ಪ್ರಬಂಧ, ಭಾಷಣ, ಚರ್ಚಾಸ್ಪರ್ಧೆ ಮತ್ತು ರಸಪ್ರಶ್ನೆ , ಜಾನಪದ ನೃತ್ಯ ಹಾಗೂ ಭರತ ನಾಟ್ಯ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದರು. ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಮಕ್ಕಳು ಮಣ್ಣಿನಿಂದ ವಿವಿಧ ಕಲಾಕೃತಿಗಳನ್ನು ರಚಿಸಿ ಗಮನ ಸೆಳೆದರು. ಕ್ಲಸ್ಟರ್ ವ್ಯಾಪ್ತಿಯ 15 ಶಾಲೆಗಳಿಂದ ಆಗಮಿಸಿದ್ದ ಶಿಕ್ಷಕರು , ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕ್ಲಸ್ಟರ್ ವ್ಯಾಪ್ತಿಯ 15 ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರುಗಳು, ಪೋಷಕರು ಉಪಸ್ಥಿತರಿದ್ದರು.