ಕಾಡಾನೆ ದಾಳಿಗೆ ಹಸು ಬಲಿ

ಕಾಡಾನೆ ದಾಳಿಗೆ ಹಸು ಬಲಿ

ಸಿದ್ದಾಪುರ; ನೆಲ್ಯಹುದಿಕೇರಿ ಗ್ರಾಮದ ನಾಲ್ಕನೇ ವಿಭಾಗದ ಶೇಖರ್ ಅವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎಂಟು ತಿಂಗಳ ಗರ್ಭಿಣಿ ಹಸುವನ್ನು ಕಾಡಾನೆ ತುಳಿದು ಕೊಂದ ಘಟನೆ ಸೋಮವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ನಡೆದಿದೆ.

 ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೈನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿರುವ ರೈತ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ವಿಶೇಷವಾಗಿ ಕಾಫಿ ತೋಟಗಳಲ್ಲಿ ಅವುಗಳ ಸಂಚಾರ ಹೆಚ್ಚಾಗಿದೆ. ಇದರಿಂದ ತೋಟ ಕಾರ್ಮಿಕರ ಸುರಕ್ಷತೆ ಪ್ರಶ್ನಾರ್ಥಕವಾಗಿದ್ದು, ಕೆಲಸಕ್ಕೆ ಹೋಗಲು ಕಾರ್ಮಿಕರು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಡಾನೆಗಳನ್ನು ತಕ್ಷಣ ಅರಣ್ಯ ಪ್ರದೇಶಕ್ಕೆ ಅಟ್ಟುವಂತೆ ಅರಣ್ಯ ಇಲಾಖೆಯು ಕ್ರಮ ಕೈಗೊಳ್ಳಬೇಕು. ಜೊತೆಗೆ, ನಷ್ಟಕ್ಕೊಳಗಾದ ರೈತ ಕುಟುಂಬಕ್ಕೆ ತ್ವರಿತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಹಾಗೂ ಜೆಡಿಎಸ್ ಸಮಿತಿ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಗ್ರಾಮಸ್ಥರನ್ನು ಒಗ್ಗೂಡಿಸಿ ಅರಣ್ಯ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.