ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಿ ಬೆಳೆಸಬೇಕು: ಸಂಸದ ಯದುವೀರ್ ಒಡೆಯರ್

ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಿ ಬೆಳೆಸಬೇಕು: ಸಂಸದ ಯದುವೀರ್ ಒಡೆಯರ್

ಮಡಿಕೇರಿ: ನಮ್ಮ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಣೆ ಮಾಡುವುದರ ಜತೆಗೆ ಉಳಿಸಿಬೆಳೆಸುವ ಕೆಲಸ ಮಾಡಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು.

ನಗರದ ಕಾವೇರಿ ಹಾಲ್‌ದ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಓಣಾಘೋಷಂ ಓಣಂಸದ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕರಾವಳಿ ಭಾಗದ ಸಂಸ್ಕೃತಿಗಳು ಎಲ್ಲರಿಗೂ ಮಾದರಿಯಾಗಿದೆ. ಅದೇ ರೀತಿ, ಭಾರತ ಹಲವು ಸಂಸ್ಕೃತಿ ಇರುವ ದೇಶವಾಗಿದ್ದು, ಹಲವು ಸಂಸ್ಕೃತಿ ಮತ್ತು ಪಾರಂಪರೆಯಿಂದ ಭಾರತ ಗುರುತಿಸಿಕೊಂಡಿದೆ. ಅದೇ ರೀತಿ ಇಂದು ಧರ್ಮದ ರಕ್ಷಣೆ ಅಗತ್ಯವಾಗಿದ್ದು, ಸಮಾಜಬಾಂಧವರು ನಮ್ಮ ಸಂಸ್ಕೃತಿ, ಪಾರಂಪರೆಯನ್ನು ಮುಂದಿನ ಪೀಳಿಗೆಗ ಉಳಿಸಿಬೆಳೆಸುವ ಕೆಲಸ ಮಾಡಬೇಕಾಗಿದೆ ಎಂದರು.

ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಪ್ರೀತಿ, ವಾತ್ಸಲ್ಯ ಜತೆಗೆ ಎಲ್ಲರನ್ನು ಒಂದೇ ರೀತಿ ಕಾಣುವುದೇ ಓಣಂ ಹಬ್ಬ. ಓಣಂ ಕೇರಳ ರಾಜ್ಯದ ವಿಶಿಷ್ಠ ಹಾಗೂ ಪವಿತ್ರವಾದ ಹಬ್ಬವನ್ನು ಕೊಡಗು ಜಿಲ್ಲೆಯಲ್ಲಿ ತಲೆತಲಾಂತರದಿಂದ ಆಚರಿಸಲಾಗುತ್ತಿದೆ. ಆಚರಣೆ ಮೂಲಕ ಸಮಾಜದವರನ್ನು ಸಂಘಟನೆ ಮಾಡಲಾಗುತ್ತಿರುವುದು ಶ್ಲಾಘನೀಯ ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧಮೇಂದ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರ ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಹಿಂದೂ ಮಲಯಾಳಿ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ಸ್ಥಾಪಕ ಅಧ್ಯಕ್ಷ ಕೆ.ಎಸ್.ರಮೇಶ್, ಸಂಘದ ಉಪಾಧ್ಯಕ್ಷ ವಿಜಯ್ ಕುಮಾರ್, ತಾಲೂಕು ಸಂಘಗಳ ಅಧ್ಯಕ್ಷರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.