ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ;ಎಂ.ಜಿ.ಮೋಹನ್ ದಾಸ್

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ;ಎಂ.ಜಿ.ಮೋಹನ್ ದಾಸ್

ಮಡಿಕೇರಿ ಏ.29:-ಫಲಾನುಭವಿಗಳ ಹಿತರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯ ಆಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸುವ ಮೂಲಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ತಲುಪಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಹೇಳಿದ್ದಾರೆ.  

ನಗರದ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಬುಧವಾರ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,270 ಪಡಿತರ ಚೀಟಿ ಇದ್ದು, 1,20,974 ಒಟ್ಟು ಫಲಾನುಭವಿಗಳಿದ್ದಾರೆ. ಅದರಲ್ಲಿ 1902 ಎಎವೈ ಪಡಿತರ ಚೀಟಿ ಇದ್ದು, 7569 ಎಎವೈ ಫಲಾನುಭವಿಗಳು ಇದ್ದಾರೆ. 21,697 ಪಿಹೆಚ್‍ಹೆಚ್ ಪಡಿತರ ಚೀಟಿ ಇದ್ದು, 70,196 ಫಲಾನುಭವಿಗಳು, 14,671 ಎನ್‍ಪಿಹೆಚ್‍ಹೆಚ್ ಪಡಿತರ ಚೀಟಿ ಇದ್ದು, 43,206 ಫಲಾನುಭವಿಗಳಿದ್ದಾರೆ ಎಂದು ಆಹಾರ ನಿರೀಕ್ಷಕರಾದ ವಿ.ಪಿ.ವೀಣಾ ಅವರು ಸಭೆಗೆ ಮಾಹಿತಿ ನೀಡಿದರು. 

ಅಲ್ಲದೇ ಮಡಿಕೇರಿ ತಾಲ್ಲೂಕಿನಲ್ಲಿರುವ ಅನರ್ಹ ಫಲಾನುಭವಿಗಳ ಸಂಖ್ಯೆ 1375 ಆಗಿದ್ದು, ವೈದ್ಯಕೀಯ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸುವುದನ್ನು ಮತ್ತು ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮಾಡುವ ಪ್ರಕ್ರೀಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದಾಯ ತೆರಿಗೆ ಪಾವತಿದಾರರೆಂದು ಅನರ್ಹಗೊಂಡಿದ್ದ ಬಿಪಿಎಲ್ ಪಡಿತರ ಫಲಾನುಭವಿಗಳಲ್ಲಿ 168 ಫಲಾನುಭವಿಗಳು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಾಗಿರುತ್ತಾರೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಅದರಲ್ಲಿ 151 ಪಡಿತರ ಚೀಟಿಗಳನ್ನು ಎಪಿಎಲ್ ಪಡಿತರ ಚೀಟಿಯಿಂದ ಬಿಪಿಎಲ್ ಪಡಿತರ ಚೀಟಿಗೆ ಬದಲಾಯಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿ.ಪಿ.ವೀಣಾ ಅವರು ತಿಳಿಸಿದರು.

ಹೋಟೆಲ್‍ಗಳಿಗೆ ಗ್ಯಾಸ್ ಸಿಲಿಂಡರ್‍ಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ ಅವರು, ಮಡಿಕೇರಿಯಲ್ಲಿ ಯಾವುದೇ ಗ್ಯಾಸ್ ಏಜೆನ್ಸಿಗಳಿಂದ ಗ್ಯಾಸ್ ಸರಬರಾಜು ಆಗಿರುವುದಿಲ್ಲ. ಮಡಿಕೇರಿ ತಾಲ್ಲೂಕಿನ ಏಜೆನ್ಸಿಯವರಿಗೆ ಗೃಹಬಳಕೆಯ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‍ಗಳನ್ನು ಗ್ಯಾಸ್ ಏಜೆನ್ಸಿಯವರು ಕಾಳಸಂತೆಯಲ್ಲಿ ಮಾರದಂತೆ ಇಲಾಖೆಯಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಬಿವೃದ್ಧಿ ಯೋಜನಾಧಿಕಾರಿ ಸಿ.ಪಿ.ಸವಿತ ಮಾತನಾಡಿ, ಫೆಬ್ರವರಿಯಲ್ಲಿ 29ನೇ ಕಂತು ನೀಡಲಾಗಿದ್ದು, 30,641 ಫಲಾನುಭವಿಗಳ ಖಾತೆಗೆ 6,12,82,000 ಮೊತ್ತ ಪಾವತಿಯಾಗುವ ಮೂಲಕ ಶೇಕಡವಾರು ಸಾಧನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 

ಗ್ಯಾರಂಟಿ ಯೋಜನೆಯ ಸದಸ್ಯರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಅವರು ಮಾತನಾಡಿ, ಅಶ್ವಮೇಧ ಬಸ್‍ಗಳಲ್ಲಿ ಚಾಲಕರೇ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದು ಪ್ರಯಾಣಿಕರಿಗೆ ತೊಂದರೆ ಆಗಿದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು. 

ಅಲ್ಲದೇ ಹಮ್ಮಿಯಾಲಕ್ಕೆ ಸೂಕ್ತವಾಗಿರುವ ಸರ್ಕಾರಿ ಬಸ್ ನೀಡುವಂತೆ ಮನವಿ ಮಾಡಿದ ಅವರು ಈ ಪ್ರದೇಶದಲ್ಲಿ ನೆಟ್‍ವರ್ಕ್ ಸಮಸ್ಯೆ ಇರುವುದರಿಂದ ಬಸ್ ಕೆಟ್ಟುಹೋದಲ್ಲಿ ಪ್ರಯಾಣಿಕರಿಗೆ, ಚಾಲಕರಿಗೆ ಸಮಸ್ಯೆ ಎದುರಾಗಲಿದೆ. ಆದ್ದರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ಪ್ರತಿನಿಧಿ ಕೆ.ಎಸ್.ದಯಾನಂದ ಮಾತನಾಡಿ, ಬೆಂಗಳೂರಿನಿಂದ ಮಂಗಳೂರಿಗೆ ರಾತ್ರಿ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್‍ಗಳು ಬಸ್ ನಿಲ್ದಾಣಕ್ಕೆ ಹೋಗಲು ಸೂಚಿಸಲಾಗಿದೆ. ಅಲ್ಲದೆ ರಾತ್ರಿ ವೇಳೆಯಲ್ಲಿ ಸಂಚಾರ ನಿಯಂತ್ರಕರನ್ನು ನಿಯೋಜಿಸಲು ಮೇಲಾಧಿಕಾರಿಯವರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು.

ಮರಗೋಡು ಗ್ರಾಮಕ್ಕೆ ಬೆಳಗ್ಗೆ 7 ಗಂಟೆಗೆ ತೆರಳುವ ಬಸ್ ಮಡಿಕೇರಿ ಬಸ್ ನಿಲ್ದಾಣಕ್ಕೆ ಹೋಗಿ ಬರುವಂತೆ ನಿರ್ವಾಹಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಮಡಿಕೇರಿಯಿಂದ ಸುಳ್ಯಕ್ಕೆ ತೆರಳುವ ಶಟಲ್ ಬಸ್‍ಗಳು ಕಾಟಕೇರಿ, ಮದೆನಾಡು, 2ನೇ ಮೊಣ್ಣಂಗೇರಿ, ಜೋಡುಪಾಲದಲ್ಲಿ ಬಸ್ ನಿಲ್ಲಿಸುವಂತೆ ನಿರ್ವಾಹಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅವರು ಮಾತನಾಡಿ, ಶಕ್ತಿ ಯೋಜನೆ ಬಂದಮೇಲೆ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಯುವನಿಧಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು, ಹಣ ಪಾವತಿಯಲ್ಲಿ ವಿದ್ಯಾರ್ಥಿಗಳಿಗೆ ವಂಚನೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಮುಂದಿನ ದಿನಗಳಲ್ಲಿ ತಾಲ್ಲೂಕಿನ ಯಾವುದೇ ಕಾಲೇಜುಗಳಲ್ಲಿ ಯುವನಿಧಿ ಯೋಜನೆಯ ಅರಿವು ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸುವ ಮುನ್ನ ಕಡ್ಡಾಯವಾಗಿ ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಂದು ಅವರನ್ನು ಅಧಿಕೃತವಾಗಿ ಆಹ್ವಾನಿಸಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು.

ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ ಮಾತನಾಡಿ, ಫಲಾನುಭವಿಗಳ ಖಾತೆಗೆ ಈಗಾಗಲೇ ಹಣ ಜಮೆ ಮಾಡಲಾಗಿದ್ದು, ನೋಂದಣಿ ಪ್ರಕ್ರಿಯೆ ಮುಗಿಯುತ್ತ ಬಂದಿದೆ. ಮುಂದಿನ ದಿನಗಳಲ್ಲಿ ಕಾಲೇಜುಗಳಿಗೆ ಭೇಟಿ ನೀಡಿ ಮಾಹಿತಿ ನೀಡಲಾಗುವುದು. ಈ ಸಂದರ್ಭ ಅಧಿಕೃತವಾಗಿ ಆಹ್ವಾನಿಸಿ ಕಾರ್ಯಕ್ರಮ ಆಯೋಜಿಸುವುದಾಗಿ ತಿಳಿಸಿದರು. 

ಹೊಸದಾಗಿ ಫಲಾನುಭವಿಗಳ ನೋಂದಣಿಯಾದ ಮಾಹಿತಿಯನ್ನು ಸಿದ್ದಪಡಿಸಲಾಗಿದೆ. ಆದರೆ, ಯೋಜನೆಯಿಂದ ಡಿಲೀಟ್ ಆದ ಹಾಗೂ ಡಿಬಿಟಿ ಆಗದೇ ಬಾಕಿ ಇರುವ ಫಲಾನುಭವಿಗಳ ಮಾಹಿತಿಯು ಪ್ರಸ್ತುತ ಇಲಾಖಾ ತಂತ್ರಾಂಶದಲ್ಲಿ ಲಭ್ಯವಿರುವುದಿಲ್ಲ. ಈ ಮಾಹಿತಿಯನ್ನು ಒದಗಿಸುವಂತೆ ಮುಖ್ಯ ಕಚೇರಿಗೆ ಕೋರಲಾಗಿದೆ. ಮಾಹಿತಿ ಸ್ವೀಕೃತವಾದ ತಕ್ಷಣವೇ ಮುಂದಿನ ಸಭೆ ಗಮನಕ್ಕೆ ಮಂಡಿಸಲಾಗುವುದು ಎಂದು ತಿಳಿಸಿದರು.

ತಾ.ಪಂ.ಇಒ ಮಾತನಾಡಿ, ಶೀಘ್ರದಲ್ಲಿ ಪ್ರಚಾರ ನಡೆಸಿ ವಾರಕ್ಕೆ ಒಂದರಂತೆ ಕಾರ್ಯಕ್ರಮ ರೂಪಿಸುವಂತೆ ಸಲಹೆ ನೀಡಿದರು.

ಗೃಹಜ್ಯೋತಿಗೆ ಸಂಬಂಧಿಸಿದಂತೆ ಮಾತನಾಡಿದ ಸೆಸ್ಕ್ ಎಇ ಎಚ್.ಬಿ.ಚೈತ್ರ ಮಾತನಾಡಿ, ನಾಪೋಕ್ಲು ಭಾಗದಲ್ಲಿ ಗದ್ದೆಯ ಮಧ್ಯೆ ಹಾದುಹೋಗಿದ್ದ ವಿದ್ಯುತ್ ಮಾರ್ಗವನ್ನು ರಸ್ತೆ ಬದಿಗೆ ಸ್ಥಳಾಂತರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಅಲ್ಲದೆ ವಿಭಾಗೀಯ ಮಟ್ಟದಲ್ಲಿ ನೌಕರರ ವರ್ಗಾವಣೆಗೆ ಅವಕಾಶವಿರುವುದಿಲ್ಲ. ಗ್ರಾಹಕರ ಕರೆಗಳನ್ನು ಸ್ವೀಕರಿಸಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳನ್ನು ನಿಗದಿತ ಕಾಲಮಿತಿಯೊಳಗೆ ಬಗೆಹರಿಸುವಂತೆ ಮೇಲಾಧಿಕಾರಿಯವರಿಂದ ನಿರ್ದೇಶನ ನೀಡಲಾಗಿದೆ ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಇದ್ದ ಹಳೆ ಕಂಬಗಳನ್ನು ತೆರವುಗೊಳಿಸಲಾಗಿದೆ. ವಿಭಾಗೀಯ ಮಟ್ಟದಲ್ಲಿ ನೌಕರರ ವರ್ಗಾವಣೆಗೆ ಅವಕಾಶ ಇಲ್ಲದಿರುವುದರಿಂದ ಗ್ರಾಹಕರ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಲು ಮತ್ತು ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಅನುಷ್ಠಾನ ಸಮಿತಿ ಸದಸ್ಯ ಎಚ್.ಪಿ.ರಘು ಮಾತನಾಡಿ, ಟರ್ಫ್ ಮೈದಾನದಲ್ಲಿ ಹಳೆ ವಿದ್ಯುತ್ ಕಂಬಗಳಿದ್ದು, ಅದನ್ನು ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು.

ಮತ್ತೋರ್ವ ಸದಸ್ಯ ಬಿ.ಜಿ.ಕೌಶಿಕ್ ಕುಟ್ಟಯ್ಯ ಮಾತನಾಡಿ, ರಸ್ತೆ ಬದಿಯಲ್ಲಿ ಕಂಬಗಳನ್ನು ಅಳವಡಿಸಲಾಗುತ್ತಿದ್ದು, ಇಲಾಖೆ ಈ ಬಗ್ಗೆ ಗಮನ ಹರಿಸಿ ಕಂಬಗಳನ್ನು ಅಳವಡಿಸುವಾಗ ಅಂತರ ಕಾಯ್ದುಕೊಳ್ಳಬೇಕು ಎಂದರು.

ಮತ್ತೋರ್ವ ಸದಸ್ಯರಾದ ಮಿಟ್ಟು ಸೋಮಯ್ಯ ಅವರು ಮಾತನಾಡಿ, ನಾಪೋಕ್ಲು ವ್ಯಾಪ್ತಿಯಲ್ಲಿ ಆಟೋ ನಿಲ್ದಾಣದ ಮಧ್ಯದಲ್ಲಿ ವಿದ್ಯುತ್ ಕಂಬ ಇದ್ದು, ಆಟೋ ನಿಲುಗಡೆಗೆ ಚಾಲಕರಿಗೆ ಸಮಸ್ಯೆ ಎದುರಾಗಿದೆ. ಇದರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದರು. 

ಎಂ.ಇಬ್ರಾಹಿಂ ಅವರು ಮಾತನಾಡಿ, ಮಡಿಕೇರಿಯ ಅಬ್ದುಲ್‍ಕಲಾಂ, ಹಿಲ್‍ರೋಡ್ ರಸ್ತೆಯಲ್ಲಿ ಟ್ರಾನ್ಸ್‍ಫಾರಂ ರಸ್ತೆಯ ಮಧ್ಯ ಭಾಗದಲ್ಲಿದ್ದು, ಸಾರ್ವಜನಿಕ ಓಡಾಟಕ್ಕೆ, ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ. ಅದರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸೆಸ್ಕ್ ಎಇ ಎಚ್.ಬಿ.ಚೈತ್ರ ಮಾತನಾಡಿ, ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಸದಸ್ಯರಾದ ಬಿ.ಎನ್.ರಂಗಪ್ಪ, ಎ.ಎಂ.ಸೋಮಯ್ಯ, ಕೆ.ಕೆ.ರಾಜೇಶ್ವರಿ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಬಗ್ಗೆ ಹಲವು ಮಾಹಿತಿ ನೀಡಿದರು.