ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
ಮಡಿಕೇರಿ: ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಈ ಸಂದರ್ಭ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ಕೊಡಗು ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು, ಕ್ಷೇತ್ರದಲ್ಲಿ ಅತ್ಯುತ್ತಮ ಜನಪರ ಕಾರ್ಯ ಮಾಡುತ್ತಿದ್ದಾರೆ. ಒಂದೇ ಜಾತಿಗೆ ಮಾನ್ಯತೆ ನೀಡದೆ ಎಲ್ಲಾ ಜಾತಿ, ವರ್ಗದವರನ್ನು ಸಮಾನವಾಗಿ ಕಾಣುತ್ತಿದ್ದಾರೆ. ಅವರು ಸಚಿವರಾದರೆ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಬಡಜನರಿಗೆ ಅನ್ಯಾಯ ಆದ ಸಂದರ್ಭ ಪೊನ್ನಣ್ಣ ಅವರು ಸಹಕಾರಿಸುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇತ್ತೀಚೆಗೆ ಪೌರಕಾರ್ಮಿಕರ ಕುಂದುಕೊರತೆಯನ್ನು ಕೂಡ ಸಭೆ ನಡೆಸಿ ಆಲಿಸಿದ್ದಾರೆ. ಇಂತಹ ಶಾಸಕರಿಗೆ ಸಚಿವ ಸ್ಥಾನ ನೀಡುವಂತಾಗಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ವಿಜಯ್ ಕುಮಾರ್, ಜಿಲ್ಲಾಧ್ಯಕ್ಷ ಪರಮೇಶ್, ಜಿಲ್ಲಾ ಕಾರ್ಯಾಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಸಂಘಟನಾ ಕಾರ್ಯದರ್ಶಿ ವಿನೋದ್ ಇದ್ದರು.