ಸಚಿವ ಬಿ.ನಾಗೇಂದ್ರ ವಜಾಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ
admincoorgdaily

ಮಡಿಕೇರಿ: ವಾಲ್ಮೀಕಿ ನಿಗಮದ ೧೮೭ ಕೋಟಿ ಹಗರಣ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ವಜಾಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ನಡೆಸುತ್ತಿದ್ದ ೫ ದಿನಗಳ ಸರಣಿ ಪ್ರತಿಭಟನೆ ಶುಕ್ರವಾರ ಅಂತ್ಯಗೊಂಡಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾ ನಿರತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ೫ ದಿನಗಳಿಂದ ಶಾಂತಿಯುತವಾಗಿ ಹೋರಾಟ ಮಾಡಿದ್ದೇವೆ. ಸರ್ಕಾರ ಕಿವಿ ಕೊಡುತ್ತಿಲ್ಲ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ನ್ಯಾಯ ಸಿಕ್ಕಿಲ್ಲ. ಚಾರ್ಜ್ಶೀಟ್ ಆದರೂ ಕ್ಲೀನ್ ಚಿಟ್ ಇಲ್ಲದ ವ್ಯಕ್ತಿಯನ್ನು ಸಂಪುಟದಲ್ಲಿಟ್ಟುಕೊಳ್ಳುವುದು ಸಂವಿಧಾನಕ್ಕೆ ಮಾಡಿದ ಅವಮಾನ. ಇನ್ನೊಂದು ವಾರದಲ್ಲಿ ರಾಜೀನಾಮೆ ಪಡೆಯದಿದ್ದರೆ ಮುಂದಿನ ಹೋರಾಟ ನಡೆಯಲಿದೆ ಎಂದರು.
ಬಳಿಕ ಡಿಸಿ ಹೆಚ್.ಜಿ.ಸೋಮಶೇಖರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಹೋರಾಟ ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಇದ್ದರು.