ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ದಿಢೀರ್ ಭೇಟಿ

Jan 14, 2026 - 17:24
 0  412
ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ದಿಢೀರ್ ಭೇಟಿ

ಮಡಿಕೇರಿ ಜ.14:-ನಗರದ ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಬಾಲಕರ ಬಾಲಮಂದಿರದಲ್ಲಿರುವ ಮಕ್ಕಳಿಂದ ವಿದ್ಯಾಭ್ಯಾಸ, ಊಟೋಪಚಾರ, ಬಿಸಿನೀರು ವ್ಯವಸ್ಥೆ, ಗ್ರಂಥಾಲಯ ಸೌಲಭ್ಯ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಕುಂದುಕೊರತೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಲಹೆ ಮಾಡಿದರು.

 ಮೆನು ಪ್ರಕಾರ ಗುಣಮಟ್ಟದ ಆಹಾರ ಪೂರೈಸಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು. ಪ್ರತೀ ತಿಂಗಳು ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತೇಜಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿದ್ಯಾರ್ಥಿಗಳು ಪ್ರತೀ ನಿತ್ಯ ದಿನಪತ್ರಿಕೆಯನ್ನು ಓದಬೇಕು. ಗ್ರಂಥಾಲಯ ಸೌಲಭ್ಯವನ್ನು ಪಡೆದು ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ಪಾಠದ ಜೊತೆಗೆ ಆಟ ಇರಬೇಕು. ಹೆಚ್ಚು ಅಧ್ಯಯನ ಮಾಡುವುದರಿಂದ ಉನ್ನತ ವ್ಯಾಸಂಗ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.

 ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ವೃತ್ತಿಪರ ಶಿಕ್ಷಣ ಮಾಡುವತ್ತ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಕೊರಗಬಾರದು. ಛಲ ಮತ್ತು ಆತ್ಮವಿಶ್ವಾಸ ಇದ್ದಲ್ಲಿ ಯಶಸ್ಸುಗಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಸತತ ಪ್ರಯತ್ನ ಅಗತ್ಯ ಎಂದು ಹೇಳಿದರು.

ಇಂದಿನ ಆಧುನಿಕ ಯುಗದಲ್ಲಿ ಬುದ್ದಿವಂತಿಕೆಗೆ ಆದ್ಯತೆ ಇದೆ. ಆ ನಿಟ್ಟಿನಲ್ಲಿ ಹೆಚ್ಚಿನ ಅಧ್ಯಯನ ಅಗತ್ಯ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಮತ್ತು ಮೊರಾರ್ಜಿ ದೇಸಾಯಿ, ಏಕಲವ್ಯ ವಸತಿ ಶಾಲೆಗಳ ವ್ಯಾಪ್ತಿಯಲ್ಲಿ ಮೆನು ಪ್ರಕಾರ ಗುಣಮಟ್ಟದ ಆಹಾರ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ದಿನಪತ್ರಿಕೆಯನ್ನು ಕಡ್ಡಾಯವಾಗಿ ತರಿಸಬೇಕು.

 ವಿದ್ಯಾರ್ಥಿಗಳು ದಿನಪತ್ರಿಕೆಯನ್ನು ಓದಲು ಉತ್ತೇಜಿಸಬೇಕು. ಗ್ರಂಥಾಲಯ ಬಳಕೆಗೆ ಅವಕಾಶ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಮಕ್ಕಳ ರಕ್ಷಣಾಧಿಕಾರಿಗಳಾದ ಸಚಿನ್ ಸುವರ್ಣ, ಇರ್ಷಾದ್, ಸಂಸ್ಥೆಯ ಮೇಲ್ವಿಚಾರಕರಾದ ಸತ್ಯಭಾಮ, ಪವಿತ್ರ, ಇತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1