ಡಾ. ಬಾಬು ಜಗಜೀವನ್ರಾಂ ಜಯಂತಿ; ಮಡಿಕೇರಿಯಲ್ಲಿ ಬಾಬೂಜಿ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸಿ: ಡಾ.ಮಂತರ್ ಗೌಡ
ಮಡಿಕೇರಿ ಏ.05:- ರಾಷ್ಟ್ರದ ಅಪರೂಪದ ರಾಜಕೀಯ ಮುತ್ಸದ್ಧಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಅಧಿಕಾರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ.
ಈಗಾಗಲೇ ಕುಶಾಲನಗರದಲ್ಲಿ ಬಾಬೂಜಿ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಮುಂದಾಗಲಾಗಿದೆ. ಹಾಗೆಯೇ ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಹಲವು ಸ್ಮರಣೀಯ ಕಾರ್ಯಗಳು ಆಗಬೇಕು ಎಂದು ಶಾಸಕರು ತಿಳಿಸಿದರು.
ಆಹಾರ ಮತ್ತು ಕೃಷಿ ಸಚಿವರಾಗಿ ರಾಷ್ಟ್ರದಲ್ಲಿ ಹಸಿರು ಕ್ರಾಂತಿಯನ್ನು ನಿರ್ಮಿಸಿದ ಕೀರ್ತಿ ಬಾಬು ಜಗಜೀವನ್ ರಾಮ್ ಅವರಿಗೆ ಸಲ್ಲುತ್ತದೆ ಎಂದು ಶಾಸಕರು ನುಡಿದರು. ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳು ದಾಖಲೆಯಾಗಿದ್ದು, ಸ್ಮರಣೀಯವಾಗಿದೆ ಎಂದು ಡಾ.ಮಂತರ್ ಗೌಡ ಅವರು ವಿವರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಭಾನುವಾರ ನಡೆದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರಾಗಿ ಶೋಷಿತರ ಧ್ವನಿಯಾಗಿ ಡಾ.ಬಾಬು ಜಗಜೀವನ್ ರಾಂ ಅವರ ಬದುಕು ಆದರ್ಶ ಮತ್ತು ಮಾದರಿಯಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಬಾಬು ಜಗಜೀವನ್ ರಾಂ ಅವರು ಶ್ರಮಿಸಿದ್ದು, ಇಂತಹ ಮಹಾನ್ ನಾಯಕರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.
ಕೊಡ್ಲಿಪೇಟೆಯ ಎಪಿಜೆ ಅಬ್ದಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರಾದ ಡಾ.ಕೆ.ಗುರುಸ್ವಾಮಿ ಅವರು ಮಾತನಾಡಿ ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಮುತ್ಸದ್ಧಿ ನಾಯಕರಾಗಿದ್ದು, ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಕೃಷಿ, ರಕ್ಷಣೆ, ಕಾರ್ಮಿಕ, ಹೀಗೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.
ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬರ ಪ್ರಗತಿಯಿದೆ ಎಂದು ಹೇಳುತ್ತಿದ್ದ ಬಾಬು ಜಗಜೀವನ್ ರಾಂ ಅವರು ದೇಶಕ್ಕೆ ಮಾದರಿ ಮತ್ತು ಅನುಕರಣೀಯ ರಾಜಕಾರಣಿ ಎಂದು ನುಡಿದರು. ಬಾಬು ಜಗಜೀವನ್ ರಾಂ ಅವರು ಬಿಹಾರದಲ್ಲಿ ಬಡ ಕುಟುಂಬದಲ್ಲಿ ಜನಿಸಿ ಬಾಲ್ಯ ಜೀವನವನ್ನು ಕಷ್ಟದಿಂದಲೇ ಎದುರಿಸಿದವರು.
ತಮ್ಮ ಜೀವನದುದ್ದಕ್ಕೂ ಹೋರಾಟದ ಮೂಲಕ ಬೆಳವಣಿಗೆ ಕಂಡು ರಾಜಕೀಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿಯ ವಯಸ್ಸಿನ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ ಸಾಧನೆ ಬಾಬು ಜಗಜೀವನ್ ರಾಂ ಅವರದ್ದಾಗಿದೆ ಎಂದರು. ಕಾರ್ಮಿಕ ಸಚಿವರಾಗಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹಲವು ಕಾನೂನು ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ.ಜೊತೆಗೆ ಕೃಷಿ ಸಚಿವರಾಗಿ ದೇಶದ ಆಹಾರ ಉತ್ಪಾದನೆ ಅಭಿವೃದ್ಧಿಗೊಳಿಸಿ ಹಸಿರು ಕ್ರಾಂತಿಯ ಹರಿಕಾರನೆಂದು ಜನ ಮನ್ನಣೆಗೆ ಪಾತ್ರರಾಗಿದ್ದಾರೆ ಎಂದರು.
ರೈಲ್ವೆ ಹಾಗೂ ಸಂವಹನ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು ಪ್ರತೀ ಇಲಾಖೆಯ ಸಚಿವರಾದಾಗಲು ತಮ್ಮದೇ ಆದ ಛಾಪು ಮೂಡಿಸಿದ ಕೀರ್ತಿ ಡಾ.ಬಾಬು ಜಗಜೀವನ್ ರಾಂ ಅವರಿಗೆ ಸಲ್ಲುತ್ತದೆ ಎಂದರು.
ದೇಶದ ರಕ್ಷಣಾ ಸಚಿವರಾಗಿ ದೇಶದ ಬಾಹ್ಯ ಹಾಗೂ ಆಂತರಿಕ ಭದ್ರತೆಗೆ ಭದ್ರ ಬುನಾದಿ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಕೊಡುಗೆಯನ್ನು ನೀಡಿದವರು ಎಂದು ಗುರುಸ್ವಾಮಿ ಅವರು ವಿವರಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಬಾಬು ಜಗಜೀವನ್ ರಾಮ್ ಅವರ ಬಾಲ್ಯ, ವಿದ್ಯಾಭ್ಯಾಸ, ರಾಜಕೀಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಮಾತನಾಡಿದರು.
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶಿಲ್ದಾರರಾದ ಶ್ರೀಧರ, ಪ್ರಮುಖರಾದ ಎಚ್.ಎಲ್.ದಿವಾಕರ, ಜನಾರ್ದನ, ಪ್ರೇಮ ಕೃಷ್ಣಪ್ಪ, ಮೋಹನ್ ಮೌರ್ಯ, ಗಾಯತ್ರಿ, ದೀಪಕ್ ಪೊನ್ನಪ್ಪ, ಪ್ರಸನ್ನ, ಮಹದೇವ, ಸಿದ್ದೇಶ್ವರ, ವೀರೇಂದ್ರ, ಲೋಕೋಪಯೋಗಿ ಇಇ ಪ್ರಭು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಸ್ವಾಗತಿಸಿದರು, ಪವನ್ ಕುಮಾರ್ ನಿರೂಪಿಸಿದರು, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಬಾಲಕೃಷ್ಣ ರೈ ವಂದಿಸಿದರು.