ಕೂಡಿಗೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮದ ಒಂದನೇ ತರಗತಿ ಆರಂಭ: ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ:ಶಾಸಕ ಡಾ ಮಂತರ್ ಗೌಡ
ಕುಶಾಲನಗರ: ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ನ ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಎಸ್.ಡಿ.ಎಂ.ಸಿ.ಸಹಭಾಗಿತ್ವದಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮದ ಒಂದನೇ ತರಗತಿ ಆರಂಭಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಇದೇ ವೇಳೆಯಲ್ಲಿ ತಾಲ್ಲೂಕಿನಲ್ಲಿ ಪ್ರಸಕ್ತ ವರ್ಷ 17 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮದ ಒಂದನೇ ತರಗತಿಗೆ ಡಿಜಿಟಲ್ ಮಾದರಿಯಲ್ಲಿ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕ ಡಾ ಮಂತರ್ ಗೌಡ ಮಕ್ಕಳು ನಮ್ಮ ಹೆಮ್ಮೆ, ತ್ಯಾಗಕ್ಕೂ ಸಿದ್ದ, ಎಸ್ ಡಿ ಎಂ ಸಿ ಮತ್ತು ಇಲಾಖೆಯ ವತಿಯಿಂದ ಸಹಭಾಗಿತ್ವದಲ್ಲಿ ಕೆಲಸ ಮಾಡಿದರೆ ಶಾಲೆ ಅಭಿವೃದ್ಧಿ ಆಗುತ್ತದೆ. ಆಂಗ್ಲ ಮಾಧ್ಯಮ ಉತ್ತಮ ಬೆಳವಣಿಗೆ, ಇದರಿಂದ ಮಕ್ಕಳ ಕಲಿಕೆಗೆ ಸಹಕಾರಿಯಾಗಿದೆ ಎಂದರು. ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದ ಶಾಸಕ ಡಾ ಮಂತರ್ ಗೌಡ, ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಒತ್ತು ನೀಡಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಕಾಳಜಿಯಿಂದ ರಾಜ್ಯದಲ್ಲಿ ಈ ವರ್ಷ ಹೆಚ್ಚು ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದರು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಬೇಕು ಕೊಡಗಿನಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಜಿಲ್ಲೆ ಎಂಬುದು ಹೆಮ್ಮೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಬಂದಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇಂಗ್ಲೀಷ್ ಭಾಷೆಯು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನಿವಾರ್ಯವಾಗಿದೆ. ಇದನ್ನು ನಿತ್ಯಜೀವನದಲ್ಲಿ ಕನ್ನಡದ ಜತೆಗೆ ಇಂಗ್ಲೀಷ್ ಭಾಷೆಯನ್ನು ವಿದ್ಯಾಭ್ಯಾಸಕ್ಕೆ ವಿಶೇಷ ಒತ್ತು ಕೊಡಬೇಕು ಎಂದು ಶಾಸಕರು ಹೇಳಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ. ಮಕ್ಕಳಿಂದ ದೇಶದ ಅಭಿವೃದ್ಧಿ ಆಗಬೇಕು.ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಶಿಕ್ಷಣವು ಮನುಷ್ಯನ ಬದುಕಿನ ಅಡಿಪಾಯ. ವ್ಯಕ್ತಿತ್ವವನ್ನು ಸಂಪನ್ನ, ಇಂಗ್ಲೀಷ್ ಮಾಧ್ಯಮ ಇಂಗ್ಲೀಷ್ ವ್ಯವಹಾರಿಕೆ ಮತ್ತು ಔದ್ಯೋಗಿಕ ಕ್ಷೇತ್ರ ಸೇರಿದಂತೆ ಅನಿವಾರ್ಯವಾಗಿ ಆಂಗ್ಲ ಮಾಧ್ಯಮದ ಅಗತ್ಯ ಇದೆ ಎಂದರು. ಕೂಡಿಗೆಯ ಈ ಶಾಲೆಯು ಪ್ರತಿಷ್ಠಿತ ಶಾಲೆಯಾಗಿದ್ದು, ಭವಿಷ್ಯದಲ್ಲಿ ಈ ಶಾಲೆಯು ಮತ್ತಷ್ಟು ಬೆಳೆಯಲಿ ಎಂದು ಶಶಿಧರ್ ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಈ ಬಗ್ಗೆ ಚಿಂತಿಸಿದ ಸರ್ಕಾರವು ಇರುವ ಕನ್ನಡ ಮಾಧ್ಯಮ ಶಾಲೆಯಲ್ಲೇ ಇಂಗ್ಲೀಷ್ ಮಾಧ್ಯಮ ಆರಂಭಿಸಿರುವುದರಿಂದ ದೂರದೃಷ್ಟಿ ಯೋಜನೆ.ಇದರಿಂದ ಜನಸಾಮಾನ್ಯರ ಮಕ್ಕಳು ಕೂಡ ಇಂಗ್ಲೀಷ್ ಮಾಧ್ಯಮ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು. ಸರ್ಕಾರಿ ಶಾಲೆಗಳು ಸವಾಲುಗಳನ್ನು ಎದುರಿಸುವ ಮೂಲಕ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಬೇಕಿದೆ ಎಂದು ಶಶಿಧರ್ ಹೇಳಿದರು.
ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ , ಸೋಮವಾರಪೇಟೆ ತಾಲ್ಲೂಕಿನಲ್ಲಿ 17 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗುತ್ತಿದೆ. ಇಲಾಖೆಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಒಂದು ಕಡೆ ಕನ್ನಡ ಭಾಷಾ ಪ್ರಾಥಮಿಕ ಶಾಲೆಗಳು ಮುಚ್ಚುತ್ತಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಈಗ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗಿದೆ. ತಾಲ್ಲೂಕಿನ ಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್ ಕೆ.ಜಿ. ಯಲ್ಲಿ 112 ಮಕ್ಕಳು, ಯು.ಕೆ.ಜಿ.ಯಲ್ಲಿ 128 ಮಕ್ಕಳು ಮತ್ತು ಒಂದನೇ ತರಗತಿ ಯಲ್ಲಿ 212 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಆಂಗ್ಲ ಮಾಧ್ಯಮ ಬೋಧಿಸುವ ಶಿಕ್ಷಕರಿಗೆ ಇಲಾಖೆಯ ವತಿಯಿಂದ ಉತ್ತಮ ತರಬೇತಿ ನೀಡಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಪ್ರಗತಿ ಇದೆ ಮತ್ತು ಉತ್ತಮ ಶಿಕ್ಷಕರ ತಂಡ ಇದೆ ಎಂದು ಬಿಇಓ ಭಾಗ್ಯಮ್ಮ ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಂಗ್ಲಭಾಷಾ ಜ್ಞಾನ ಬೆಳೆಸುವ ದಿಸೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಲಾಗುತ್ತಿದೆ ಎಂದರು.
ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಮಾತನಾಡಿ, ಕೂಡಿಗೆ ವ್ಯಾಪ್ತಿಯಲ್ಲಿ ಹೆಚ್ಚು ಶಿಕ್ಷಣ ಸಂಸ್ಥೆಗಳು ಇದ್ದು ಉತ್ತಮ ಶಿಕ್ಷಣ ನೀಡುತ್ತಿವೆ. ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಈಗ 2 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು, ಚಿಕ್ಕತ್ತೂರು ಮತ್ತಿತರ ಕಡೆಗಳಲ್ಲಿ ಇನ್ನೂ 2 ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಬೇಕು ಎಂದು ಮನವಿ ಮಾಡಿದರು. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಮಕ್ಕಳಲ್ಲಿ ಇಂಗ್ಲೀಷ್ ಜ್ಞಾನ ಬೆಳೆಸುವ ದಿಸೆಯಲ್ಲಿ ಆಂಗ್ಲ ಮಾಧ್ಯಮ ಸಹಕಾರಿಯಾಗಿದೆ ಎಂದರು. ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳ ದಾಖಲಾತಿ ವೃದ್ದಿ ಜತೆಗೆ ಸರ್ಕಾರಿ ಶಾಲೆಯ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ಭಾಸ್ಕರ್ ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲಾಗುತ್ತಿದ್ದು, ಇದರಿಂದ ಮಕ್ಕಳಿಗೆ ಆಂಗ್ಲ ಭಾಷೆ ಕಲಿಯಲು ಸುಲಭವಾಗುತ್ತದೆ ಎಂದರು. ಎಸ್ ಡಿ ಎಂ ಸಿ ಅಧ್ಯಕ್ಷ ಎಚ್.ಜೆ. ನಂದೀಶ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್, ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸೋಮಶೇಖರ್, ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಪಿಡಿಓ ಎಂ.ಆರ್.ಸಂತೋಷ್, ಸಿ ಆರ್ ಪಿ ಕೆ.ಶಾಂತಕುಮಾರ್, ಎಸ್.ಡಿ.ಎಂ.ಸಿ.ಸದಸ್ಯರು, ವಿವಿಧ ಶಾಲೆಗಳ ಮುಖ್ಯಸ್ಥರು, ತಾಲ್ಲೂಕಿನ ಎಲ್ಲಾ ಸಿ ಆರ್ ಪಿ ಗಳು, ಬಿಐ ಆರ್ ಟಿಗಳು, ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಇದ್ದರು ಸಿ ಆರ್ ಪಿ ಕೆ.ಶಾಂತಕುಮಾರ್ ನಿರ್ವಹಿಸಿದರು.
ಮಕ್ಕಳ ಜತೆ ಬೆರೆತ ಶಾಸಕರು:
ಆಂಗ ಮಾಧ್ಯಮ ತರಗತಿ ಆರಂಭಿಸುವ ಸಂದರ್ಭದಲ್ಲಿ ಶಾಸಕ ಡಾ ಮಂತರ್ ಗೌಡ ಅವರು ಶಾಲಾ ಮಕ್ಕಳ ಜತೆ ಬೆರೆತು ಅವರ ಕಲಿಕೆ ಮತ್ತು ಆರೋಗ್ಯದ ಕುರಿತು ಕುಶಲೋಪರಿ ವಿಚಾರಿಸಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು.