"ಹೊಟ್ಟೆಗೆ ಇಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ

Sep 3, 2025 - 23:19
Sep 3, 2025 - 23:22
 0  68
"ಹೊಟ್ಟೆಗೆ ಇಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಂಗಳೂರು:ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ ಎಂದು ಬಿ‌.ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಕನಿಷ್ಠ ಸ್ವಾತಂತ್ರ್ಯ ಯೋಧರ ಪಿಂಚಣಿಯನ್ನೂ ಕೊಡಲಾಗುತ್ತಿಲ್ಲ, ಇಂತಹ ದಯನಿಯ ಆರ್ಥಿಕ ಸ್ಥಿತಿಯಲ್ಲಿರುವ ಕಾಂಗ್ರೆಸ್ ಸರ್ಕಾರ '5 ಸೀಟರ್ ನ ಹೆಲಿಕಾಪ್ಟರ್ ಹಾಗೂ 13 ಸೀಟರ್ ಜೆಟ್' ಖರೀದಿಸಲು ಹೊರಟಿರುವುದು ಅತ್ಯಂತ ವಿಪರ್ಯಾಸ. ಇದು "ಹೊಟ್ಟೆಗೆ ಇಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ಎಂಬ ಗಾದೆ ನೆನಪಿಸುವಂತಿದೆ‌ ಎಂದು ವಿಜಯೇಂದ್ರ ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೋಜಿನ ಕಾರ್ಯಕ್ರಮಗಳು, ಸ್ವಪ್ರತಿಷ್ಠೆ ಮೆರೆಯಲು ಸಮಾವೇಶಗಳನ್ನು ಆಯೋಜಿಸಿ ಪ್ರತಿಷ್ಠೆ ಮೆರೆಯಲು ಸರ್ಕಾರದ ಖಜಾನೆ ಖಾಲಿ ಮಾಡಿದೆ. ಜನರ ತೆರಿಗೆ ಹಣದಲ್ಲಿ ದುಂದು ವೆಚ್ಚ ಮಾಡಲು ತೆರಿಗೆ ಹಾಗೂ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಸುತ್ತಲೇ ಇದೆ.

ಜನ ಅಧಿಕಾರ ಕೊಡುವುದು ಜನಸೇವೆಗಾಗಿ ಎಂಬ ಸಿದ್ಧಾಂತದ ನೆನಪು ಕಾಂಗ್ರೆಸ್ಸಿಗರಿಗೆ ಎಂದೂ ಬರುವುದಿಲ್ಲ. ರಾಜ್ಯ ಹಾಗೂ ಜನತೆಯ ಮುಂದೆ ಸಾಲು, ಸಾಲು ಸವಾಲುಗಳಿವೆ, ಜನರ ಸಂಕಷ್ಟ ವಿಪರೀತಕ್ಕೆ ಹೋಗುತ್ತಿದೆ.ಮೊದಲು ಜನರ ದುಃಖ-ದುಮ್ಮಾನಗಳಿಗೆ ಸ್ಪಂದಿಸಲಿ, ತುರ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿ, ಸದ್ಯ ವೆಚ್ಚ ಉಳಿಸುವ ನೆಪದಲ್ಲಿ ಹೆಲಿಕಾಪ್ಟರ್ ಹಾಗೂ ವಿಮಾನಗಳನ್ನು ಖರೀದಿಸುವ ಪ್ರಕ್ರಿಯೆಯಿಂದ ಹಿಂದೆ ಸರಿಯಲಿ ಎಂದು ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0