ಕಾಡಾನೆಗಳ ಹಿಂಡನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ
ಸಿದ್ದಾಪುರ :- ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆ ಶುಕ್ರವಾರ ಯಶಸ್ವಿಯಾಗಿ ನಿಯಂತ್ರಣಕ್ಕೆ ತಂದು ಕಾಡಿಗೆ ಮರಳಿಸಿತು.
ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಿಂದ ಹೊರಬಂದು ಬೆಳೆ ಹೊಲಗಳತ್ತ ಚಲಿಸುತ್ತಿದ್ದ ಒಟ್ಟು 9 ಕಾಡಾನೆಗಳ ಹಿಂಡಿನಲ್ಲಿ 2 ಮರಿ ಆನೆಗಳೂ ಇದ್ದವು. ಈ ಘಟನೆ ಗ್ರಾಮಸ್ಥರಲ್ಲಿ ಭಯ ಮತ್ತು ಆತಂಕ ಉಂಟುಮಾಡಿತ್ತು. ಸ್ಥಿತಿ ಗಂಭೀರವಾಗುತ್ತಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ, ಕಾಡಾನೆಗಳನ್ನು ಸುರಕ್ಷಿತವಾಗಿ ಮರಳಿ ಅರಣ್ಯ ಪ್ರದೇಶದತ್ತ ಓಡಿಸುವಲ್ಲಿ ಯಶಸ್ವಿಯಾದರು. ಕಾರ್ಯಾಚರಣೆ ವೇಳೆ ಶಬ್ದ ಬಾಂಬ್ಗಳು ಸೇರಿದಂತೆ ವಿವಿಧ ಸುರಕ್ಷತಾ ಕ್ರಮಗಳನ್ನು ಬಳಸಲಾಯಿತು.
ಕಾಡಾನೆಗಳ ಹಿಂಡು ಗ್ರಾಮ ಪ್ರದೇಶದಿಂದ ದೂರ ಸರಿದ ಹಿನ್ನೆಲೆಯಲ್ಲಿ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಚೆನ್ನಂಗಿ ಸೆಕ್ಷನ್ನ ಉಪವಲಯ ಅರಣ್ಯಾಧಿಕಾರಿ ಪಿ.ಟಿ. ಶಶಿ ನೇತೃತ್ವದಲ್ಲಿ ಆರ್.ಆರ್.ಟಿ.ಸಿಬ್ಬಂದಿಗಳು ಯಶಸ್ವಿಯಾಗಿ ನಡೆಸಿದರು.