ಗಂಗಾವತಿ: ಬಿಜೆಪಿಯ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ; ಹಳೆಯ ದ್ವೇಷ ಶಂಕೆ
ಗಂಗಾವತಿ, ಅಕ್ಟೋಬರ್ 8: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ (31) ಅವರ ಬರ್ಬರ ಹತ್ಯೆ ನಡೆದಿದ್ದು, ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಡರಾತ್ರಿ ನಡೆದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೆಂಕಟೇಶ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಿಂಬಾಲಿಸಿ ಗುದ್ದಿದ್ದಾರೆ ಎನ್ನಲಾಗಿದೆ. ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಅವರನ್ನು ಸ್ಥಳದಲ್ಲೇ ಹತ್ಯೆಗೈದಿದ್ದಾರೆ. ಈ ದಾರುಣ ಘಟನೆ ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಆಸ್ಪತ್ರೆ ಎದುರಿನಲ್ಲೇ ನಡೆದಿದೆ.
ಸ್ಥಳಕ್ಕೆ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ನೇತೃತ್ವದ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳು ಬಳಸಿದ ಟಾಟಾ ಇಂಡಿಕಾ ಕಾರು ಗಂಗಾವತಿಯ ಹೆಚ್ಆರ್ಎಸ್ ಕಾಲೋನಿಯಲ್ಲಿ ಪತ್ತೆಯಾಗಿದೆ.
ಹತ್ಯೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗದಿದ್ದರೂ, ಹಳೆಯ ದ್ವೇಷವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ಹಲವು ವರ್ಷಗಳಿಂದ ನಾಯಕತ್ವ ಹಾಗೂ ಪ್ರದೇಶದ ಪ್ರಭಾವದ ವಿಚಾರದಲ್ಲಿ ವೈಷಮ್ಯ ಇತ್ತು ಎಂದು ತಿಳಿದು ಬಂದಿದೆ. ಈ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಗಂಗಾವತಿ ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.