ಮಾರ್ಚ್ 11ರಿಂದ ಸರ್ಕಾರಿ ವೈದ್ಯಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ
ಮಡಿಕೇರಿ: ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮಾ.೧೧ರಿಂದ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳ ನೇತೃತ್ವದಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಎಂ.ಆನಂದ್ ತಿಳಿಸಿದ್ದಾರೆ.
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾ೧೧ರಿಂದ ೧೫ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮಾ.೧೬ರಿಂದ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೂ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧಾರಿಸಲಾಗಿದೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅರುಣ್ ಕುಮಾರ್, ನಾಗಮಣಿ, ಮಹದೇವಪ್ಪ, ಚೇತನ್, ಶ್ರೀನಾಥ್ ಇದ್ದರು.