ಮೂರ್ನಾಡು ಪ್ರೌಢಶಾಲೆಯಲ್ಲಿ'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮ
ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್), ವಿರಾಜಪೇಟೆ ತಾಲೂಕಿನ ಮೂರ್ನಾಡು ವಲಯದ ವತಿಯಿಂದ ಮೂರ್ನಾಡು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪದ್ಯಾಯರಾದ ಪ್ರಶಾಂತ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಧನಂಜಯ ಆಗೋಳಿಕಜೆ ಅವರು,"ಮಕ್ಕಳು ತಂಬಾಕು, ಸಿಗರೇಟು, ಗುಟ್ಕಾ, ಮದ್ಯಪಾನ ಮತ್ತು ಡ್ರಗ್ಸ್ನಂತಹ ಮಾದಕ ವ್ಯಸನಗಳಿಂದ ದೂರವಿರಬೇಕು. ಇವುಗಳ ಸೇವನೆಯಿಂದ ಜೀವ ಹಾಗೂ ಜೀವನ ಹಾಳಾಗುತ್ತದೆ. ಯುವಜನತೆ ಜಾಗೃತರಾದರೆ ಮಾತ್ರ ಇಂತಹ ದುಷ್ಟಪದ್ಧತಿಗಳನ್ನು ತಡೆಗಟ್ಟಲು ಸಾಧ್ಯ," ಎಂದು ಕರೆ ನೀಡಿದರು.
ಮುಂದುವರಿದು ಮಾತನಾಡಿದ ಅವರು,"ಅಪರಿಚಿತರು ನೀಡುವ ಯಾವುದೇ ವಸ್ತು ಅಥವಾ ಆಹಾರ ಪದಾರ್ಥಗಳನ್ನು ಸ್ವೀಕರಿಸಬಾರದು. ಡ್ರಗ್ಸ್ ಸೇವನೆ ಅಥವಾ ಮಾರಾಟ ಮಾಡುವುದು ಕಾನೂನುಬಾಹಿರ ಹಾಗೂ ಶಿಕ್ಷಾರ್ಹ ಅಪರಾಧವಾಗಿದ್ದು, ಇದಕ್ಕೆ ಕಠಿಣ ಜೈಲು ಶಿಕ್ಷೆಯಿದೆ," ಎಂದು ಎಚ್ಚರಿಸಿದರು. ಇದೇ ವೇಳೆ ಅವರು 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮದ ಉದ್ದೇಶ ಮತ್ತು ಖಾವಂದರ ಆಶಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವಿ.ಎಂ. ಸುಬ್ರಮಣಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಮುತ್ತಪ್ಪ, ಮೂರ್ನಾಡು ವಲಯ ಮೇಲ್ವಿಚಾರಕರಾದ ಸುಜೀರ್, ಸೇವಾ ಪ್ರತಿನಿಧಿ ಕಾವೇರಿ, ಶಾಲೆಯ ಅಧ್ಯಾಪಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
