ಹೆಬ್ಬಾಲೆ : ಶ್ರದ್ಧಾಭಕ್ತಿಯಿಂದ ಜರುಗಿದ ಗ್ರಾಮದೇವತೆ ಶ್ರೀ ಬನಶಂಕರಿ ದೇವಿಯ ವಾರ್ಷಿಕ ಹಬ್ಬ

ಹೆಬ್ಬಾಲೆ : ಶ್ರದ್ಧಾಭಕ್ತಿಯಿಂದ ಜರುಗಿದ ಗ್ರಾಮದೇವತೆ ಶ್ರೀ ಬನಶಂಕರಿ ದೇವಿಯ ವಾರ್ಷಿಕ ಹಬ್ಬ

ಕುಶಾಲನಗರ : ಸಮೀಪದ ಹೆಬ್ಬಾಲೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಹಬ್ಬ ಅದ್ದೂರಿಯಾಗಿ ನಡೆಯಿತು.

ಅಮ್ಮನವರ ಸನ್ನಿಧಿಯಲ್ಲಿ ಬೆಳಿಗ್ಗೆ 7 ಘಂಟೆಗೆ ಯಿಂದ ಗಣಪತಿ ಪೂಜೆ,ಪುಣಾಹಃ ರಕ್ಷಾಬಂಧನ ಧ್ವಜಾರೋಹಣ ನವಗ್ರಹ ಸ್ಥಾಪನೆ, ನವಗ್ರಹ ಪೂಜೆ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ದೇವಾಲಯದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನೇತೃತ್ವದಲ್ಲಿ ಶ್ರದ್ಧಾಭಕ್ತಿ ನೆರವೇರಿದವು. ದೇವಿಯ ವಾರ್ಷಿಕ ಹಬ್ಬದ ಅಂಗವಾಗಿ ಪವಿತ್ರ ಬನದಲ್ಲಿ ಬನಶಂಕರಿ ದೇವಸ್ಥಾನದಲ್ಲಿ ಬೆಳಿಗ್ಗೆ ಕಳಶ ಸ್ಥಾಪಿಸುವುದರೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ದೇವಸ್ಥಾನ ಸಮಿತಿ ಅಧ್ಯಕ್ಷ ಎಚ್.ಟಿ.ರಮೇಶ್ ಹಾಗೂ ಕಾರ್ಯದರ್ಶಿ ಎಚ್.ಟಿ.ಸೋಮಣ್ಣ ಹಾಗೂ ಸಮಿತಿ ಸದಸ್ಯರ ನೇತೃತ್ವದಲ್ಲಿ ನಡೆದವು. ಹಬ್ಬದ ಅಂಗವಾಗಿ ಜರುಗಿದ ದೇವರ ಉತ್ಸವದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಜಾತ್ರೆಯ ಅಂಗವಾಗಿ ದೇವಸ್ಥಾನ ಸಮಿತಿ ವತಿಯಿಂದ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿಯಿಂದ ರಾತ್ರಿ ವಿದ್ಯುತ್ ಅಲಂಕೃತ ಮಂಟಪದಲ್ಲಿ ಬನಶಂಕರಿ ಶೃಂಗರಿಸಿ ಉತ್ಸವ ಮಂಟಪದಲ್ಲಿ ಮೆರವಣಿಗೆ ಮೂಲಕ ಪವಿತ್ರ ಬನಕ್ಕೆ ಕೊಂಡೊಯ್ಯಲಾಯಿತು. 9 ದಿವಸ ಉಪವಾಸ ವ್ರತ ಆಚರಿಸಿದ ಹರಕೆ ಹೊತ್ತ ಭಕ್ತಾಧಿಗಳು ಉತ್ಸವಗಳೊಂದಿಗೆ ಮೆರವಣಿಗೆಯಲ್ಲಿ ತಾಯಿಯ ಬವಕ್ಕೆ ಬಂದು ದೇವಸ್ಥಾನದ ಮುಂದೆ ಹಾಕಿರುವ ಅಗ್ನಿಕುಂಡವನ್ನು ಹಾಯ್ದು ದೇವಿಯ ದರ್ಶನ ಪುನೀತರಾದರು. ದೇವಿಯ ಉತ್ಸವದೊಂದಿಗೆ ಗ್ರಾಮದ ಇತರೆ ಭಾಗಗಳಿಂದ ಹೊರಟ ಉತ್ಸವ ಮಂಟಪಗಳ ಶೋಭಾಯಾತ್ರೆಯು ಹಬ್ಬಕ್ಕೆ ಮೆರಗು ನೀಡಿತ್ತು.

 ಹಬ್ಬದ ಅಂಗವಗಿ ಗ್ರಾಮವನ್ನು ಹಸಿರು ತಳಿರು ತೋರಣಗಳಿಂದ ಹಾಗೂ ದೇವಸ್ಥಾನಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣದ ಬಳಿ ಬಣ್ಣ ಬಣ್ಣದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಹಾಗೂ ಬಾಣ ಬಿರುಸುಗಳ ಚಿತ್ತಾರ ನೋಡುಗರ ಕಣ್ಮನ ಸೆಳೆದವು.

ಈ ಹಬ್ಬಕ್ಕೆ ಮೈಸೂರು, ಹಾಸನ ಜಿಲ್ಲೆಗಳ ಗಡಿಭಾಗದ ಜನರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರೂ ಮಂದಿ ಭಕ್ತಾರ ಪಾಲ್ಗೊಂಡು ದೇವಿ ದರ್ಶನ ಪಡೆದರು. ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಹಬ್ಬದ ಯಶಸ್ವಿಗೆ ಶ್ರಮಿಸಿದರು.