ಎಸ್ಎಸ್ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯಶಿಕ್ಷಕರ ಕಾರ್ಯಾಗಾರ; ಎಸ್ಎಸ್ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಸಲಹೆ

Jan 22, 2026 - 17:59
 0  274
ಎಸ್ಎಸ್ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯಶಿಕ್ಷಕರ ಕಾರ್ಯಾಗಾರ;  ಎಸ್ಎಸ್ಎಲ್.ಸಿ ಪರೀಕ್ಷಾ ಫಲಿತಾಂಶ  ಉತ್ತಮಪಡಿಸಲು ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಸಲಹೆ

ಕುಶಾಲನಗರ, ಜ.22: ಪ್ರಸಕ್ತ ಸಾಲಿನಲ್ಲಿ ಪ್ರತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಹೇಳಿದರು.

 ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಶಿಕ್ಷಣ ಇಲಾಖೆ ಮತ್ತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್ಇ.ಆರ್.ಟಿ.) ವತಿಯಿಂದ ಶಿಕ್ಷಕ ಶಿಕ್ಷಣ ಯೋಜನೆಯಡಿ ಇಲಾಖೆಯ ಅನುಷ್ಠಾಆಧಿಕಾರಿಗಳು ಹಾಗೂ ಜಿಲ್ಲಾ ಸರ್ಕಾರಿ ಪ್ರೌಢಶಾಲೆ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಗುರುವಾರ ರಾಜ್ಯ ಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-1 ರ ಫಲಿತಾಂಶ ವಿಶ್ಲೇಷಣೆ ಕುರಿತು ಏರ್ಪಡಸಿದ್ದ ಎರಡು ದಿನಗಳ ಶೈಕ್ಷಣಿಕ ಕಾರ್ಯಾಗಾರದಲ್ಲಿ ಪರೀಕ್ಷಾ ಫಲಿತಾಂಶ ವಿಶ್ಲೇಷಣೆ ನಡೆಸಿ ಮಾತನಾಡಿದ ಅವರು,

 ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಸಲಹೆಗಳನ್ನು ನೀಡಿದರು. ಕಳೆದ ವರ್ಷ ಕೊಡಗು ಜಿಲ್ಲಾ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವು ರಾಜ್ಯದಲ್ಲಿ ನಾಲ್ಕನೇ ಸ್ಥಾನ ಗಳಿಸಿದೆ. ಪ್ರಸಕ್ತ ಸಾಲಿನಲ್ಲಿ ಈ ಪರೀಕ್ಷಾ ಫಲಿತಾಂಶವನ್ನು ರಾಜ್ಯಮಟ್ಟದಲ್ಲಿ 1 ರಿಂದ 2 ನೇ ಸ್ಥಾನಕ್ಕೆ ಏರಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ದಿಟ್ಟ ಹೆಜ್ಜೆ ಇಟ್ಟು ಹೆಚ್ಚಿನ ಪರಿಶ್ರಮ ವಹಿಸಬೇಕು ಎಂದು ಸಲಹೆ ನೀಡಿದರು. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಲು ಪೂರ್ವಭಾವಿ ಪರೀಕ್ಷೆಗಳತ್ತ ಹೆಚ್ಚು ಕಾಳಜಿ ವಹಿಸಬೇಕು.

 ಯಾವುದೇ ವಿದ್ಯಾರ್ಥಿಯು ಅನುತ್ತೀರ್ಣ ಆಗದಂತೆ ನೋಡಿಕೊಳ್ಳಬೇಕು’. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೇಕಡಾವಾರು ಫಲಿತಾಂಶವನ್ನು ಉತ್ತಮಪಡಿಸಲು ಪೋಷಕರಲ್ಲಿ ಜಾಗೃತಿ, ವಿದ್ಯಾರ್ಥಿಗಳಿಗೆ ಪ್ರೇರಣೆ ಹಾಗೂ ಸ್ಥಳೀಯವಾಗಿ ಸೂಕ್ತವಾಗುವ ಇನ್ನಿತರ ಕಾರ್ಯತಂತ್ರಗಳನ್ನು ಯೋಜಿಸಿ ಜಾರಿಗೊಳಿಸಬೇಕಾಗುತ್ತದೆ ಎಂದು ರಾಮಚಂದ್ರರಾಜೇ ಅರಸ್ ಎಂದು ತಿಳಿಸಿದರು.

 ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರತಿ ಶಾಲೆ‌ ಕೂಡ ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಬೇಕು. ಸಾಧಾರಣ ತೇರ್ಗಡೆ (ಸಿ ದರ್ಜೆ) ಹಾಗೂ ಅನುತ್ತೀರ್ಣ (ಎನ್‍ಸಿ ) ವಿದ್ಯಾರ್ಥಿಗಳಿಗೆ ಕನಿಷ್ಟ 40 ಅಂಕಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗಿದ್ದು, ಅದನ್ನು ತಮ್ಮ ಶಾಲೆಯಲ್ಲಿ ಅನುಷ್ಠಾನಗೊಳಿಸಿದರೆ ಶೇ.100 ಫಲಿತಾಂಶ ಬರಲು ಸಾಧ್ಯವಾಗಲಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲರು ಹೇಳಿದರು. ‌‌‌‌ ‌‌

ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ -1 ರ ಪ್ರತಿ ಶಾಲೆಯ ಫಲಿತಾಂಶದ ವಿಶ್ಲೇಷಣೆ ನಡೆಸಿ, ಮುಖ್ಯ ಶಿಕ್ಷಕರೊಂದಿಗೆ ಫಲಿತಾಂಶ ಉತ್ತಮಪಡಿಸುವ ಕುರಿತಂತೆ ಹಿಮ್ಮಾಹಿತಿ ಪಡೆದ ಅವರು, ಪರೀಕ್ಷೆ -1 ರ ಪಲಿತಾಂಶದ‌‌ ಅ ಆಧಾರದ ಮೇಲೆ ಮುಂದಿನ ಎರಡು ಪೂರ್ವಸಿದ್ಧತಾ‌ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕಾ ಸಾಧನ ಮಟ್ಟವನ್ನು ಯಾವ ರೀತಿಯಲ್ಲಿ ಉತ್ತಮಪಡಿಸಬಹುದು ಎಂಬುದರ ಬಗ್ಗೆ ಚಿಂತನ– ಮಂಥನ ನಡೆಸಿ ಕ್ರಿಯಾಯೋಜನೆ ತಯಾರಿಸಿ ಅದನ್ನು ಅನುಷ್ಠಾನಗೊಳಿಸಲು ಮುಖ್ಯ ಶಿಕ್ಷಕರು ಹೆಚ್ಚಿನ ಕ್ರಮ ವಹಿಸಬೇಕು ಎಂದರು.

 ಶಾಲೆಗೆ ಗೈರುಹಾಜರಾಗುವ ವಿದ್ಯಾರ್ಥಿಗಳು ನಿಯಮಿತವಾಗಿ ಹಾಜರಾಗುವಂತೆ ಹಾಗೂ ಕಲಿಕೆಯಲ್ಲಿ ಉತ್ತಮವಾಗಿ ತೊಡಗುವಂತೆ ಮಾಡಲು ಪೋಷಕರ ಸಹಭಾಗಿತ್ವ, ಶಿಕ್ಷಣದ ಮಹತ್ವವನ್ನು ವಿವರಿಸುವ ಪ್ರೇರಣಾತ್ಮಕ ಕ್ರಮಗಳು, ಹಿರಿಯ ವಿದ್ಯಾರ್ಥಿಗಳು ಹಾಗೂ ಸಮುದಾಯದ ಸಾಧಕರ ಪರಿಚಯ ಹಾಗೂ ಇನ್ನಿತರ ಕಾರ್ಯತಂತ್ರಗಳನ್ನು ಹೊಂದಬೇಕಾಗುತ್ತದೆ ಎಂದರು.

ವಾರ್ಷಿಕ ಪರೀಕ್ಷೆಗೆ ಇನ್ನು 55 ದಿನಗಳಿದ್ದು, ಯುದ್ಧೋಪಾದಿಯಲ್ಲಿ ವಿದ್ಯಾರ್ಥಿಗಳನ್ನು ಸಕಾರಾತ್ಮಕವಾಗಿ ಪ್ರೋತ್ಸಾಹಿಸಿ ತಯಾರಿ ಮಾಡಬೇಕು. ಪೂರ್ವ ಸಿದ್ಧತಾ ಪರೀಕ್ಷೆ -1 ರಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ‌ ನಿಗಾವಹಿಸಬೇಕು. ಮುಂದಿನ ಪರೀಕ್ಷೆಗಳಲ್ಲಿ ಇನ್ನೂ ಹೆಚ್ವಿನ ಅಂಕ ಪಡೆಯುಂತೆ ನಿರಂತರ ಕಲಿಕೆ ಮತ್ತು ಮಕ್ಕಳನ್ನು ಪ್ರೋತ್ಸಾಹಿಸಬೇಕು’. 2ನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಶೇ 90ಕ್ಕೂ ಹೆಚ್ಚು ಫಲಿತಾಂಶ ಬರುವಂತೆ ಕ್ರಮವಹಿಸಬೇಕು ಎಂದು ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ತಿಳಿಸಿದರು.

 ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಮೊದಲ ಹಂತದ ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಕಡಿಮೆ ಅಂಕಗಳಿಸಿದ ಮಕ್ಕಳಿಗೆ ಹೆಚ್ಚು ಗಮನ ಕೊಡುವ ಮೂಲಕ ಮುಂದಿನ ಹಂತದ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕೆಗೆ ಪ್ರೇರಣಾತ್ಮಕ ಚಟುವಟಿಕೆಗಳ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಬೆಳೆಸಬೇಕು ಎಂದು ತಿಳಿಸಿದರು.

ತರಬೇತಿ ನೋಡಲ್ ಅಧಿಕಾರಿ ಎಚ್.ಎಚ್.ಸತೀಶ್, ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಅಗತ್ಯ ಮಾಹಿತಿ ನೀಡಿದರು. ವಿರಾಜಪೇಟೆ ಬಿಇಓ ಆನಂದ್, ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಯ ಕ್ರಮಗಳ ಬಗ್ಗೆ ತಿಳಿಸಿದರು.

ತಾಲ್ಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳಾದ ಎಸ್.ಎಸ್.ಶಿವಕುಮಾರ್, ಜೆನೆಟ್, ಕವಿತ ಪರೀಕ್ಷೆ - ರ ಫಲಿತಾಂಶದ ವಿಶ್ಲೇಷಣೆ ಮಂಡಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೆ.ಗೋಪಾಲಕೃಷ್ಣ, ಹ್ಯೂಬರ್ಟ್ ಡಯಾಸ್, ಎಸ್.ಎನ್.ವೇಣುಗೋಪಾಲ್, ಕೃಷ್ಣಚೈತನ್ಯ, ಕೆ.ಮೂರ್ತಿ, ಆನಂದಪ್ಪ, ಮಾರುತಿ ಅರೇರ, ಬಿಂದು ಪರೀಕ್ಷೆಗೆ ಮಕ್ಕಳನ್ನು ಸಿದ್ಧತೆಗೊಳಿಸುವ ಕುರಿತು ಮಾಹಿತಿ ನೀಡಿದರು.

ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಎನ್.ವಿ.ಸ್ವಾಮಿ, ಉಪನ್ಯಾಸಕಿ ಕೆ.ಎಸ್.ನಳಿನಾಕ್ಷಿ , ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಹ್ಯಾರಿ ಮೋರಸ್, ಜಿಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0