ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು ಉದ್ಘಾಟಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್

Feb 15, 2026 - 16:29
 0  721
ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು ಉದ್ಘಾಟಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್

ಸುಂಟಿಕೊಪ್ಪ; ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ಭಾನುವಾರ ಉದ್ಘಾಟಿಸಿದರು.

 ಸುಂಟಿಕೊಪ್ಪದಲ್ಲಿ ವಸತಿ ಗೃಹ ಉದ್ಘಾಟಿಸಿ ಮಾತನಾಡಿದ ಸಚಿವರು ಪೊಲೀಸರಿಗಾಗಿ ರಾಜ್ಯದಲ್ಲಿ ಸುಮಾರು 40 ಸಾವಿರ ವಸತಿ ಗೃಹ ನಿರ್ಮಿಸಲಾಗಿದ್ದು, ಇನ್ನೂ 60 ಸಾವಿರ ವಸತಿ ಗೃಹ ನಿರ್ಮಿಸಬೇಕಿದೆ ಎಂದು ತಿಳಿಸಿದರು. ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕೆಳಸ್ತರದಲ್ಲಿ ಕೆಲಸ ನಿರ್ವಹಿಸುವ ಕಾನ್ಸ್ಟೇಬಲ್ ಗಳಿಗೆ ವೇತನ ಹೆಚ್ಚಿಸಲಾಗಿದೆ.

ಸಣ್ಣ ಸಣ್ಣ ಮನೆಯಲ್ಲಿ ವಾಸ ಮಾಡುವುದನ್ನು ಮನಗಂಡು ಪೊಲೀಸರಿಗೆ ವಸತಿ ಸೌಕರ್ಯ ‌ಒದಗಿಸಲಾಗುತ್ತಿದೆ. ಅದರಂತೆ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದಿಂದ 2030 ರ ವರೆಗೂ ಹಂತ ಹಂತವಾಗಿ ವಸತಿ ಕಲ್ಪಿಸಲಾಗುತ್ತದೆ ಎಂದು‌ ಜಿ.ಪರಮೇಶ್ವರ ಅವರು ವಿವರಿಸಿದರು.

ಹಿಂದೆ 18 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿತ್ತು, ಈಗ 33 ಲಕ್ಷ ರೂ ವೆಚ್ಚ ಆಗಲಿದೆ. ಪೊಲೀಸರು ನೆಮ್ಮದಿಯ ಜೀವನ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು‌ ನುಡಿದರು. ಶಾಸಕರಾದ ಡಾ.ಮಂತರ್ ಗೌಡ ಅವರ ಅನೇಕ ಬೇಡಿಕೆ ಈಡೇರಿಸಲಾಗುವುದು. ಪ್ರಥಮ ಆದ್ಯತೆಯಲ್ಲಿ ವಸತಿ ಗೃಹ ನಿರ್ಮಿಸಲಾಗುವುದು.

 ಪೊಲೀಸ್ ಠಾಣೆ ಆರಂಭಕ್ಕೆ ಕ್ರಮವಹಿಸಲಾಗುವುದು ಎಂದರು. ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು ಎಂಬ ಉದ್ದೇಶದಿಂದ ಹಲವು ಕ್ರಮ ಕೈಗೊಳ್ಳಲಾಗಿದೆ. ಜನರ ಜತೆ ಸ್ನೇಹದಿಂದ ಇರಬೇಕು. ಹಾಗೆಯೇ ಅಪರಾಧ ಮಾಡುವವರಿಗೆ ಶಿಕ್ಷೆ ಆಗಬೇಕು ಎಂದರು. ಇಡೀ ದೇಶದಲ್ಲಿಯೇ ರಕ್ಷಣೆ, ಸುರಕ್ಷತೆಯಲ್ಲಿ ರಾಜ್ಯ ಪೊಲೀಸ್ ಪ್ರಥಮ ಸ್ಥಾನದಲ್ಲಿದೆ. ಹಗಲು, ರಾತ್ರಿ, ಮಳೆ, ಬಿಸಿಲು, ನಿದ್ರೆ ಇಲ್ಲದೆ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಆ ನಿಟ್ಟಿನಲ್ಲಿ ಗೌರವಿಸಬೇಕು.

ಅದನ್ನು ಬಿಟ್ಟು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಯಾರು ಮಾಡಬಾರದು ಎಂದರು. ಪ್ರಸ್ತುತ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2023 ರಲ್ಲಿ ನೀಡಿದ್ದ 593 ಭರವಸೆಗಳಲ್ಲಿ ಅರ್ಧಕ್ಕೂ ಹೆಚ್ಚು ಭರವಸೆ ಈಡೇರಿಸಿದೆ. ಇನ್ನೂ ಎರಡು ವರ್ಷದಲ್ಲಿ ಎಲ್ಲಾ ಭರವಸೆ ಈಡೇರಿಸಲಾಗುವುದು ಎಂದು ಗೃಹ ಸಚಿವರು ಹೇಳಿದರು. ಸರ್ಕಾರ 1.36 ಸಾವಿರ ಕೋಟಿ ರೂ ವನ್ನು ಪಂಚ ಗ್ಯಾರಂಟಿಗೆ ಖರ್ಚು ಮಾಡಿದೆ. ಬಡವರು ಇತರರಂತೆ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಹಲವು ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದರು.

ಸರ್ಕಾರ ಜನಪರವಾಗಿದ್ದು, ನುಡಿದಂತೆ ನಡೆಯುತ್ತಿದೆ. ಸರ್ಕಾರ ಸುಭದ್ರವಾಗಿದ್ದು, ಮಾರ್ಚ್ 6 ರಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ್ಳೆಯ ಬಜೆಟ್ ಮಂಡಿಸಲಿದ್ದಾರೆ ಎಂದು ಜಿ.ಪರಮೇಶ್ವರ ಅವರು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಖಾಲಿ ಇರುವ ಪೊಲೀಸ್ ಹುದ್ದೆ ಭರ್ತಿ ಮಾಡಬೇಕು. ಪೊಲೀಸ್ ವಸತಿ ಗೃಹ ಮತ್ತಷ್ಟು ಕಟ್ಟಬೇಕು. ಮುಂದಿನ‌ ಬಜೆಟ್ ನಲ್ಲಿ ಇನ್ನೂ ಎರಡು ಪೊಲೀಸ್ ಠಾಣೆ ಆರಂಭಕ್ಕೆ ಅವಕಾಶ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ‌‌‌‌

ಜಿಲ್ಲೆಯಲ್ಲಿ ಪೊಲೀಸ್ ತರಬೇತಿ ಕೇಂದ್ರಕ್ಕೆ ಜಾಗವಿದ್ದು, ಬಳಸಿ ಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಡ್ರಗ್ಸ್ ಪ್ರಕರಣ ಪತ್ತೆಹಚ್ಚುವಲ್ಲಿ ಹದ್ದಿನ‌ ಕಣ್ಣಿಟ್ಟಿರುವುದು‌ ಶ್ಲಾಘನೀಯ ಕಾರ್ಯವಾಗಿದೆ ಎಂದು ಡಾ.ಮಂತರ್ ಗೌಡ ಅವರು‌ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ‌ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ‌ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ, ಕಾಂತರಾಜು, ಸುಂಟಿಕೊಪ್ಪ ಗ್ರಾ.ಪಂ.ನಿಕಟ ಪೂರ್ವ ಅಧ್ಯಕ್ಷರಾದ ಸುನಿಲ್ ಕುಮಾರ್, ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಪ್ರಮುಖರಾದ ಲಕ್ಷ್ಮಣ, ಇಬ್ರಾಹಿಂ, ವಿನೋದ್ ಶಿವಪ್ಪ, ಕೆ.ಪಿ.ಚಂದ್ರಕಲಾ, ಲೋಕೇಶ್, ಲತೀಫ್, ಸತೀಶ, ಯಕೂಬ್ ಇತರರು ಇದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಸ್ವಾಗತಿಸಿದರು, ಕೊಡಗು ಜಿಲ್ಲಾ ಪೊಲೀಸ್ ಸಾಂಸ್ಕೃತಿಕ ತಂಡದವರು ನಾಡಗೀತೆ ಹಾಡಿದರು.

What's Your Reaction?

Like Like 2
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0