ಮಾನವ- ವನ್ಯಜೀವಿ ಸಂಘರ್ಷ ಉಪಶಮನ ಕಾರ್ಯಗಾರ: ಅರಣ್ಯ ಇಲಾಖೆಯಿಂದ ಜಾಗೃತಿ
ಸಿದ್ದಾಪುರ:- ತಿತಿಮತಿ ವಲಯದ ವತಿಯಿಂದ ಚೆನ್ನಂಗಿ ಶಾಖಾ ವ್ಯಾಪ್ತಿಯ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಾಲ್ದಾರೆ ಗ್ರಾಮಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಪಶಮನ ಕುರಿತ ಕಾರ್ಯಗಾರವನ್ನು ಆಯೋಜಿಸಲಾಯಿತು.
ಕಾರ್ಯಗಾರದಲ್ಲಿ ಮಠ ಪೈಸಾರಿ, ಬಜೆಗೊಳ್ಳಿ, ಬಾಣಂಗಾಲ, ಹುಂಡಿ, ಮಾರ್ಗೋಲಿ ಹಾಗೂ ಮಾಲ್ದಾರೆ ಗ್ರಾಮದ ರೈತರು ಮತ್ತು ಗ್ರಾಮಸ್ಥರು ಭಾಗವಹಿಸಿ, ವನ್ಯಜೀವಿಗಳಿಂದ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಕೃಷಿಗೆ ಆಗುತ್ತಿರುವ ಹಾನಿಗಳ ಬಗ್ಗೆ ತಮ್ಮ ಅಹವಾಲುಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂಘರ್ಷ ತಡೆಗಟ್ಟಲು ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳು ಹಾಗೂ ಜನರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಅಲ್ಲದೆ, ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲು ಗ್ರಾಮಸ್ಥರು ಇಲಾಖೆಯೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮವು ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್. ಜಗನ್ನಾಥ್ ಅವರ ನಿರ್ದೇಶನದಂತೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ವಲಯ ಅರಣ್ಯಾಧಿಕಾರಿ ಹೆಚ್.ಎಸ್. ಗಂಗಾಧರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪ ವಲಯ ಅರಣ್ಯಾಧಿಕಾರಿ ಶಶಿ ಪಿ.ಟಿ., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು, ರೈತ ಸಂಘದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
