ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಸಚಿವ ಎನ್.ಎಸ್. ಬೋಸರಾಜು; ಸಂತ್ರಸ್ತ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ತಕ್ಷಣವೇ ₹20 ಲಕ್ಷ ಪರಿಹಾರ
ಬೆಂಗಳೂರು, ಮೇ 19: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಬಾರೆ ಶಿಬಿರದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಸೂಚನೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
"ಈ ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ. ಘಟನೆಗೆ ನಿಖರ ಕಾರಣಗಳೇನು ಮತ್ತು ಪ್ರವಾಸಿ ಮಾರ್ಗಸೂಚಿ ನಿರ್ವಹಣೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ," ಎಂದು ಸಚಿವರು ತಿಳಿಸಿದ್ದಾರೆ.
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಆನೆ ಶಿಬಿರಗಳಲ್ಲಿ ಕಟ್ಟುನಿಟ್ಟಾಗಿ ಪ್ರವಾಸಿಗರ ನಿರ್ವಹಣೆಗೆ ಮಾರ್ಗಸೂಚಿ ಜಾರಿಗೆ ತರಲು ಸಚಿವರು ನಿರ್ದೇಶಿಸಿದ್ದಾರೆ. "ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸುವಂತೆ ನಿಗಾವಹಿಸಬೇಕು. ಜಿಲ್ಲಾಡಳಿತವು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು," ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾಡುಪ್ರಾಣಿಗಳ ನಡವಳಿಕೆಯನ್ನು ಹಾಗೂ ಅವುಗಳ ಪ್ರತಿಕ್ರಿಯೆಯನ್ನು ನಿಖರವಾಗಿ ಊಹಿಸಲು ಯಾರಿಗೂ ಸಾಧ್ಯವಿಲ್ಲ. ಆದ್ದರಿಂದ ಅರಣ್ಯ ಪ್ರದೇಶಗಳು ಹಾಗೂ ಆನೆ ಶಿಬಿರಗಳಿಗೆ ಭೇಟಿ ನೀಡುವ ಪ್ರವಾಸಿಗರು ಅರಣ್ಯ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಾಣಿಗಳನ್ನು ವೀಕ್ಷಿಸುವಾಗ ಅಂತರ ಕಾಯ್ದುಕೊಳ್ಳುವ ಜೊತೆಗೆ ತಮ್ಮ ಸುರಕ್ಷತೆಯ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ಪ್ರವಾಸಿಗರಲ್ಲಿ ಕಾಳಜಿಯ ಮನವಿ ಮಾಡಿದ್ದಾರೆ.
ಇದೇ ವೇಳೆ, ಸೋಮವಾರ ದುಬಾರೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 'ಮಾರ್ತಾಂಡ' ಆನೆಯು ಮಂಗಳವಾರ ಬೆಳಗ್ಗೆ ಮೃತಪಟ್ಟಿರುವ ಸುದ್ದಿ ತಿಳಿದು ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾರ್ತಾಂಡನ ಅಗಲಿಕೆ ಶಿಬಿರದ ಸಿಬ್ಬಂದಿ ಹಾಗೂ ಪ್ರಾಣಿ ಪ್ರಿಯರಿಗೆ ನೋವು ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
