ಶಿಕ್ಷಣದೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಡಾ ಮಂತರ್ ಗೌಡ : ಅಭ್ಯತ್ ಮಂಗಲ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ , ನೋಟ್ ಬುಕ್ ವಿತರಣೆ
ಮಡಿಕೇರಿ : ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಲ್ಲರೂ ಕೈಜೋಡಿಸುವ ಮೂಲಕ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಗ್ರಾಮಸ್ಥರು ಕೈಜೋಡಿಸಬೇಕೆಂದು ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಕರೆ ನೀಡಿದರು.
ಅಭ್ಯತ್ ಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಲ್ ಬ್ಲೂಮ್ ಹೆಲ್ತ್ ಕೇರ್ ಹಾಗೂ SLV ಗ್ರೂಪ್ ಬುಕ್ ಹೌಸ್ ಕುಶಾಲನಗರ ಇವರ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ನೋಟ್ ಬುಕ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ನೀಡುತ್ತಿದೆ ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕೆಂದು ಸಲಹೆ ನೀಡಿದ ಅವರು,
ಶಿಕ್ಷಕರುಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಾಲಾ ಹಾಜರಾತಿಯನ್ನು ಹೆಚ್ಚಿಸಿ ಮಾದರಿ ಶಾಲೆಯನ್ನಾಗಿಸುವ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕೆಂದು ನಿರ್ದೇಶನ ನೀಡಿ ಸರ್ಕಾರಿ ಶಾಲೆಯ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ನಿಧಿ ಮೂಲಕ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭ ಮಂತರ್ ಗೌಡ ಅವರು ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಮಾಡುವ ಮೂಲಕ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು. ಕುಶಾಲನಗರದ ಎಸ್ ಎಲ್ ವಿ ಗ್ರೂಪ್ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ಹಿಲ್ ಬ್ಲೂಮ್ ಹೆಲ್ತ್ ಕೇರ್ನ ವೈದ್ಯಾಧಿಕಾರಿ ಡಾ.ನಿತ್ಯಪ್ರಿಯ ನೇತೃತ್ವದ ತಂಡದಿಂದ ಗ್ರಾಮಸ್ಥರಿಗೆ ಬಿಪಿ, ಮಧುಮೇಹ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು.
ವೇದಿಕೆಯಲ್ಲಿ ಶಾಲಾ SDMC ಅಧ್ಯಕ್ಷ ಲಕ್ಷ್ಮಣ, ಮುಖ್ಯೋಪಾಧ್ಯಾಯಿನಿ ಶಮೀನ ಅಶ್ರಫ್, ಪಿಡಿಓ ಮಾದಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಶ್ ಧೋಲ್ಪಾಡಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಸುನೀತಾ ಮಂಜುನಾಥ್, ಹಿಲ್ ಬ್ಲೂಮ್ ವ್ಯವಸ್ಥಾಪಕ ಸಮದ್, ಅಭಿರಾಮಿ ಕಾಂಗ್ರೆಸ್ ವಲಯ ಅಧ್ಯಕ್ಷ ಹನೀಫ್ , ಪ್ರಮುಖರಾದ ಮಜೀದ್, ಮಣಿ, ಮಂಜುನಾಥ್ ಕೆದಂಬಾಡಿ, ಪ್ರಸನ್ನ , ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕೆ.ಎಂ ಸೇರಿದಂತೆ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

