ಕುಶಾಲನಗರ; ಮನೆಯಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳ ದಾಸ್ತಾನಿರಿಸಿದ್ದ ಪ್ರಕರಣ:ಆರೋಪಿಗೆ ಶಿಕ್ಷೆ ಪ್ರಕಟ
ಮಡಿಕೇರಿ, ಮಾ. 5: ನೂತನವಾಗಿ ನಿರ್ಮಿಸುತ್ತಿದ್ದ ಮನೆಯಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ದಾಸ್ತಾನಿರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಪರಾಧಿಗೆ ದಂಡ ಸಹಿತ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದಿನಾಂಕ 27.03.2019 ರಂದು ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಂದರನಗರದಲ್ಲಿ ಆರ್. ಮಂಜು ತನ್ನ ಪತ್ನಿಯ ಹೆಸರಿನಲ್ಲಿ ಹೊಸದಾಗಿ ನಿರ್ಮಿಸುತ್ತಿದ್ದ ಮನೆಗೆ ಅಂದಿನ ಠಾಣಾಧಿಕಾರಿ ನಂದೀಶ್ ಕುಮಾರ್ ಬಾಂಬ್ ನಿಷ್ಕ್ರಿಯ ದಳದೊಂದಿಗೆ ದಾಳಿ ನಡೆಸಿದಾಗ ವಿವಿಧ ರೀತಿಯ ಅಪಾಯಕಾರಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ತನಿಖೆ ಕೈಗೊಂಡು ಪೊಲೀಸ್ ನಿರೀಕ್ಷಕರುಗಳಾದ ಎ ಬಿ.ಎಸ್. ದಿನೇಶ್ ಕುಮಾರ್ ಮತ್ತು . ಮಹೇಶ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ 1ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಿ. ಸುರೇಂದ್ರ ಅವರು ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಎರಡು ವರ್ಷ ಶಿಕ್ಷೆ ಹಾಗೂ ರೂ. 2 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇತರ ನಾಲ್ವರು ಆರೋಪಿಗಳ ಮೇಲಿನ ಆರೋಪ ಸಾಬೀತಾಗದ ಕಾರಣ ಖುಲಾಸೆಗೊಳಿಸಿದ್ದಾರೆ. ಪ್ರಕರಣದಲ್ಲಿ ಸರಕಾರದ ಪರ ಸರಕಾರಿ ಅಭಿಯೋಜಕ ಎನ್.ಪಿ. ದೇವೇಂದ್ರ ವಾದ ಮಂಡಿಸಿದರು.