ಕುಶಾಲನಗರ : ಪೊಲೀಸ್ ಜನ ಸಂಪರ್ಕ ಸಭೆ! ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ : ಎಸ್ಪಿ ಬಿಂದುಮಣಿ
ಕುಶಾಲನಗರ : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ,ಸೋಮವಾರಪೇಟೆ ಉಪ ವಿಭಾಗ ಹಾಗೂ ಕುಶಾಲನಗರ ಪೊಲೀಸ್ ಠಾಣೆ ಆಶ್ರಯದಲ್ಲಿ ಶುಕ್ರವಾರ ಇಲ್ಲಿನ ರೈತ ಸಹಕಾರ ಭವನದಲ್ಲಿ ಜನ ಸಂಪರ್ಕ ಸಭೆ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಕಾನೂನು ಪಾಲನೆ ಪ್ರತಿಯೊಬ್ಬರ ಕರ್ತವ್ಯ. ಕಾನೂನು ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಪೊಲೀಸ್ ಕೆಲಸ.ಆದ್ದರಿಂದ ಸಾರ್ವಜನಿಕರಿಂದ ಸಲಹೆ, ಸಹಕಾರ ನಿರೀಕ್ಷೆ ಮಾಡುತ್ತೇವೆ.ಆಗ ಮಾತ್ರ ಪೊಲೀಸರು ಅಪರಾಧ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದರು.
ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳ ಸರಹದ್ದಿನಲ್ಲಿ ಗಾಂಜಾ ಮತ್ತಿತರ ಮಾದಕ ದ್ರವ್ಯಗಳ ಬಳಕೆ, ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯ ಗಮನದಲ್ಲಿದೆ. ಕಳೆದ ಹಲವು ತಿಂಗಳಿಂದ ಈ ಬಗ್ಗೆ ಅನೇಕ ಪ್ರಕರಣಗಳನ್ನು ಭೇದಿಸಿ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಡಿವೈಎಸ್ಪಿ ಚಂದ್ರಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳನ್ನು ಮಾರುವ ಸಂಗ್ರಹಿಸುವ ಬಳಸುವವರನ್ನು ಕಠಿಣ ಕಾನೂನು ವ್ಯಾಪ್ತಿಗೆ ತರಲಾಗುವುದು. ಮಾದಕ ವ್ಯಸನಿಗಳನ್ನು ಸರ್ಕಾರದ ವೆಚ್ಚದಲ್ಲಿ ವ್ಯಸನ ಮುಕ್ತ ಕೇಂದ್ರಗಳಿಗೆ ಕಳುಹಿಸಿ ಸುಧಾರಣೆ ಮಾಡಲಾಗುವುದು ಎಂದರು. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ, ಆಟೋ ನಿಲ್ದಾಣದ ಸಮಸ್ಯೆ, ಬೀದಿಬದಿ ವ್ಯಾಪಾರಿಗಳ ಸಮಸ್ಯೆ ಹಾಗೂ ಗಾಂಜಾ ಮಾರಾಟ ಸೇರಿದಂತೆ ಇನ್ನಿತರ ಸಮಸ್ಯೆಗಳ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದರು. ಕೂಡಿಗೆ ಸರ್ಕಲ್ ನಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ.ಗಂಧದಕೋಟೆ ಮದ್ಯದ ಅಂಗಡಿಗಳ ಮುಂದೆ ರಸ್ತೆ ಬದಿ ವಾಹನಗಳನ್ನು ನಿಲ್ಲಿಸುವುದು ಅಪಘಾತಗಳಿಗೆ ಕಾರಣವಾಗಿದೆ.
ಉತ್ತರ ಭಾರತ ರಾಜ್ಯಗಳಿಂದ ಬಂದಿರುವ ಕೂಲಿ ಕಾರ್ಮಿಕರಿಂದ ಕಾನೂನುಬಾಹಿರ ಕೃತ್ಯಗಳು ನಡೆಯುತ್ತಿವೆ ಆದ್ದರಿಂದ ಪೊಲೀಸ್ ಇಲಾಖೆ ಈ ಬಗ್ಗೆ ತೀವ್ರ ನಿಗವಹಿಸುವಂತೆ ಸಲಹೆ ನೀಡಿದರು. ಈ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಎಸ್.ನಾಗೇಶ್, ಕೊಡಗು ಅಭಿವೃದ್ಧಿ ಸಮಿತಿಯ ದಾವುದ್, ಮಹಿಳಾ ಸಮಾಜದ ಅಧ್ಯಕ್ಷ ಸಲಿನಾಪೇದ್ರು ವಿವಿಧ ಸಂಘಸಂಸ್ಥೆಗಳ ಮುಖಂಡರು ಹಾಗೂ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.