ಕುಶಾಲನಗರ : ಶ್ರದ್ಧಾಭಕ್ತಿಯೊಂದಿಗೆ ಅದ್ಧೂರಿಯಾಗಿ ನಡೆದ ಶ್ರೀ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ

ಕುಶಾಲನಗರ : ಶ್ರದ್ಧಾಭಕ್ತಿಯೊಂದಿಗೆ ಅದ್ಧೂರಿಯಾಗಿ ನಡೆದ  ಶ್ರೀ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ

ಕುಶಾಲನಗರ : ಪಟ್ಟಣದ ಶ್ರೀ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಶನಿವಾರ ಶ್ರದ್ಧಾಭಕ್ತಿಯೊಂದಿಗೆ ಅದ್ದೂರಿಯಾಗಿ ಜರುಗಿತು. ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ ಉತ್ಸಾಹದ ಮಧ್ಯೆ ಶ್ರೀ ಗಣಪತಿ ದೇವರ ರಥವನ್ನು ಎಳೆದು ತಮ್ಮ ಭಕ್ತಿ ಮೆರೆದರು. ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿ ವತಿಯಿಂದ ಕಾರ್ತೀಕ ಕೃಷ್ಣ ಪಕ್ಷದಲ್ಲಿ ಸಲ್ಲುವ ಅಭಿಜಿನ್ ಶುಭ ಲಗ್ನದಲ್ಲಿ ಶ್ರೀ ಗಣಪತಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.

ರಥ ಬಲಿ ಮತ್ತು ಪೂಜೆ ಹಾಗೂ ಮಹಾಮಂಗಳಾರತಿ ಬಳಿಕ 1ಗಂಟೆಗೆ ಸರಿಯಾಗಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದಲ್ಲಿ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿ ದೇವರ ಉತ್ಸವಮೂರ್ತಿಯನ್ನು ಮಂಗಳವಾದ್ಯಗಳ ಜೊತೆಗೆ ದೇವಾಲಯದಿಂದ ಹೊರತಂದು ಭಕ್ತರ ಜಯಘೋಷಗಳ ಮಧ್ಯೆ ರಥದಲ್ಲಿ ಕುಳ್ಳರಿಸಲಾಯಿತು. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ರಥವನ್ನು ಗಣಪತಿ ದೇವಾಲಯ ದಿಂದ ರಥ ಬೀದಿ ಮೂಲಕ ಆಂಜನೇಯ ದೇವಸ್ಥಾನದ ವರೆಗೆ ಎಳೆಯುವ‌ ಮೂಲಕ ಭಕ್ತಿ ಸಮರ್ಪಿಸಿದರು.

ದೇವಾಲಯದ ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು ನೇತೃತ್ವದಲ್ಲಿ ವಿವಿಧ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಲಾಯಿತು. ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಮೊದಲು ಪಕ್ಕದ ಊರುಗಳಿಂದ ಬಂದಿದ್ದ ಗೋವುಗಳಿಗೆ ಗೋಪೂಜೆ ನೆರವೇರಿಸಲಾಯಿತು. ಇದೇ ವೇಳೆ ಅಯ್ಯಪ್ಪ ಮಾಲಾಧಾರಿಗಳು ಗಣಪತಿ ದೇವಾಲಯದ ಎದುರು ರಸ್ತೆಯಲ್ಲಿ ಕರ್ಪೂರ ಹರಡಿ ಬೆಂಕಿ ಹಚ್ಚಿ ಪ್ರಾರ್ಥನೆ ಸಲ್ಲಿಸಿದರು. ಮಾಲಾಧಾರಿಗಳ ಲಯಬದ್ಧ ಭಜನೆ ಈ ಸಂದರ್ಭದಲ್ಲಿ ಗಮನ ಸೆಳೆಯಿತು. ಮತ್ತೊಂದು ಕಡೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥದ ಮುಂದೆ ಹಣ್ಣುಕಾಯಿ ಮಾಡಿಸಲು ಮುಗಿಬಿದ್ದರು.

ಅರ್ಚಕರು ತಾಳ್ಮೆಯಿಂದಲೇ ಭಕ್ತರು ತಂದಿದ್ದ ಹಣ್ಣುಕಾಯಿ ಸ್ವೀಕರಿಸಿ, ದೇವರಿಗೆ ಸಮರ್ಪಿಸಿ ಭಕ್ತರಿಗೆ ಹಿಂತಿರುಗಿಸಿದರು.ಹರಕೆ ಹೊತ್ತಿದ್ದ ಭಕ್ತರು ರಥ ಹೊರಡುವ ವೇಳೆ ರಸ್ತೆಯಲ್ಲಿ ಸಾವಿರಾರು ಈಡುಕಾಯಿ ಒಡೆದು ಭಕ್ತಿ ಪ್ರದರ್ಶಿಸಿದರು. ನವದಂಪತಿಗಳು ಹಾಗೂ ಹರಕೆ ಹೊತ್ತ ಅವಿವಾಹಿತರು ರಥಕ್ಕೆ ಹಣ್ಣು ಜವನ ಎಸೆದು ತಮ್ಮ ಇಷ್ಟಾರ್ಥ ನೆರವೇರಿಸುವ ದೇವ ಎಂದು ಪ್ರಾರ್ಥನೆ ಸಲ್ಲಿಸಿದರು.ದೇವಾಲಯ ವ್ಯಾಪ್ತಿಯಲ್ಲಿ ಬಾಳೆಹಣ್ಣು, ಜವನ ಮಾರಾಟ, ಪೈಪೋಟಿಗೆ ಬಿದ್ದಂತೆ ರಥಕ್ಕೆ ಜವನ ಎಸೆಯುವ ದೃಶ್ಯ ಸಾಮಾನ್ಯವಾಗಿತ್ತು.

ಮೊದಲಿಗೆ ದೇವಾಲಯದಲ್ಲಿ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ, ಪುಷ್ಪಾಲಂಕಾರ, ರಥಪೂಜೆ ಹಾಗೂ ರಥ ಬಲಿ ಕಾರ್ಯಕ್ರಮಗಳು ನಡೆದವು. ಗಣಪತಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಅನೇಕ ವರ್ಷಗಳಿಂದ ನಡೆಯುತ್ತಿರುವ ಇತಿಹಾಸ ಪ್ರಸಿದ್ದ ಈ ಜಾತ್ರೆಗೆ ಮೈಸೂರು ಹಾಗೂ ಹಾಸನ ಜಿಲ್ಲೆಗಳ ಗಡಿ ಭಾಗದ ಜನರು ಸೇರಿದಂತೆ ಕೊಡಗು ಜಿಲ್ಲೆಯ ಸಾವಿರಾರೂ ಜನರು ಪಾಲ್ಗೊಂಡಿದ್ದರು.ರಥೋತ್ಸವದ ಅಂಗವಾಗಿ ಗಣಪತಿ ದೇವಸ್ಥಾನ ಹಾಗೂ ಪಟ್ಟಣದ ಬೀದಿಗಳನ್ನು ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು.

ಪುರಸಭೆ.ವತಿಯಿಂದ ಪಟ್ಟಣವನ್ನು ಶುಚ್ಚಿಗೊಳಿಸಲಾಯಿತು. ಸಮಿತಿಯ ಉಪಾಧ್ಯಕ್ಷ ಆರ್.ಬಾಬು, ಕಾರ್ಯದರ್ಶಿ ಬಿ.ಕೆ.ಮುತ್ತಣ್ಣ, ಖಜಾಂಚಿ ಎಸ್.ಕೆ.ಸತೀಶ್,ಸಹ ಕಾರ್ಯದರ್ಶಿ ಕೆ.ಎನ್.ದೇವರಾಜ್, ನಿರ್ದೇಶಕರಾದ ವಿ.ಡಿ. ಪುಂಡಾರೀಕಾಕ್ಷ,ವಿ.ಪಿ.ಶಶಿಧರ್, ಟಿ.ಆರ್.ಶರವಣಕುಮಾರ್, ಎಚ್.ಎಂ.ಚಂದ್ರು, ವಿಶೇಷ ಆಹ್ವಾನಿತರಾದ ಎಚ್.ಎನ್.ರಾಮಚಂದ್ರ, ಡಿ.ಅಪ್ಪಣ, ಡಿ.ಸಿ.ಜಗದೀಶ್, ಕೆ.ಎನ್.ಸುರೇಶ್, ಕೆ.ಸಿ.ನಂಜುಂಡ ಸ್ಚಾಮಿ, ಎಂ.ಮುನಿರಾಜು,ವ್ಯವಸ್ಥಾಪಕರಾಗಿ ಎಸ್.ಕೆ.ಶ್ರೀನಿವಾಸ್ ರಾವ್ ಇದ್ದರು.