ಸ್ವಂತ ವೆಚ್ಚದಲ್ಲಿ ವಿರಾಜಪೇಟೆ ಬ್ಲಾಕ್ ವ್ಯಾಪ್ತಿಯಲ್ಲಿ, ತುರ್ತು ನೀರು ಸರಬರಾಜು ವ್ಯವಸ್ಥೆಗೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ;ಈ ಬಾರಿಯ ಬೇಸಿಗೆ ಸಮಯದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಉದ್ದೇಶದಿಂದ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ತಮ್ಮ ವೈಯುಕ್ತಿಕ ವೆಚ್ಚದಲ್ಲಿ,ವಿರಾಜಪೇಟೆ ಬ್ಲಾಕ್ ವ್ಯಾಪ್ತಿಯಲ್ಲಿನ ಅಗತ್ಯ ಇರುವ ಸಾರ್ವಜನಿಕರಿಗೆ ತುರ್ತು ನೀರಿನ ಸೌಲಭ್ಯ ಕಲ್ಪಿಸಲು ₹ 28 ಲಕ್ಷಗಳಲ್ಲಿ ಟ್ಯಾಂಕರ್ ವಾಹನವನ್ನು ವ್ಯವಸ್ಥೆ ಕಲ್ಪಿಸಿದ್ದಾರೆ.
ವಿರಾಜಪೇಟೆಯಲ್ಲಿರುವ ತಮ್ಮ ಗೃಹ ಕಚೇರಿ ಎದುರು, ಈ ವಾಹನಕ್ಕೆ ಚಾಲನೆ ನೀಡಿದ ಶಾಸಕರು ಶುಭಕೋರಿ ಮಾತನಾಡುತ್ತಾ, ತೀವ್ರ ಬೇಸಿಗೆಯಿಂದ ಕ್ಷೇತ್ರದಲ್ಲಿ ನೀರಿನ ಅಭಾವ ತಲೆದೋರಿದ್ದು, ಸಾರ್ವಜನಿಕರಿಗೆ ನೀರಿನ ಅಭಾವ ಆಗದಂತೆ ಎಚ್ಚರವಹಿಸಿ ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ತಮ್ಮ ಅಗತ್ಯಕ್ಕೆ ಅನುಸಾರವಾಗಿ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದ ಶಾಸಕರು, ಜೀವ ಜಲವನ್ನು ಸಂರಕ್ಷಿಸಿ ನಮ್ಮ ಮುಂದಿನ ಪೀಳಿಗೆಗೆ ಅಗತ್ಯದ ಬಗ್ಗೆ ಮಾಹಿತಿ ನೀಡಲು ಪ್ರತಿಯೊಬ್ಬ ಸಾರ್ವಜನಿಕನೂ ಭದ್ಧನಾಗಿರಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಹಿಳಾ ಅಧ್ಯಕ್ಷೆ ನಯನ, ಮಾಜಿ ಪುರಾಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಪುರಸಭೆ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
