ಕೊಡಗು ಜಿಲ್ಲೆಯಲ್ಲಿ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ಶಕ್ತಿ ಇದ್ದಂತೆ ; ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮಡಿಕೇರಿ:- ಮುಖ್ಯಮಂತ್ರಿ ಆದ ನಂತರ ಪ್ರಥಮ ಬಾರಿಗೆ ಮಡಿಕೇರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರನ್ನು ಸ್ಥಳೀಯ ಶಾಸಕರಾದ ಡಾ.ಮಂತರ್ ಗೌಡ ಅವರು ಮತ್ತು ಅಭಿಮಾನಿಗಳು ಭಾನುವಾರ ಅದ್ಧೂರಿಯಾಗಿ ಸ್ವಾಗತಿಸಿದರು.
ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಅಭಿಮಾನದಿಂದ, ಹೃದಯ ಪೂರ್ವಕವಾಗಿ ಸ್ವಾಗತಿಸಿದ ಶಾಸಕರಾದ ಡಾ.ಮಂತರ್ ಗೌಡ ಮತ್ತು ಅಭಿಮಾನಿಗಳು, ಹೂಗುಚ್ಚ ನೀಡಿ ಬರಮಾಡಿಕೊಂಡರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿಮಾನಿಗಳ ನಿರೀಕ್ಷೆಯಂತೆ, ಎಲ್ಲಾ ಜನರ ಶ್ರೇಯೋಭಿವೃದ್ದಿಗಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ಅವರು ಶಕ್ತಿ ಇದ್ದಂತೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. 'ಕೊಡಗು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಇಬ್ಬರು ಶಾಸಕರು ಆಗಾಗ ಪ್ರಸ್ತಾಪಿಸುತ್ತಾಲೇ ಇರುತ್ತಾರೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
' ಸರ್ಕಾರ ಈಗಾಗಲೇ ಪ್ರಜಾಸೇವಾ ಇಲಾಖೆಯನ್ನು ಅಸ್ತಿತ್ವಕ್ಕೆ ತಂದಿದ್ದು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ, ಸಾರ್ವಜನಿಕರ ಕುಂದುಕೊರತೆ ಆಲಿಸಿ, ಪರಿಹರಿಸುವಂತಾಗಲು ಸೂಚಿಸಲಾಗಿದೆ ಎಂದರು. ಯುವ ಶಕ್ತಿ ರಾಷ್ಟ್ರ ಶಕ್ತಿ ಆಗಬೇಕು ಎಂಬ ಉದ್ದೇಶದಿಂದ ಸರ್ಕಾರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಮುಂದಾಗಿದ್ದು, ಸದಸ್ಯತ್ವ ಪಡೆಯುವಂತಾಗಬೇಕು. ಪ್ರತಿ ಸಂಘಕ್ಕೆ ವಾರ್ಷಿಕವಾಗಿ 10 ಲಕ್ಷ ರೂ ನೀಡಲಾಗುತ್ತಿದ್ದು, ಕ್ರೀಡೆ, ಅಭಿವೃದ್ಧಿ, ಸಾಮಾಜಿಕ, ಸಾಂಸ್ಕೃತಿಕ ಒಳಿತಿಗೆ ಬಳಸಬಹುದಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ವಿ.ಪಿ.ಶಶಿಧರ, ಪ್ರಶಾಂತ್, ಕಾಂತರಾಜು, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಎಚ್.ಎಸ್. ಚಂದ್ರಮೌಳಿ ಟಿ.ಪಿ.ರಮೇಶ್, ಕೆ.ಪಿ.ಚಂದ್ರಕಲಾ, ಪ್ರಕಾಶ್ ಆಚಾರ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು, ಅಭಿಮಾನಿಗಳು ಇತರರು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
