ನಾಪೋಕ್ಲುವಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ ಒಡೆಯರ್
ಮಡಿಕೇರಿ : ಶುಕ್ರವಾರ ನಾಪೋಕ್ಲುವಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌತಮ್ ಅವರನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭೇಟಿಯಾಗಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅತ್ಯಂತ ಗಂಭೀರವಾದ ಕೃತ್ಯವಾಗಿದೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ತಕ್ಕ ಪಾಠ ಕಲಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಕೋಮು ಗಲಭೆ ನಡೆಯುತ್ತಲೇ ಇದೆ. ನಾಗಮಂಗಲ, ಮಂಡ್ಯ ಭಾಗದಲ್ಲಿ ಅಹಿತಕರ ಘಟನೆಗಳು ನಡೆದಿವೆ.
ಹಿಂದೂ ಆಚರಣೆ ಸಂದರ್ಭ ಅನೇಕ ಕಡೆಗಳಲ್ಲಿ ಕಿಡಿಗೇಡಿಗಳಿಂದ ಅಹಿತಕರ ಘಟನೆ ನಡೆಯುತ್ತಿರುವುದು ಖಂಡನೀಯ. ಭಯವೇ ಇಲ್ಲದೆ ಇಂತಹ ಕೃತ್ಯದಲ್ಲಿ ತೊಡಗುತ್ತಾರೆ. ಅಂತಹವರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಹೇಳಿದರು.
ಈ ಸಂದರ್ಭ ಮಾಜಿ ಶಾಸಕ ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರ.ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ಮಹಿಳಾ ಘಟಕದ ಅನಿತಾ ಪೂವಯ್ಯ, ಪ್ರಮುಖರಾದ ಜಗದೀಶ್, ಅರುಣ್ ಶೆಟ್ಟಿ, ಉಮೇಶ್ ಸುಬ್ರಮಣಿ ಮತ್ತಿತರರು ಇದ್ದರು.