ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ

ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ

ಮಡಿಕೇರಿ ಮಾ.3:-ಕೊಡಗು ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು ಮೈಸೂರು ಹಾಗೂ ಕೊಡಗು ಜಿಲ್ಲೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ 3125 ರೈತರಿಗೆ ವಿತರಿಸುವ ರೈತರ ಅಧ್ಯಯನ ಕೈಪಿಡಿ, ನೈಸರ್ಗಿಕ ಕೃಷಿ ರೈತರ ದಿನಚರಿ ಪುಸ್ತಕ, ನೈಸರ್ಗಿಕ ಕೃಷಿ ಕುರಿತು ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು ಮತ್ತು ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಪುಸ್ತಿಕೆಗಳನ್ನು ತಮ್ಮ ಮೈಸೂರು ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ಈ ಯೋಜನೆಯು ಕೇಂದ್ರ ಸರ್ಕಾರದ ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರದ ಶೇ.40 ರಷ್ಟು ಅನುದಾನದೊಂದಿಗೆ ಕೊಡಗು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿದೆ. ಈ ಯೋಜನೆಯಡಿ 50 ಜನ ಗುಚ್ಚ ಸಂಪನ್ಮೂಲ ವ್ಯಕ್ತಿ (ಎರಡು ಗ್ರಾಮ ಪಂಚಾಯಿತಿಗಳಿಗೆ ಒಬ್ಬರಂತೆ) 17 ಜನ ಸಂಪನ್ಮೂಲ ವ್ಯಕ್ತಿಗಳ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿ ಅನುಸರಿಸುವ ರೈತರಿಗೆ ಮಾರ್ಗದರ್ಶನ, ತರಬೇತಿ ನೀಡಲಾಗುವುದು. ಈ ಪುಸ್ತಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಡಾ.ಬಿ.ಎಸ್ ಚಂದ್ರಶೇಖರ್ ಮತ್ತು ಉಪ ಕೃಷಿ ನಿರ್ದೇಶಕರಾದ ಡಿ.ಎಸ್.ಸೋಮಶೇಖರ್ ಅವರು ಹಾಜರಿದ್ದರು.