ಮಡಿಕೇರಿ:ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ

Jul 3, 2026 - 18:03
 0  273
ಮಡಿಕೇರಿ:ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ

ಮಡಿಕೇರಿ ಜು.03:-ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಬಳಿ ಸಂಗ್ರಹಿಸಲಾಗುವ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. 

ಕಸ ವಿಲೇವಾರಿ ಘಟಕದ ಗೇಟ್ ಬಳಿಗೆ ಇಳಿಯುತ್ತಿದ್ದಂತೆ ರಸ್ತೆಯನ್ನೇ ಸರಿಯಾಗಿ ಇಟ್ಟುಕೊಂಡಿಲ್ಲ, ಇನ್ನು ಕಸವನ್ನು ಹೇಗೆ ವಿಲೇವಾರಿ ಮಾಡುತ್ತಿದ್ದೀರ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.    

ಕನಿಷ್ಟ ಓಡಾಡಲು ರಸ್ತೆ ಸುಗಮವಾಗಿರಬೇಕು. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಸವನ್ನು ವಿಲೇವಾರಿ ಮಾಡುವುದು ಹೀಗೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸ ವಿಲೇವಾರಿ ಘಟಕ ಕೇಂದ್ರ ನಿರ್ವಹಣೆ ತುಂಬಾ ಕಳಪೆಯಿಂದ ಕೂಡಿದ್ದು, ವೈಜ್ಞಾನಿಕವಾಗಿ ಕಸವಿಲೇವಾರಿ ಮಾಡುತ್ತಿಲ್ಲ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಸಿಟ್ಟಾದರು. 

ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಿ ಕಸ ವಿಲೇವಾರಿ ಮಾಡಬೇಕು. ಆ ಕೆಲಸ ಇಲ್ಲಿ ಆಗುತ್ತಿಲ್ಲ. ಕಸದಿಂದ ಸೋರುವ ನೀರು ಎಲ್ಲಿಗೆ ಹೋಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದೆಯೇ ಎಂದು ಪ್ರಶ್ನಿಸಿದರು.  

 ಈ ಪ್ರದೇಶದಲ್ಲಿ ಹೆಚ್ಚಿನ ಮಳೆಯಿಂದಾಗಿ ಕಸದ ನೀರು ಬೋರ್‍ವೆಲ್, ತೊರೆಗಳ ಮೂಲಕ ಮಲೀನವಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಮುನ್ನೆಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು. 

ಪರಿಸರ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಎಂಜಿನಿಯರ್‍ಗಳು ಗಮನಹರಿಸಬೇಕು. ಇಲ್ಲದಿದ್ದರೆ ಎಲ್ಲರ ಮೇಲೂ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಎಚ್ಚರಿಸಿದರು. 

ವೈದ್ಯಕೀಯ, ಪಶು ವೈದ್ಯಕೀಯ, ಕುಡಿಯುವ ನೀರು ಪೂರೈಕೆ ವಿಭಾಗ, ನಗರಸಭೆ ಹಾಗೂ ಪರಿಸರ ಇಲಾಖೆ ಹೀಗೆ ಎಲ್ಲಾ ವಿಭಾಗದ ಎಂಜಿನಿಯರ್‍ಗಳು ಈ ಬಗ್ಗೆ ಗಮನಹರಿಸಬೇಕು ಎಂದು ಕೆ.ಎನ್.ಫಣೀಂದ್ರ ಅವರು ನಿರ್ದೇಶನ ನೀಡಿದರು. 

ಕೆರೆಕಟ್ಟೆ, ಕಾಲುವೆ, ತೊರೆಗಳ ಮೂಲಕ ಕಸದ ನೀರು ಹೋಗದಂತೆ ಎಚ್ಚರವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ನಿರ್ದೇಶನ ನೀಡಿದರು. 

ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ಸಮಾರೋಪಾದಿಯಲ್ಲಿ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಇಲ್ಲಿರುವ ಆರು ಎಕರೆ ಜಾಗ ಸಾಲುವುದಿಲ್ಲ. ಆದ್ದರಿಂದ ಬೇರೆ ಕಡೆಯು ಕಸ ವಿಲೇವಾರಿಗೆ ಜಾಗ ಕಾಯ್ದಿರಿಸಬೇಕು ಎಂದು ಸಲಹೆ ಮಾಡಿದರು. 

ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಪ್ರದೇಶದಲ್ಲಿ ಮನೆಗಳ ಮಾಹಿತಿ ಪಡೆಯಬೇಕು. ಶುಚಿತ್ವ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕಸ ವಿಲೇವಾರಿ ಸಮರ್ಪಕವಾಗಿ ನಿರ್ವಹಿಸುವಲ್ಲಿ ಮುಂದಾಗಬೇಕು ಎಂದರು. 

ಕಸವಿಲೇವಾರಿಯನ್ನು ಸಮಪರ್ಕವಾಗಿ ನಿರ್ವಹಿಸದಿರುವ ಹಿನ್ನೆಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು. ವೈಜ್ಞಾನಿಕವಾಗಿ ಕಸ ವಿಲೇವಾರಿ ಆಗಬೇಕು ಎಂದು ಸಲಹೆ ಮಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕಸ ವಿಲೇವಾರಿ ಘಟಕ ಸ್ಥಳದಲ್ಲಿ ಸ್ವಚ್ಛತೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು. 

ಬಳಿಕ ನಗರದ ಮಾರುಕಟ್ಟೆ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆಯೇ ಎಂದು ಮಾಹಿತಿ ಪಡೆದರು. 

ಹೆಚ್ಚಿನ ಮಳೆಯಿಂದ ಮಳೆ ನೀರು ಎರಚುವುದು ಹಾಗೂ ಬೆಳಕು ವ್ಯವಸ್ಥೆ ಇಲ್ಲದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಚರಂಡಿ ಸರಿಪಡಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಎಲ್ಲೆಂದರಲ್ಲಿ ಕಸ ಕಡ್ಡಿ ಹಾಕುವುದನ್ನು ತಡೆಯಬೇಕು. ಈ ಸಂಬಂಧ ಜಾಗೃತಿ ಫಲಕ ಅಳವಡಿಸಬೇಕು ಎಂದು ಫಣೀಂದ್ರ ಅವರು ಹೇಳಿದರು. 

ವ್ಯಾಪಾರಸ್ಥರು ಸಹ ಎಲ್ಲೆಂದರಲ್ಲಿ ಕಸ ಬಿಸಾಡಿದಲ್ಲಿ ದಂಡ ವಿಧಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದರು 

       ಮಾರುಕಟ್ಟೆ ವ್ಯಾಪ್ತಿಯಲ್ಲಿ ಗೇಟ್ ಅಳವಡಿಸಬೇಕು. ಹೆಚ್ಚಿನ ವಿದ್ಯುತ್ ಬಲ್ಬ್ ಕಲ್ಪಿಸಬೇಕು. ಟ್ಯೂಬ್ ಲೈಟ್ ಸೇರಿದಂತೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಅವರು ತಿಳಿಸಿದರು. 

       ಮುನ್ಸಿಪಾಲಿಟಿಯಿಂದ ಸಾರ್ವಜನಿಕರಿಗೆ ಪ್ರಯೋಜನ ಇದೆಯೇ ಎಂಬ ಬಗ್ಗೆ ಯೋಚಿಸಬೇಕಿದೆ. ಮಳೆ ನೀರು ಬರದಂತೆ ಎಚ್ಚರವಹಿಸಬೇಕು. ಗಾಳಿ ಬೆಳಕು ಬರುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಜಿನಿಯರ್‍ಗಳಿಗೆ ನಿರ್ದೇಶನ ನೀಡಿದರು. 

       ಕುಡಿಯುವ ನೀರು ಪೂರೈಸಬೇಕು. ಮತ್ತಿತರ ಸಂಬಂಧ ಸಾರ್ವಜನಿಕರು ಹಲವು ವಿಚಾರಗಳ ಕುರಿತು ಗಮನ ಸೆಳೆದರು.

       ಮಾರುಕಟ್ಟೆಯಲ್ಲಿ ಮಳೆ ನೀರು ಬರದಂತೆ ಎಚ್ಚರವಹಿಸಬೇಕು. ಗಾಳಿ-ಬೆಳಕು ಬರುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಜಿನಿಯರ್‍ಗಳಿಗೆ ನಿರ್ದೇಶನ ನೀಡಿದರು. 

ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ :-ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿದಿನ ಸ್ವಚ್ಛಗೊಳಿಸಬೇಕು. ಶೌಚಾಲಯ ಸುಂದರವಾಗಿರಬೇಕು. ಗಡಿಯಾರ ಅಳವಡಿಸುವಂತೆ ಸಲಹೆ ಮಾಡಿದರು. 

ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶೌಚಾಲಯ ವೀಕ್ಷಿಸಿ, ಇಡೀ ಬಸ್ ನಿಲ್ದಾಣ ಸಂಚರಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು ಎಂದರು.  

ಈ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿದ್ದ ವೃದ್ದೆಯೊಬ್ಬರು ಮದೆನಾಡು, ಬೆಟ್ಟತ್ತೂರು, ಕಾಟಕೇರಿಗೆ ಹೆಚ್ಚುವರಿ ಬಸ್ಸು ಸಂಚರಿಸಬೇಕು ಎಂದು ಮನವಿ ಮಾಡಿದರು. 

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಗುರುವಾರ ಕುಶಾಲನಗರ ಬಳಿಯ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ಮತ್ತು ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು. 

ಹಾಸ್ಟೆಲ್ ವಾತಾವರಣ ಚೆನ್ನಾಗಿದೆ. ಆದರೆ ಹೊಸ ಹಾಸಿಗೆ ಮತ್ತು ಹೊದಿಕೆ ನೀಡಬೇಕು. ಸ್ನಾನದ ಮನೆ ಮತ್ತು ಶೌಚಾಲಯ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಸಲಹೆ ಮಾಡಲಾಗಿದೆ ಎಂದರು. 

ಕಸವಿಲೇವಾರಿ ಘಟಕ ಸರಿಯಾದ ನಿರ್ವಹಣೆ ಆಗದಿರುವುದರಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರು ಹೇಳಿದರು. 

ಸುತ್ತಮುತ್ತಲಿನ ವಾತಾವರಣದಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು. ಕಸ ವಿಲೇವಾರಿ ಘಟಕ ವ್ಯಾಪ್ತಿಯಲ್ಲಿ ಸೊಳ್ಳೆ, ನೊಣಗಳು ಹಾಗೂ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು ಎಂದರು.

ಹಸಿ ಮತ್ತು ಒಣಕಸವನ್ನು ಬೇರ್ಪಡಿಸಿ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದರು. ಮಾರುಕಟ್ಟೆಗೆ ಭೇಟಿ ನೀಡಿ ಮಾತನಾಡಿ ಪ್ರತಿದಿನ ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು. 

ಕಸ ವಿಲೇವಾರಿಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು. 

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಾಟೀಲ, ಲೋಕಾಯುಕ್ತ ಎಸ್ಪಿ ಉದೇಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ತಹಶೀಲ್ದಾರ್ ಶ್ರೀಧರ, ನಗರಾಭಿವೃದ್ಧಿ ಯೋಜನಾ ಯೋಜನಾ ನಿರ್ದೇಶಕರಾದ ಮಂಜುನಾಥ ರಾಮಣ್ಣ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಎಇಇ ಸತೀಶ್ ಇತರರು ಹಲವು ಮಾಹಿತಿ ನೀಡಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0