ಫೆ.15ರಂದು ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿಯ ಸಂಭ್ರಮ
ಮಡಿಕೇರಿ ಫೆ.9 : ಮಡಿಕೇರಿಯ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.15 ರಂದು ವಿವಿಧ ಧಾರ್ಮಿಕ ಕೈಂಕರ್ಯಗಳು ಮತ್ತು ಭಕ್ತರ ಮೆರವಣಿಗೆ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಶಿವರಾತ್ರಿಯಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿರುವ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ದೇವಾಲಯದಲ್ಲಿ ಸ್ಥಾಪಿಸಲಾಗಿರುವ 52 ಅಡಿ ಎತ್ತರದ ಶಿವನ ವಿಗ್ರಹವನ್ನು 2016ರ ಮಾರ್ಚ್ 4 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶ್ರೀವೀರೇಂದ್ರ ಹೆಗ್ಗಡೆ ಅವರು ಲೋಕಾರ್ಪಣೆಗೊಳಿಸಿದರು.
ಗರ್ಭಗುಡಿಯಲ್ಲಿ ಕಾಶಿಲಿಂಗ ಪ್ರತಿಷ್ಠಾಪನೆಯಾಗಿದ್ದು, ವಿಗ್ರಹದ ಸುತ್ತ ಪಂಚಲಿಂಗಗಳು ಮತ್ತು 109 ಲಿಂಗಗಳನ್ನು ಸ್ಥಾಪಿಸಲಾಗಿದೆ. ಈ ಲಿಂಗಗಳಿಗೆ ವಿಶೇಷ ಅಭಿಷೇಕ, ಅಲಂಕಾರ ಮತ್ತು ಪೂಜೆ ನೆರವೇರಲಿದೆ. ಭಕ್ತರಿಗೆ ಪಂಚಲಿಂಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ನೆರವೇರಲಿದ್ದು, ಭಕ್ತರಿಗೆ ಅನ್ನಸಂತರ್ಪಣೆಯಾಗಲಿದೆ ಎಂದರು.
ಶ್ರೀ ರಾಜರಾಜೇಶ್ವರಿ ದೇವಾಲಯದ ಟ್ರಸ್ಟಿ ದೇವರಾಜ್ ಮಣಿ ಮಾತನಾಡಿ ಬೆಳಿಗ್ಗೆ ದೇವಾಲಯದ ಮುಖ್ಯ ದ್ವಾರದಿಂದ ದೇವಾಲಯದವರೆಗೆ ಸ್ತಬ್ಧಚಿತ್ರ, ಪೂರ್ಣ ಕುಂಭ ಕಳಸ, ಚಂಡೆವಾದ್ಯ, ವೀರಗಾಸೆ, ಡೊಳ್ಳು ಕುಣಿತದೊಂದಿಗೆ ಭಕ್ತಾದಿಗಳ ಮೆರವಣಿಗೆ ನಡೆಯಲಿದೆ. ಧರ್ಮದರ್ಶಿ ಗೋವಿಂದಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಪ್ರಧಾನ ಅರ್ಚಕರಾದ ಶ್ರೀನಿವಾಸ ಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಜಿ.ಪಂ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ, ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ. ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ನಗರಸಭೆಯ ಸದಸ್ಯರುಗಳಾದ ಅನಿತಾ ಪೂವಯ್ಯ, ಕೆ.ಎಸ್.ರಮೇಶ್, ಮನ್ಸೂರ್ ಆಲಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಕೆ.ನಿಡುಗಣೆ ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಕೆ.ಡಿ, ಸದಸ್ಯ ಜಾನ್ಸನ್ ಪಿಂಟೋ, ಜಿಲ್ಲಾಧಿಕಾರಿ ಎಸ್.ಜಿ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ನಗರಸಭಾ ಪೌರಾಯುಕ್ತ ಹೆಚ್.ಆರ್.ರಮೇಶ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಮಡಿಕೇರಿ ತಹಶೀಲ್ದಾರ್ ಶ್ರೀಧರ್ ಆರ್., ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ, ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಅಧ್ಯಕ್ಷ ಮಂಜು, ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಅಧ್ಯಕ್ಷ ಹರೀಶ್, ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಅಧ್ಯಕ್ಷ ಸೋಮಯ್ಯ ಟಿ.ಪಿ, ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಅಧ್ಯಕ್ಷ ದಾಸ್ ಜಿ.ಎಲ್, ಶ್ರೀ ಕೋದಂಡರಾಮ ದೇವಾಲಯದ ಅಧ್ಯಕ್ಷ ನಂಜುಂಡ, ಶ್ರೀ ಚೌಡೇಶ್ವರಿ ದೇವಾಲಯದ ಅಧ್ಯಕ್ಷ ಕೆ.ಎನ್.ಗಜಾನನ, ಪೇಟೆ ಶ್ರೀರಾಮ ಮಂದಿರ ದೇವಾಲಯದ ಅಧ್ಯಕ್ಷ ಶಿವಮೂರ್ತಿ, ಶ್ರೀ ಕರವಲೆ ಭಗವತಿ ದೇವಾಲಯದ ಅಧ್ಯಕ್ಷ ಸಂತೋಷ್ ತೆಕ್ಕಡ, ಶ್ರೀಕನ್ನಿಕಾ ಪರಮೇಶ್ವರಿ ದೇವಾಲಯದ ಅಧ್ಯಕ್ಷ ಶೇಖರ್, ಶ್ರೀ ರಾಮ ಮಂದಿರ ದೇವಾಲಯದ ಅಧ್ಯಕ್ಷ ಮೋಹನ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
ಸಂಜೆ 7 ಗಂಟೆಗೆ ದೀಪೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಲಿದ್ದು, ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ. ನಂತರ ಭಕ್ತಿ ಪ್ರಧಾನ ಮನೋರಂಜನಾ ಕಾರ್ಯಕ್ರಮಗಳು ಕೂಡ ಜರುಗಲಿದೆ ಎಂದರು. ದೇವಾಲಯ ಸಮಿತಿಯ ಸದಸ್ಯ ಚುಮ್ಮಿ ದೇವಯ್ಯ ಮಾತನಾಡಿ, ಪ್ರತಿವರ್ಷ ದೇಶ ವಿದೇಶಗಳ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ.
ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಗರದ ದಶಮಂಟಪಗಳ ದೇವಾಲಯಗಳಿಂದ ಕಳಶ ತೀರ್ಥ ತಂದು ಶಿವಲಿಂಗಕ್ಕೆ ಅಭಿಷೇಕ ಮಾಡುವ ಸಂಪ್ರದಾಯವನ್ನು ಈ ಬಾರಿಯಿಂದ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಸಮಿತಿಯ ಮತ್ತೊಬ್ಬ ಸದಸ್ಯ ಕಿರಣ್ ಕುಮಾರ್ ಮಾತನಾಡಿ ಸರ್ವ ಭಕ್ತರ ಸಹಕಾರದಿಂದ ಮಹಾಶಿವರಾತ್ರಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ಸಚಿನ್ ವಾಸುದೇವ್ ಹಾಗೂ ಸಂಜಯ್ ಉಪಸ್ಥಿತರಿದ್ದರು.