ಮರಗೋಡು ಸರ್ಕಾರಿ ಮಾದರಿ ಶಾಲೆ ಪರಿಶೀಲನೆ ನಡೆಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್
ಸಿದ್ದಾಪುರ :- ಮಡಿಕೇರಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ. ಅವರು ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಶಾಲೆಯಲ್ಲಿ ಉತ್ತಮ ಭೌತಿಕ ಸೌಲಭ್ಯಗಳಿದ್ದರೂ ವಿದ್ಯಾರ್ಥಿಗಳ ದಾಖಲಾತಿ ಕುಂಠಿತಗೊಂಡಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಎಸ್ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪೋಷಕರ ಸಭೆಯನ್ನು ಕರೆದು ಚರ್ಚೆ ನಡೆಸಲಾಯಿತು. ಶಾಲೆಯ ಸಭಾಂಗಣಕ್ಕೆ ಇಂಟರ್ಲಾಕ್ ಅಳವಡಿಸಲು ಸ್ಥಳೀಯ ದಾನಿಗಳ ಸಹಕಾರ ಪಡೆಯುವಂತೆ ಸೂಚಿಸಿದ ಅವರು, ಶಾಲೆಯನ್ನು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸುವ ಜವಾಬ್ದಾರಿ ಊರಿನ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ಹೇಳಿದರು. ಸಭೆಯಲ್ಲಿ ಪ್ರಭಾರ ಮುಖ್ಯಶಿಕ್ಷಕ ಅಶ್ರಫ್ ಕೆ.ಎಂ., ಸಹಶಿಕ್ಷಕರಾದ ದನಿತ್ ಕೆ.ಆರ್. ಹಾಗೂ ಗಾನವಿ ಪಿ.ಎಲ್. ಉಪಸ್ಥಿತರಿದ್ದರು.
