ಕೆಸರುಮಯವಾದ ಬಾಳುಗೋಡು-ಪೆರುಂಬಾಡಿ ಜಂಕ್ಷನ್ ರಸ್ತೆ:20 ದಿನಗಳಲ್ಲಿ ಸರಿಪಡಿಸದಿದ್ದರೆ ಗ್ರಾಮಸ್ಥರಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ
ವರದಿ: ಈಶಾನ್ವಿ
ವಿರಾಜಪೇಟೆ: ಕರ್ನಾಟಕದಿಂದ ಕೇರಳದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾದ ಬಿಟ್ಟಂಗಾಲ ಬಾಳುಗೋಡು ಪೆರಂಬಾಡಿ ರಸ್ತೆಯು ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ತಕ್ಷಣವೇ ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯ ಗ್ರಾಮಸ್ಥರು ಅಧಿಕಾರಿಗಳಿಗೆ 20 ದಿನಗಳ ಕಾಲಾವಕಾಶ ನೀಡಿದ್ದಾರೆ.
ಲೋಕೋಪಯೋಗಿ ಇಲಾಖೆಯ ಆರ್ಜಿ ಹಾಗೂ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಈ ಮುಖ್ಯ ರಸ್ತೆಯು ಕಳೆದ 15 ವರ್ಷಗಳಿಂದ ಸುಸ್ಥಿತಿಯಲ್ಲಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಹಾಳಾಗಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ಬಿದ್ದು ಕೆಸರು ನೀರು ತುಂಬಿಕೊಂಡಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚರಿಸಲು ನಿತ್ಯ ಪರದಾಡುವಂತಾಗಿದೆ. ರಸ್ತೆ ದುರಸ್ತಿಗೆ ಒತ್ತಾಯಿಸಿ ಬಾಳುಗೋಡು-ಪೆರುಂಬಾಡಿ ಜಂಕ್ಷನ್ನಲ್ಲಿ ಪೆರುಂಬಾಡಿ ಹಾಗೂ ಬಾಳುಗೋಡು ಗ್ರಾಮಸ್ಥರು ಹಾಗೂ ಚಾಲಕರು ಒಂದಾಗಿ ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆಯಲ್ಲಿ ಬೃಹತ್ ಗುಂಡಿಗಳು ಬಿದ್ದು ನೀರು ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಣ್ಣ ಚಾಲಕರು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಸಂಪೂರ್ಣ ಹಾನಿಗೊಳಗಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದರು.
ಸಮಸ್ಯೆ ಪರಿಹಾರಕ್ಕೆ ಆಗ್ರಹ: ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಸಮಾಜ ಸೇವಕ ಬಿ.ಎಂ. ಗಣೇಶ್ ಅವರ ನೇತೃತ್ವದಲ್ಲಿ ನಡೆದ ಪಕ್ಷಾತೀತವಾಗಿ ಮಾತನಾಡಿದ ಅವರು, "ಸಂಪೂರ್ಣ ರಸ್ತೆ ನಿರ್ಮಾಣ ತಕ್ಷಣಕ್ಕೆ ಸಾಧ್ಯವಾಗದಿದ್ದರೂ, ಕನಿಷ್ಠ ವೆಟ್ ಮಿಕ್ಸ್ ಬಳಸಿ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಬರಿ ಮಣ್ಣು ಹಾಕಿದರೆ ಮಳೆಗೆ ಕೊಚ್ಚಿ ಹೋಗುತ್ತದೆ.
ಅಧಿಕಾರಿಗಳು ತಕ್ಷಣ ಸ್ಪಂದಿಸದಿದ್ದರೆ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುವುದು ಅನಿವಾರ್ಯ"ಎಂದು ಎಚ್ಚರಿಸಿದರು. ಸಾಮಾನ್ಯ ಜನರ ಸುರಕ್ಷತೆಯ ಹಿತದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಆಡಳಿತ ವರ್ಗ ತಕ್ಷಣ ಎಚ್ಚೆತ್ತುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಿ ಸುಸಜ್ಜಿತ ರಸ್ತೆ ನಿರ್ಮಿಸಬೇಕೆಂದು ಆಗ್ರಹಿಸಿದರಲ್ಲದೆ ಒಂದು ವೇಳೆ ನೀಡಿದ ಗಡುವಿನೊಳಗೆ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳದಿದ್ದಲ್ಲಿ, ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರೆಲ್ಲರೂ ಒಂದಾಗಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಈ ಸಂದರ್ಭದಲ್ಲಿ ಎಚ್ಚರಿಸಿದರು.
ರಸ್ತೆಯ ಎರಡೂ ಬದಿ ಚರಂಡಿಗಳು ಮುಚ್ಚಿಹೋಗಿ ಮಳೆ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಗುಂಡಿಗಳಲ್ಲಿ ನೀರು ನಿಂತು ಸವಾರರಿಗೆ ಕಾಣಿಸದೆ ಅನೇಕ ಅಪಘಾತಗಳು ಸಂಭವಿಸಿದ್ದು, ಇತ್ತೀಚೆಗೆ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುವುದರಿಂದ ವಾಹನಗಳ ಬಿಡಿಭಾಗಗಳು ಉದುರಿ ಬೀಳುತ್ತಿದ್ದು, ವಾಹನ ಸವಾರರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ರಸ್ತೆಯಲ್ಲಿ ವಾಹನ ಸಂಚಾರ ಹಾಗಿರಲಿ, ನಡೆದಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಶಾಲಾ-ಕಾಲೇಜು ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ನಿವಾಸಿ ರೂಪ ಅಳಲು ತೋಡಿಕೊಂಡರು. ಈ ಪ್ರಮುಖ ರಸ್ತೆ ಹಾಳಾಗಿರುವುದರಿಂದ ಕೇರಳಕ್ಕೆ ತೆರಳುವ ನೂರಾರು ಬಸ್, ಲಾರಿ ಹಾಗೂ ಇತರ ವಾಹನಗಳು ಈ ಮಾರ್ಗವಾಗಿ ತೆರಳಬೇಕಿದೆ. ಈ ರಸ್ತೆ ಸಮಪೂರ್ಣ ಕೆಟ್ಟಿರುವುದರಿಂದ ವಿರಾಜಪೇಟೆ ಮಾರ್ಗವನ್ನು ಬಳಸಬೇಕಾಗುತ್ತದೆ. ಇದರಿಂದ ವಿರಾಜಪೇಟೆಯಲ್ಲೂ ವಾಹನ ದಟ್ಟಣೆ ಹೆಚ್ಚಾಗುತ್ತಿದೆ ಎಂದು ಬಿಟ್ಟಂಗಾಲ ಗ್ರಾ.ಪಂ. ಮಾಜಿ ಸದಸ್ಯ ರಾಜ ಸೋಮಣ್ಣ ಹೇಳಿದರು.
ರಸ್ತೆಯುದ್ದಕ್ಕೂ ಬಿದ್ದಿರುವ ಆಳವಾದ ಗುಂಡಿಗಳಿಂದಾಗಿ ಸಣ್ಣ ವಾಹನಗಳು, ಆಟೋಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೀವ್ರ ಅಪಘಾತದ ಭೀತ ಎದುರಿಸುತ್ತಿದ್ದಾರೆ. ನಾವು ಪ್ರತಿದಿನ ಇದೇ ರಸ್ತೆಯಲ್ಲಿ ಓಡಾಡಬೇಕಾಗಿದೆ. ಬೃಹತ್ ಗಾತ್ರದ ಗುಂಡಿಗಳಲ್ಲಿ ನೀರು ತುಂಬಿಕೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಆಟೋ ಚಾಲಕರು ಬಿದ್ದು ಗಾಯಗೊಳ್ಳುವ ಪರಿಸ್ಥಿತಿ ಬಂದೊದಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣವೇ ಎಚ್ಚೆತ್ತುಕೊಂಡು, ಮುಂದಿನ 20 ದಿನಗಳ ಒಳಗೆ ಈ ರಸ್ತೆ ಗುಂಡಿಗಳನ್ನು ಮುಚ್ಚಿ ಸಂಚಾರ ಯೋಗ್ಯಗೊಳಿಸಬೇಕು ಎಂದು ಸ್ಥಳೀಯರಾದ ರಜನಿ ಹೇಳಿದರು.
ಈ ಸಂದರ್ಭದಲ್ಲಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನವೀನ್, ಜೀವನ್ ಬಿ.ಎ., ಕೆ.ಕೆ. ಅನಿಲ್ ಕುಮಾರ್, ಸುನೀಲ್ ಕುಟ್ಟಪ್ಪ, ಹರೀಶ್ ಕೆ.ಬಿ,ಸಪ್ನ, ದೇವಕ್ಕಿಯಮ್ಮ, ಜನಾರ್ಧನ ಕೆ.ಸಿ. ಸುನು, ದೇವದಾಸ್, ಮುತ್ತಪ್ಪ, ಅಯ್ಯುಬ್, ಉಮೇಶ್, ರಾಯ್ ಥೋಮಸ್, ನಾಸರ್, ನವೀನ, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಇದ್ದರು.
What's Your Reaction?
Like
0
Dislike
0
Love
0
Funny
1
Angry
1
Sad
0
Wow
0
