ಮೊದಲ ಪೊಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ | ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ ತೀರ್ಪು
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮೊದಲ ಪೊಕ್ಸೊ ಪ್ರಕರಣದಲ್ಲಿ ಖುಲಾಸೆಗೊಳಿಸಿ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ.
2022ರ ಆಗಸ್ಟ್ 26ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಮೈಸೂರಿನ ನಝರ್ ಬಾದ್ ಪೊಲೀಸ್ ಠಾಣೆಯಲ್ಲಿ ಶರಣರ ವಿರುದ್ಧ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸೆಪ್ಟಂಬರ್ 1ರಂದು ಶರಣರನ್ನು ಬಂಧಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಈ ಪ್ರಕರಣದ ವಾದ-ಪ್ರತಿವಾದ ಮಂಗಳವಾರ ಪೂರ್ಣಗೊಂಡಿದ್ದು, ತೀರ್ಪು ಬುಧವಾರ ಪ್ರಕಟಿಸಲಾಗುವುದೆಂದು ನ್ಯಾಯಾಲಯ ತಿಳಿಸಿತ್ತು. ಅದರಂತೆ ಇಂದು ತೀರ್ಪು ಪ್ರಕಟವಾಗಿದ್ದು, ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗದ ಹಿನ್ನೆಲೆಯಲ್ಲಿ ಶರಣರನ್ನು ಖುಲಾಸೆಗೊಳಿಸಲಾಗಿದೆ.
ಮುರುಘಾ ಶರಣರ ವಿರುದ್ಧ ಒಟ್ಟು ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಮೊದಲ ಎಫ್ಐಆರ್ನಲ್ಲಿ ಇಬ್ಬರು ಬಾಲಕಿಯರು ಸಂತ್ರಸ್ತರಾಗಿದ್ದರು.