ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಾಮಫಲಕ:ಸಾರ್ವಜನಿಕರ ಆಕ್ಷೇಪ

ಸಾರ್ವಜನಿಕ ರಸ್ತೆಯ ಬದಿಯಲ್ಲಿ  ನಾಮಫಲಕ:ಸಾರ್ವಜನಿಕರ ಆಕ್ಷೇಪ

ಮಡಿಕೇರಿ; ಮರಗೋಡುವಿನಿಂದ ಹಾಕತ್ತೂರುಗೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅಳವಡಿಸಲಾಗಿರುವ ನಾಮಫಲಕದ ಬಗ್ಗೆ ಸ್ಥಳೀಯರು, ವಾಹನ ಚಾಲಕರು ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 ಮಳೆಗಾಲ ಹಾಗೂ ರಾತ್ರಿ ವೇಳೆಯಲ್ಲಿ ಈ ನಾಮಫಲಕವು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಸಾಧ್ಯತೆ ಇದ್ದು, ಅಪಘಾತಕ್ಕೂ ಕಾರಣವಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಸಾರ್ವಜನಿಕ ರಸ್ತೆಯ ಬದಿಯಲ್ಲಿ ಇಂತಹ ನಾಮಫಲಕ ಅಳವಡಿಸಲು ಅನುಮತಿ ನೀಡಿದವರು ಯಾರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅನುಮೋದನೆ ಪಡೆಯಲಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸಾರ್ವಜನಿಕರ ಹಾಗೂ ವಾಹನ ಚಾಲಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದುಮರಗೋಡುವಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಆಗ್ರಹಿಸಿದೆ. ಒಂದು ವೇಳೆ ಈ ನಾಮಫಲಕವನ್ನು ತೆರವುಗೊಳಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಆಡಳಿತಕ್ಕೆ ಲಿಖಿತ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.