ಪ್ರಧಾನಮಂತ್ರಿ ಅವರ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ; ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಿಗದಿಯಾಗಿರುವ ಕಾರ್ಯಕ್ರಮ ಪ್ರಗತಿಗೆ ಸೋಮಶೇಖರ್ ಸೂಚನೆ

Jul 13, 2026 - 18:08
 0  111
ಪ್ರಧಾನಮಂತ್ರಿ ಅವರ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ;  ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಿಗದಿಯಾಗಿರುವ ಕಾರ್ಯಕ್ರಮ ಪ್ರಗತಿಗೆ ಸೋಮಶೇಖರ್ ಸೂಚನೆ

ಮಡಿಕೇರಿ ಜು.13:-ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಿಗದಿಯಾಗಿರುವ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. 

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಅವರ 15 ಅಂಶದ ಕಾರ್ಯಕ್ರಮಗಳ ಕುರಿತು ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಶಿಕ್ಷಣ, ಆರೋಗ್ಯ, ಮೂಲ ಸೌಲಭ್ಯ ಸೇರಿದಂತೆ ವಿವಿಧ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಕಾಲದಲ್ಲಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

ಅಲ್ಪಸಂಖ್ಯಾತರಿಗಾಗಿ ಅಂಗನವಾಡಿ, ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿ ಜೊತೆಗೆ ಮೂಲ ಸೌಲಭ್ಯ ಕಲ್ಪಿಸಬೇಕು. ಜೊತೆಗೆ ನಿವೇಶನ ಇಲ್ಲದಿದ್ದಲ್ಲಿ ಕೂಡಲೇ ಮಾಹಿತಿಯ ಪ್ರಸ್ತಾವನೆ ಸಲ್ಲಿಸುವಂತೆ ಸೋಮಶೇಖರ್ ಅವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಹನೀಫ್ ಅವರು ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಿದ್ದು, ಅವುಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಬೇಕು ಎಂದು ಮನವಿ ಮಾಡಿದರು. 

ಎಮ್ಮೆಮಾಡುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಜೊತೆಗೆ ಅಡುಗೆ ಕೋಣೆಯು ಸಹ ಸರಿಯಿಲ್ಲ. ಸುಣ್ಣ ಬಣ್ಣ ಕಂಡು ಎಷ್ಟೋ ವರ್ಷವಾಗಿದೆ ಎಂದು ಸಮಿತಿ ಸದಸ್ಯರೊಬ್ಬರು ಅಸಮಾದಾನ ವ್ಯಕ್ತಪಡಿಸಿದರು. 

ಕಳೆದ ಒಂದು ವರ್ಷದಿಂದಲೂ ಸಹ ಎಮ್ಮೆಮಾಡು ಪ್ರೌಢಶಾಲೆಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡುತ್ತಾ ಬರಲಾಗಿದೆ. ಆದರೆ ಇದುವರೆಗೆ ಸೌಲಭ್ಯಗಳು ತಲುಪಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು. 

ಸರ್ಕಾರ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಸಾಕಷ್ಟು ಕಾರ್ಯಕ್ರಮ ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಕಾರ್ಯಕ್ರಮ ತಲುಪಿಸುವಲ್ಲಿ ಅಧಿಕಾರಿಗಳು ಇನ್ನಷ್ಟು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಖಲೀದ್ ಅವರು ಮನವಿ ಮಾಡಿದರು.   

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಎಮ್ಮೆಮಾಡು ಶಾಲೆ ಅಭಿವೃದ್ಧಿಗೆ ಕೂಡಲೇ ಕ್ರಮವಹಿಸಬೇಕು. ಸಿಎಸ್‍ಆರ್ ನಿಧಿಯಿಂದ ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. 

ಸಮಿತಿ ಸದಸ್ಯರಾದ ಖಾಲೀದ್ ಅವರು ಹಾಕತ್ತೂರು ಶಾಲೆ ಅಭಿವೃದ್ಧಿ, ಕೊಡ್ಲಿಪೇಟೆ ವಸತಿ ಶಾಲೆಗಳಿಗೆ ಮತ್ತಷ್ಟು ಮೂಲ ಸೌಲಭ್ಯ ಕಲ್ಪಿಸಬೇಕಿದೆ ಎಂದು ಕೋರಿದರು.  

ಹಾಕತ್ತೂರು ಬಳಿಯ ಹುಲಿತಾಳ ಶಾಲೆ ಮುಚ್ಚಿದ್ದು, ಆ ಸರ್ಕಾರಿ ಶಾಲೆಯ ಜಾಗನ್ನಾದರೂ ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಮಿತಿ ಸದಸ್ಯರೊಬ್ಬರು ಸಭೆಯ ಗಮನಕ್ಕೆ ತಂದರು. 

ಸ್ಥಳೀಯವಾಗಿ ಯಾವ ಯಾವ ಮೂಲ ಸೌಲಭ್ಯ ಕಲ್ಪಿಸಬೇಕಿದೆ ಎಂದು ಸಮಿತಿ ಸದಸ್ಯರಿಂದ ಮಾಹಿತಿ ಪಡೆದು ಪರಿಹಾರ ಒದಗಿಸಬೇಕು. ಶಿಕ್ಷಣ, ಆರೋಗ್ಯ, ಅಂಗನವಾಡಿ ಮತ್ತಿತರ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು. 

ಕೃಷಿ ಇಲಾಖೆಯಿಂದ ಒದಗಿಸಲಾಗುವ ಕೃಷಿ ಹೊಂಡವನ್ನು ಎಲ್ಲೆಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿಯ ಪಟ್ಟಿ ಒದಗಿಸಬೇಕು. ಇದರಲ್ಲಿ ಅಲ್ಪಸಂಖ್ಯಾತರ ಕುಟುಂಬದವರು ಎಷ್ಟು ಮಂದಿ ಇದ್ದಾರೆ. ಈ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.  

ತೋಟಗಾರಿಕೆ ಇಲಾಖೆ ಮೂಲಕ ಹನಿ ನೀರಾವರಿ, ತಾಳೆ ಬೆಳೆ ಯೋಜನೆಗೆ ಪ್ರೋತ್ಸಾಹ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸಬೇಕು. ಹಾಗೆಯೇ ಪಶುಪಾಲನೆ, ಮೀನುಗಾರಿಕೆ ಇಲಾಖೆ ಮೂಲಕವೂ ಸಹ ಅಗತ್ಯ ಕಾರ್ಯಕ್ರಮ ತಲುಪಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. 

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ ಶಾಲಾ, ಕಾಲೇಜು ಹಾಗೂ ವಿದ್ಯಾರ್ಥಿ ನಿಲಯ ಆರಂಭಕ್ಕೆ ಅವಕಾಶ ಮಾಡಿದೆ. ಇವುಗಳ ಬಗ್ಗೆ ಮಾಹಿತಿ ದೊರೆಯುವಂತಾಗಬೇಕು ಎಂದು ಮತ್ತೊಬ್ಬ ಸಮಿತಿ ಸದಸ್ಯರಾದ ಇಸ್ಮಾಯಿಲ್ ಅವರು ಹೇಳಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಉದ್ಯೋಗ ಮೇಳ ಏರ್ಪಡಿಸಿ ಉದ್ಯೋಗ ಕಲ್ಪಿಸುವಂತಾಗಬೇಕು. ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ಏರ್ಪಡಿಸಿ ಉದ್ಯೋಗ ಕಲ್ಪಿಸಲು ಮುಂದಾಗುವಂತೆ ಉದ್ಯೋಗ ವಿನಿಮಯ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯ ಹಾಗೂ ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಪೂರೈಸಬೇಕು. ಜೊತೆಗೆ ಮೂಲ ಸೌಲಭ್ಯವನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಶಾಲಾ-ಕಾಲೇಜಿಗೆ ಹತ್ತಿರ ವಿರುವ ಕಡೆ ಬಾಡಿಗೆ ವಿದ್ಯಾರ್ಥಿ ನಿಲಯ ಕಟ್ಟಡ ಗುರುತಿಸಬೇಕು ಎಂದರು. 

‘ರಾಜ್ಯದಲ್ಲಿ ಸರ್ಕಾರ ಸುಮಾರು 70 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಕೊಡಿಸಲು ಮುಂದಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗೆ ಜಿಲ್ಲಾಧಿಕಾರಿ ಸೋಮಶೇಖರ್ ಅವರು ನಿರ್ದೇಶನ ನೀಡಿದರು.’

ವಿವಿಧ ಇಲಾಖೆಗಳ ಕಾರ್ಯಕ್ರಮ ಸಂಬಂಧ ಎಲ್ಲಾ ಇಲಾಖೆಗಳ ಜೊತೆಗೂಡಿ ಒಂದು ಕಿರುಪುಸ್ತಕ ಹೊರ ತರುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಸದಸ್ಯರಾದ ಅಬ್ದುಲ್ ನಿಯಾಸ್, ಇಸ್ಮಾಯಿಲ್, ಖಾಲೀದ್ ಹಾಜಿ, ಸೂಫಿಯಾನ್ ಅವರು ಬ್ಯಾಂಕ್‍ಗಳ ಮೂಲಕ ಸಕಾಲದಲ್ಲಿ ಅಲ್ಪಸಂಖ್ಯಾತರಿಗೆ ಸಾಲ ಸೌಲಭ್ಯ ಕಲ್ಪಿಸಬೇಕು. ಇದರಿಂದ ಸಣ್ಣ ಪುಟ್ಟ ವ್ಯಾಪಾರಕ್ಕೆ ಸಹಕಾರಿಯಾಗಲಿದೆ. ಹಾಗೆಯೇ ವಿವಿಧ ಇಲಾಖೆಗಳ ಪ್ರಗತಿ ಸಕಾಲದಲ್ಲಿ ಸಾಧಿಸಬೇಕು. ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ದೊರೆಯುವಂತಾಗಬೇಕು. ಅಲ್ಪಸಂಖ್ಯಾತರು ಸಹ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಲು ಸರ್ಕಾರದ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸಮಿತಿ ಸದಸ್ಯರು ಕೋರಿದರು. 

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್, ಕೌಶಲ್ಯಾಭಿವೃದ್ಧಿ, ರಾಜ್ಯ ಹಣಕಾಸು ಸಂಸ್ಥೆ, ನಗರಾಭಿವೃದ್ಧಿ, ಕೈಗಾರಿಕೆ, ಸಹಕಾರ, ಹೀಗೆ ವಿವಿಧ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿನ ಕಾರ್ಯಕ್ರಮಗಳನ್ನು ಮಾಹಿತಿ ನೀಡುವುದರ ಜೊತೆಗೆ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಲಹೆ ಮಾಡಿದರು. 

ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿರಿಯ ಪೊಲೀಸ್ ಅಧಿಕಾರಿ ಐ.ಪಿ.ಮೇದಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಉದ್ಯೋಗ ವಿನಿಮಾಯಾಧಿಕಾರಿ ಮಂಜುನಾಥ್, ಸ್ವಚ್ಛ ಭಾರತ ಅಭಿಯಾನ ನೋಡಲ್ ಅಧಿಕಾರಿ ಜೀವನ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಎಂಜಿನಿಯರ್ ಸೂರಕೋಡ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಸಚಿನ್, ವಕ್ಫ್ ಅಧಿಕಾರಿ ಇರ್ಫಾನ್, ಇತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0