ಎಕ್ಸಾಂಗೆ ಹೆದರಿ ಮನೆ ಬಿಟ್ಟ ಪಿಯುಸಿ ವಿದ್ಯಾರ್ಥಿನಿಯರು

Mar 6, 2026 - 00:08
 0  1.7k
ಎಕ್ಸಾಂಗೆ  ಹೆದರಿ ಮನೆ ಬಿಟ್ಟ ಪಿಯುಸಿ ವಿದ್ಯಾರ್ಥಿನಿಯರು

ಬೆಂಗಳೂರು, ಮಾರ್ಚ್ 04: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ (PUC Exams) ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ಓದುತ್ತಿದ್ದ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಹಿಂದೆಯೂ ಪರೀಕ್ಷೆ ವೇಳೆ ಕೈ ಕತ್ತರಿಸಿಕೊಂಡಿದ್ದ ವಿದ್ಯಾರ್ಥಿನಿ;

ಪರೀಕ್ಷೆ ಸಮೀಪಿಸುತ್ತಿದ್ದ ಹಿನ್ನೆಲೆ ಎಕ್ಸಾಮ್ ಭಯದಿಂದ ಸೀನಿಯರ್ ವಿದ್ಯಾರ್ಥಿನಿ ತನ್ನ ಜೂನಿಯರ್ ಸ್ನೇಹಿತೆಯನ್ನು ಕರೆದುಕೊಂಡು ಮನೆ ಬಿಟ್ಟು ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಪರೀಕ್ಷೆ ತಪ್ಪಿಸಿಕೊಳ್ಳಲು ತನಿಷ್ಕಾ ತನ್ನ ಕೈ ಕತ್ತರಿಸಿಕೊಂಡಿದ್ದಳೆಂದು ತಿಳಿದುಬಂದಿದೆ. ಹೀಗಾಗಿ ಈ ಬಾರಿ ಎಕ್ಸಾಮ್ ಬರೆಯಲು ಇಚ್ಚಿಸದೆ ಈ ನಿರ್ಧಾರ ಕೈಗೊಂಡಿರಬಹುದೆಂದು ಕುಟುಂಬಸ್ಥರು ಮತ್ತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಒಂದು ವಾರದ ಗಡುವು ನೀಡಿರುವ ಹೈ ಕೋರ್ಟ್

ಕಳೆದ ಕೆಲ ದಿನಗಳ ಹಿಂದೆ ಸ್ನೇಹಿತರಿಗೆ ಕರೆ ಮಾಡಿ ಮಲೆ ಮಹಾದೇಶ್ವರ ಬೆಟ್ಟದಲ್ಲಿದ್ದೇವೆ ಎಂದು ತಿಳಿದಿದ್ದರಂತೆ. ಒಂದು ವಾರದಲ್ಲಿ ಮತ್ತೆ ಸಂಪರ್ಕಿಸುವುದಾಗಿಯೂ ಹೇಳಿದ್ದರು ಎನ್ನಲಾಗಿದೆ. ಆದರೆ ಅದಾದ ಬಳಿಕ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಈ ಸಂಬಂಧ ಪೊಲೀಸರು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹೈ ಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಒಂದು ವಾರದ ಗಡುವು ನೀಡಿದೆ ಎಂದು ತಿಳಿದುಬಂದಿದೆ. ಒಂದು ತಿಂಗಳಿಂದ ಮಕ್ಕಳಿಗಾಗಿ ಕಣ್ಣೀರಿಡುತ್ತಿರುವ ಕುಟುಂಬಸ್ಥರು, ಸುರಕ್ಷಿತವಾಗಿ ಮರಳಿ ಬರುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

What's Your Reaction?

Like Like 1
Dislike Dislike 2
Love Love 1
Funny Funny 3
Angry Angry 0
Sad Sad 3
Wow Wow 0