ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಪೂರ್ವಭಾವಿ ಸಭೆ

ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಪೂರ್ವಭಾವಿ ಸಭೆ

ಮಡಿಕೇರಿ:ಇದೇ ಆಗಸ್ಟ್, 15 ರಂದು ಸಂಭ್ರಮ ಮತ್ತು ಸಡಗರದೊಂದಿಗೆ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರತಿ ವರ್ಷವೂ ಆಚರಿಸುವಂತೆ ನಗರದ ಕೋಟೆ ಆವರಣದಲ್ಲಿ ಈ ಬಾರಿಯು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಕಳೆದ ಬಾರಿಯಂತೆ ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತ್ತು ಉಪಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಆಯಾಯ ಉಪ ಸಮಿತಿಗಳು ತಮ್ಮ ಕೆಲಸಗಳನ್ನು ಚಾಚು ತಪ್ಪದೆ ನಿರ್ವಹಿಸುವಂತೆ ತಿಳಿಸಿದರು. ಧ್ವಜಾರೋಹಣ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವುದು. ಹಾಗೆಯೇ ವೇದಿಕೆ ಸಮಿತಿಯವರು ವಾಟರ್ ಪ್ರೂಫ್ ಶಾಮಿಯಾನ ನಿರ್ಮಾಣ ಮಾಡುವಂತೆ ಮತ್ತು ಉಪಹಾರ ಸಮಿತಿಯವರು ವಿದ್ಯಾರ್ಥಿಗಳಿಗೆ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಹಾಗೆಯೇ ನೀಟ್, ಐಎಟಿ, ಸಿಇಟಿ, ಕ್ರೀಡೆ, ಕೃಷಿ ಮತ್ತಿತರ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯಿಂದ ಸಾಧನೆ ಮಾಡಿದವರಿಗೆ ಗೌರವವಿಸುವುದಾಗಿ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

 ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಪ್ರಶಸ್ತಿ ಹಾಗೂ ಯಾವ ಯಾವ ಕ್ಷೇತ್ರದಲ್ಲಿ ಅವರು ಸಾಧನೆ ಮಾಡಿದ್ದಾರೆ ಎಂಬ ವಿಷಯವನ್ನು ಆಗಸ್ಟ್ 05 ರೊಳಗಾಗಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದರು. ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಲ್ಲಾ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.