ಕುಂಬೂರು ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ಧರಣಿ
ಸೋಮವಾರಪೇಟೆ:ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 8 ನೇ ದಿನಕ್ಕೆ ಕಾಲಿಟ್ಟಿದೆ.
8ನೇ ದಿನವೂ ಯಾವುದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ನೇತೃತ್ವದಲ್ಲಿ ಪ್ರಮುಖರು ಮಡಿಕೇರಿಯಲ್ಲಿ ಉಪವಿಭಾಧಿಕಾರಿ ಅವರನ್ನು ಭೇಟಿಯಾಗಿ ಪೈಸಾರಿ ಜಾಗದ ಪಟ್ಟಿ ಹಾಗು ಸರ್ಕಾರಿ ಜಾಗ ಒತ್ತುವರಿಯ ಬಗ್ಗೆ ಮಾಹಿತಿ ನೀಡಿದರು.
ಶನಿವಾರ ಸ್ಥಳಕ್ಕೆ ತಹಸೀಲ್ದಾರ್ ಅವರನ್ನು ಕಳುಹಿಸಿ, ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮೊಣ್ಣಪ್ಪ ಹೇಳಿದರು. ಜಿಲ್ಲಾಡಳಿತ ಬಡ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
