ನ್ಯಾಯಾಧೀಶರ ಮೇಲೆ ಶೂ ಎಸೆದ ಪ್ರಕರಣವನ್ನು ಖಂಡಿಸಿ ಪ್ರಗತಿಪರ ಚಿಂತಕರು, ದಲಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ

ನ್ಯಾಯಾಧೀಶರ ಮೇಲೆ ಶೂ ಎಸೆದ ಪ್ರಕರಣವನ್ನು ಖಂಡಿಸಿ ಪ್ರಗತಿಪರ ಚಿಂತಕರು, ದಲಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ: ನ್ಯಾಯಾಧೀಶರ ಮೇಲೆ ಶೂ ಎಸೆದ ಪ್ರಕರಣವನ್ನು ಖಂಡಿಸಿ ಪ್ರಗತಿಪರ ಚಿಂತಕರ, ದಲಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಡಿಕೇರಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಅಂಬೇಡ್ಕರ್ ವಿಚಾರವಾದಿ ಸಿ.ಜೆ.ಮೋಹನ್ ಮೌರ್ಯ, ಸುಪ್ರಿಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಅತ್ಯಂತ ತೀವ್ರವಾಗಿ ಕೊಡಗಿನ ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆಗಳ ಒಕ್ಕೂಟ, ಅಹಿಂದ ಒಕ್ಕೂಟ ಖಂಡಿಸುತ್ತದೆ. ಇದೊಂದು ಸಂವಿಧಾನ ವಿರೋಧಿ ಕೃತ್ಯವಾಗಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿದ್ದಾರೆ.

ಈ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ಎಂಬಾತನ ಮೇಲೇ ದೇಶ ದ್ರೋಹದ ಪ್ರಕರಣವನ್ನು ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ ಅವರು, ಪ್ರಜಾಪ್ರಭುತ್ವ, ಸಂವಿಂದಾನ, ಕಾನೂನು, ಸರ್ವಜನ ಹಿತರಕ್ಷಣೆಯಲ್ಲಿ ಪ್ರಮುಖವಾಗಿರುವ ಈ ದೇಶದಲ್ಲಿ ಇಂತಹ ಘಟನೆ ನಡೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು. ಈ ಕೃತ್ಯವನ್ನು ಸಮರ್ತನೆ ಮಾಡಿಕೊಂಡ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಅವರನ್ನು ಈ ಕೂಡಲೇ ರಾಜ್ಯ ಬಿಜೆಪಿ ಅಧ್ಯಕ್ಷರು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಒತ್ತಾಯಿಸಿದರು. ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ರವಾನಿಸಲಾಯಿತು.

 ಪ್ರತಿಭಟನೆಯಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಸಂಘ ಪರಿಶಿಷ್ಠ ಘಟಕದ ಗೌರವ ಅಧ್ಯಕ್ಷ ವಿನಯ್, ದಲಿತ ಸಂಘರ್ಷ ಸಮಿತಿ ಸಂಚಾಲಕ ಎಚ್.ಎಲ್.ದಿವಾಕರ್, ಪ್ರಗತಿಪರ ಚಿಂತಕರಾದ ಮುನೀರ್ ಅಹಮ್ಮದ್, ಟಿ.ಪಿ.ರಮೇಶ್ ಸೇರಿದಂತೆ ಪ್ರಗತಿಪರ ಚಿಂತಕರ, ದಲಿಪರ ಸಂಘಟನೆಗಳ ಒಕ್ಕೂಟ ಸದಸ್ಯರು, ಪದಾಧಿಕಾರಿಗಳಿದ್ದರು.