ಕಾರ್ಮಿಕ ವಿರೋಧಿ ನೀತಿ ಹಿಂಪಡೆಯಲು ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ
ಮಡಿಕೇರಿ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಪ್ರಮುಖರು ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಶ್ರಮ ಶಕ್ತಿ ನೀತಿ 2025 ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಪ್ರದಾನ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಕಾರ್ಮಿಕ ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಮನವಿಗೆ ಸ್ಪಂದಿಸದೇ ಭಾರತೀಯ ಸಂವಿಧಾನದ ಮೂಲಭೂತ ಮೌಲ್ಯಗಳಿಗೆ ವ್ಯತಿರಿಕ್ತವಾಗಿರುವ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲಾಗುತ್ತಿದೆ.
ಇದರಿಂದ ಕಾರ್ಮಿಕ ಇಲಾಖೆ ತನ್ನೆಲ್ಲ ಅಧಿಕಾರ ಮತ್ತು ಬಲವನ್ನು ಕಳೆದುಕೊಳ್ಳಲಿದೆ. ಆದ್ದರಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಶ್ರಮ ಶಕ್ತಿ ನೀತಿ ೨೦೨೫ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಅಧ್ಯಕ್ಷ ಎ.ಸಿ.ಸಾಬು, ಖಜಾಂಜಿ ಎನ್.ಡಿ.ಕುಟ್ಟಪ್ಪನ್ ಸೇರಿದಂತೆ ಸಿಐಟಿಯು ಪದಾಧಿಕಾರಿಗಳು, ರೈತ ಮುಖಂಡರು, ಕಾರ್ಮಿಕ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.